Sunday, 31 March 2013

ಬನ್ನಿ ಜೊತೆಯಾಗೋಣ!

ಆತ್ಮೀಯ ಸದಸ್ಯರೇ,

ಕನ್ನಡ ಬ್ಲಾಗ್ ಮಾರ್ಚ್ ತಿಂಗಳ ಸಂಪಾದಕೀಯ ಅನಿವಾರ್ಯವಾಗಿ ಕೊಂಚ ತಡವಾಗಿ ಪ್ರಕಟವಾಗುತ್ತಿದೆ. ಅತಿ ಬೇಸರದ ವಿಷಯವೊಂದನ್ನು ಮತ್ತೆ ನಾವು ಪ್ರಸ್ತಾಪಿಸಲೇ ಬೇಕಾದ ಸಂದರ್ಭ. ೨೦೧೦ರ ಸರಿ ಸುಮಾರಿನಲ್ಲಿ ಕನ್ನಡ ಬ್ಲಾಗ್ ಎಂಬ ಈ ಗುಂಪು ತನ್ನ ಮೊಗ್ಗರಳಿಸುತ್ತಿರುವಾಗ ಅದನ್ನು ಪೋಷಿಸಿ, ಬೆಳೆಸುವ ಮಹದಾಸೆ ಹೊತ್ತು, ನಿರ್ವಾಹಕರೆಲ್ಲರಿಗೆ ಬೆನ್ನೆಲುಬಾಗಿ ನಿಂತು, ಮನದಾಳದ ಅರುಹುಗಳ ಮೂಲಕ ಬರಹಗಾರರಿಗೆ ಮಾರ್ಗದರ್ಶನ, ಸ್ಪೂರ್ತಿಯಾದಂತವರು ರವಿ ಮೂರ್ನಾಡ್. ಅಗಲಿದ ಆ ಕನ್ನಡ ಕುವರರಿಗೆ ಕುಸುಮಾಂಜಲಿಯನ್ನು ಅರ್ಪಿಸುತ್ತಾ ಈ ಸಂಪಾದಕೀಯವನ್ನು ನಿಮ್ಮ ಮುಂದಿಡುತ್ತಿದ್ದೇವೆ. ಅವರು ಕನ್ನಡ ಬ್ಲಾಗ್ ಬಗ್ಗೆ ಹೊತ್ತ ಕನಸುಗಳನ್ನು ನನಸುಗೊಳಿಸುವ ನಿಟ್ಟಿನಲ್ಲಿ ನಮ್ಮ ಹೆಜ್ಜೆಗಳನ್ನಿಡುವ ಮುಖಾಂತರ ಆ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತಿದ್ದೇವೆ.

ಅಂದು ಮಾರ್ಚ್ ಹದಿನೇಳು ಭಾನುವಾರ. ಕನ್ನಡದ ಭಗವದ್ಗೀತೆಯೆಂದೇ ಪ್ರಸಿದ್ಧವಾದ 'ಮಂಕುತಿಮ್ಮನ ಕಗ್ಗ'ವನು ಸಾಹಿತ್ಯ ಲೋಕಕ್ಕಿತ್ತ ಧೀಮಂತ ದೇವನಹಳ್ಳಿ ವೆಂಕಟರಮಣಪ್ಪ ಗುಂಡಪ್ಪನವರ ೧೨೬ನೇ ಜನ್ಮದಿನಾಚರಣೆಯ ಸುದಿನ. ವರುಷದ ಹಿಂದೆ ಕಂಡ ಕನಸೊಂದು ನನಸಾಗಿ ನಿಂತು ಅಭೂತಪೂರ್ವ ಕ್ಷಣವೊಂದು ಸಾರ್ಥಕ್ಯವನ್ನು ಕಂಡದ್ದು ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ. ತನ್ನ ಜೀವನದನುಭವಗಳನ್ನು ಡಿ.ವಿ.ಜಿ ಯವರ ಪ್ರತೀ ಮುಕ್ತಕಕ್ಕೂ ಅಳವಡಿಸಿಕೊಂಡು, ಆ ಮುಕ್ತಕಗಳ ವ್ಯಾಖ್ಯಾನ ಮಾಡಿ ನಮಗೆ ಉಣಬಡಿಸಿದವರು ಶ್ರೀಯುತ ರವಿ ತಿರುಮಲೈ. ಇದೇ ವ್ಯಾಖ್ಯಾನ ಇದೀಗ ಕಗ್ಗರಸಧಾರೆಯೆಂಬ ಮೊದಲ ಸಂಪುಟ.

ನಟರತ್ನಾಕರ ಮಾಸ್ಟರ್ ಹಿರಣ್ಣಯ್ಯ, ಸನ್ಮಾನ್ಯ ವಿಶುಕುಮಾರ್, ಚಂದ್ರಮೌಳಿ, ಸುಬ್ಬಕೃಷ್ಣ, ಪಿ ಎಸ್ ರಾಜ್ ಗೋಪಾಲ್, ಪ್ರೊ.ಎಚ್ ಎಸ್ ಲಕ್ಷ್ಮೀನಾರಾಯಣ ಭಟ್ ಇವರ ಉಪಸ್ತಿತಿಯ ಮೆರುಗಿತ್ತು ಈ ಕಾರ್ಯಕ್ರಮದಲ್ಲಿ. ಡಿ.ವಿ.ಜಿಯವರ ಜೀವನದ ಮೇಲೆ ಬೆಳಕು ಚೆಲ್ಲುವ ಕಿರುಚಿತ್ರದ ಮುಖೇನ ಗಮನಸೆಳೆದ ಈ ವಿನೂತನ ಕಾರ್ಯಕ್ರಮದ ಮುಖಾಂತರ ಕನ್ನಡ ಬ್ಲಾಗ್ ಫೇಸ್ಬುಕ್ ಪ್ರಪಂಚದಿಂದ ತನ್ನಡಿಯಿಟ್ಟದ್ದು ಹೊರಜಗತ್ತಿಗೆ.ಕಾರ್ಯಕ್ರಮದ ರೂವಾರಿಗಳ ಕಾರ್ಯದಕ್ಷತೆಗೆ ನಮ್ಮ ನಮನ ತನ್ಮೂಲಕ. ವೇದಿಕೆಯ ಮೇಲೆ ಉಪಸ್ಥಿತರಿದ್ದ ಅನುಭವಿಗಳ ಹಿತನುಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಹೃದಯರನ್ನೂ ರೋಮಾಂಚನಗೊಳಿಸಿತ್ತು ಅನ್ನುವುದಕ್ಕೆ ಬಂದ ಮೆಚ್ಚುಗೆಗಳೇ ಸಾಕ್ಷಿಯೆಂದು ಕೊಳ್ಳುತ್ತೇವೆ.

ಏನೇ ಇರಲಿ, ಕಾರ್ಯಕ್ರಮವೊಂದು ಉತ್ತಮರೀತಿಯಲಿ ಸಂಘಟಿತವಾಗಬೇಕಾದರೆ ಅದರ ಹಿಂದೆ ಕಾರ್ಯನಿರ್ವಹಿಸುವ ನಿಸ್ವಾರ್ಥ ಮನಸುಗಳು ಪ್ರಮುಖ ಪಾತ್ರವಹಿಸುತ್ತವೆ. ಈ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಅತ್ಯದ್ಭುತ ಕಾರ್ಯಕ್ರಮದ ರೂವಾರಿಯಾದವರು ಎಮ್. ಎಸ್ ಪ್ರಸಾದ್. ಅವರನ್ನು ಅಭಿನಂದಿಸದಿದ್ದರೆ ಬಹುಷಃ ನಮ್ಮೀ ಸಂಪಾದಕೀಯಕ್ಕೆ ಮೆರುಗು ಸಿಗಲಾರದು. ಪ್ರತಿಯೊಬ್ಬರ ಹೆಸರನ್ನೂ ಪ್ರಸ್ತುತ ಪ್ರಸ್ತಾಪಿಸಲಾಗದಿದ್ದರೂ, ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣೀಭೂತರಾದ ಪ್ರತಿಯೋರ್ವರಿಗೂ ಕನ್ನಡ ಬ್ಲಾಗ್ ತಂಡ ಚಿರಋಣಿ.

ಹಾಗಂಥ ಈ ಕಾರ್ಯಕ್ರಮವನ್ನು ಕೇವಲ ಕಗ್ಗರಸಧಾರೆಯ ಮಟ್ಟಿಗೆ ಸೀಮಿತಗೊಳಿಸಲಾಗುತ್ತಿಲ್ಲ ಮಿತ್ರರೇ. ಕನ್ನಡ ಬ್ಲಾಗ್ ಕೇವಲ ಒಂದು ಗುಂಪಾಗದೇ, ಕೇವಲ ಸಾಹಿತ್ಯಕ್ಕಷ್ಟೇ ಮೀಸಲಾಗಿದೆಯೆಂದರೆ ಅದು ತಪ್ಪು, ಮುಂದಿನ ದಿನಗಳಲ್ಲಿ ಕಲೆ, ಸಂಸ್ಕೃತಿ, ಸಾಮಾಜಿಕ ಕಳಕಳಿಯನ್ನು ಹೊತ್ತು ತರುವ ಕಾರ್ಯಕ್ರಮಗಳ ಇಂಗಿತವನ್ನೂ ಹೊಂದಿದೆ. ತನ್ನ ಕಾರ್ಯಕ್ಷೇತ್ರದ ವ್ಯಾಪಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಹಲವು ಸದಸ್ಯರಿಂದ ಬಂದ ಮನವಿ, ಪ್ರೋತ್ಸಾಹವನ್ನು ಸದ್ಯದಲ್ಲೇ ಕಾರ್ಯಗತಗೊಳಿಸುವ ಇರಾದೆಯೂ ಕೂಡ. ಇದು ಕೇವಲ ನಿರ್ವಾಹಕರು, ಕನ್ನಡ ಬ್ಲಾಗ್ ಸದಸ್ಯರಲ್ಲದೇ ಅನೇಕ ಸಹೃದಯರ ಸಲಹೆ, ಸೂಚನೆಯ ಮೇರೆಗೆ ಮುಂದುವರಿಯುತ್ತಿದ್ದೇವೆ. ಕನಸುಗಳನ್ನು ನನಸುಗೊಳಿಸುವ ದಿಟ್ಟ ಹೆಜ್ಜೆ ನಮ್ಮ-ನಿಮ್ಮೆಲ್ಲರದು.

ಆ ಕನಸುಗಳನ್ನು ನನಸುಗೊಳಿಸುವ ಪ್ರಪ್ರಥಮ ಹೆಜ್ಜೆಯಾಗಿ ಕಗ್ಗರಸಧಾರೆಯಂಥ ಕಾರ್ಯಕ್ರಮಗಳ ಆಯೋಜನೆ. ಪುಸ್ತಕ ಬಿಡುಗಡೆ, ಸಂಗೀತ ಕಾರ್ಯಕ್ರಮ, ಕಲೋಪಾಸನೆಯಂಥ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮುಖೇನ ನಮ್ಮ ತರುಣ ಹೃದಯಗಳನ್ನು ಸೆಳೆಯುವ ಪ್ರಯತ್ನ . ಎತ್ತೆತ್ತಲೋ ಸಾಗುತ್ತಿರುವ ನಮ್ಮ ಯುವ ಮನಸ್ಸುಗಳ ದಾರಿಯಲ್ಲಿ ಈ ಸೆಳೆತಗಳ ಮೂಲಕ ನಮ್ಮ ಕಲೆ, ಸಂಸ್ಕೃತಿಗೆ ಅಳಿಲು ಸೇವೆಗೈವ ತವಕ.

ಪ್ರಿಯ ಸದಸ್ಯರೇ, ಇದು ನಿಮ್ಮದೇ ಕಾರ್ಯಕ್ರಮ. ನಿಮ್ಮ ಕೃತಿಗಳ ಬಿಡುಗಡೆಗೂ ನಾವಿದ್ದೇವೆ. ನಿಮ್ಮೊಳಗಿನ ಕಲೆ,ಸಾಹಿತ್ಯ, ಸಂಗೀತದೊಲವಿಗೂ ನಾವು ಜೊತೆಗಿರುತ್ತೇವೆ. ನೀವು ನಾವಾಗುತ್ತೇವೆ. ನಿಮ್ಮ ಕಾರ್ಯಕ್ರಮ ನಮ್ಮದಾಗಲಿ. ನಮ್ಮ ನಿಮ್ಮೆಲ್ಲರದಾಗಲಿ. ಬನ್ನಿ ಕೈ ಜೋಡಿಸೋಣ. ಡಿ.ವಿ.ಜಿ, ಜೀಪಿ ರಾಜರತ್ನಂ, ಕುವೆಂಪು, ಬೇಂದ್ರೆ, ಪು.ತಿ.ನ, ಕೆ.ಎಸ್.ನ ಒಬ್ಬಿಬ್ಬರಲ್ಲ, ಎಲ್ಲರನೂ ಮತ್ತೆ ಕರೆತರೋಣ. ಅವರೊಳಗಿನ ತುಡಿತವನು ಮತ್ತೆ ಅರಿಯೋಣ ಬನ್ನಿ, ಮೆರೆಯೋಣ ಬನ್ನಿ.

ಆತ್ಮೀಯತೆಯಿಂದ,
ಪುಷ್ಪರಾಜ್ ಚೌಟ
ಕನ್ನಡ ಬ್ಲಾಗ್ ನಿರ್ವಾಹಕ ತಂಡ

Thursday, 28 February 2013

ಅರುಹುಗಳ ಅರಿತು ಅರಗಿಸಿಕೊಂಡು ಬರೆಯೋಣ ಬನ್ನಿ!


ಕಾಲ ಬದಲಾಗಿದೆ ನಿಜ. ನವೋದಯ, ನವ್ಯ, ನವ್ಯೋತ್ತರ, ಪ್ರಗತಿಶೀಲ, ಬಂಡಾಯ ಹೀಗೆ ನಿನ್ನೆ ಮೊನ್ನೆ ಇದ್ದಂತೆ ಇಂದಿಲ್ಲ ಈ ಸಾಹಿತ್ಯ ಯುಗ. ನಾಳೆ ಮತ್ತೊಂದು ಹೊಸ ಪ್ರಕಾರಕ್ಕೂ ಅಡಿಗಲ್ಲಿಡಲೂಬಹುದು. ಕಾಲ ಬದಲಾದಂತೆ ಬದಲಾವಣೆಯ ಗಾಳಿ ಬೀಸುವುದು ಅನಿವಾರ್ಯ. ನಿಂತ ನೀರಲ್ಲ ಈ ಸಾಹಿತ್ಯಕೃಷಿ. ಹರಿವ ನದಿಯಂತೆ ಅನುದಿನವೂ ಹೊಸಹೊಸ ಹರಿವನ್ನು ಈ ಸಾಹಿತ್ಯಕಡಲಿನ ಒಡಲಿಗೆ ಹರಿಯಗೊಡುತ್ತಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ಕಾರಣೀಭೂತರು ನಮ್ಮ ಬರಹಗಾರ ಬಳಗ. ಕಾಲ ಬದಲಾದಂತೆ ಪ್ರಾಯಃ ಬರಹಗಾರರಿಗೇನೂ ಕೊರತೆಯಾದಂತಿಲ್ಲ. ಬರಹವನ್ನೇ ವೃತ್ತಿ ಮಾಡಿಕೊಂಡವರು ಹಲವರಾದರೆ, ಇನ್ನೂ ಪ್ರವೃತ್ತಿಯಾಗಿ ಮಾಡಿಕೊಂಡವರದು ಮತ್ತೊಂದು ಬಳಗ. ಈ ಎರಡೂ ಪಂಗಡಗಳು ಬರಹಕ್ಷೇತ್ರಕ್ಕೆ ಅಪಾರವಾದ ಅಷ್ಟೇ ಅಪೂರ್ವವಾದ ಕೊಡುಗೆಗಳನ್ನಿತ್ತದ್ದು ದಿಟ.

ಈ ಉದಾರ ಕೊಡುಗೆಗಳ ಹಿಂದಿನ ಬೆಳಕು ಬರಹಗಾರರೆನ್ನುವುದು ನಿಜ. ಆದರೆ ಕೇವಲ ಬರಹಗಾರ ತನ್ನ ಕೊಡುಗೆಗಳನ್ನು ಕೊಟ್ಟು ಸುಮ್ಮನೇ ಕೂತರೆ ಅದು ಬೆಳಕಿಗೆ ಬರುವುದಾದರೂ ಹೇಗೆ? ತನ್ನ ಅಪೂರ್ವತನವನ್ನು, ಅದರೊಳಗಿನ ಸುಗಂಧವನ್ನು ಹೊರಸೂಸುವುದಾದರೂ ಹೇಗೆ? ಆ ಸುಗಂಧವನ್ನು ಹೀರಲು ಬರುವ ದುಂಬಿ ಓದುಗ ಮಹಾಶಯ. ಈ ಓದುಗ ಮಹಾಶಯರನ್ನು ಸೃಷ್ಟಿಸುವುದಾದರೂ ಹೇಗೆ?ಬರಹಗಾರ ತನ್ನ ಬರಹಗಳನ್ನು ಪ್ರಕಟಿಸುವಾಗ ಆ ಬರಹಕ್ಕೆ ಓದುಗರಿರುತ್ತಾರೆ ಎನ್ನುವ ಆಶಯವನಿಟ್ಟುಕೊಂಡೇ ಪ್ರಕಟಿಸುತ್ತಾನೆ. ಹೌದು. ಯಾವುದೇ ಬರಹಕ್ಕಾದರೂ ಓದುಗನಿರಲೇಬೇಕು. ಅವನಿಲ್ಲದಿದ್ದರೆ ಬರಹದ ಉದ್ದೇಶ ಸಾರ್ಥಕವಾಗದು. ಮೂಲಭೂತವಾಗಿ ಪ್ರತಿಯೊಬ್ಬ ಬರಹಗಾರನ ಮನದಲ್ಲಿ ಮೂಡಬಹುದಾದ ಪ್ರಶ್ನೆ "ಓದುಗನ ಸೃಷ್ಟಿ ಹೇಗೆ" ಅನ್ನುವುದು. ಈ ಅಂಶಕ್ಕೆ ಯಾವ ಲೇಖಕನೂ ಹೊರತಾಗಿರಲಾರ, ಅದಂತೂ ಸತ್ಯ. ಆದರೆ ಓದುಗ ಪ್ರಪಂಚದ ಸೃಷ್ಟಿ ಸಾಧ್ಯವೇ? ಹೇಗೆ ಎನ್ನುವ ಪ್ರಶ್ನಾರ್ಥಕ ಚಿಹ್ನೆಗೂ ಉತ್ತರವಿರದಿರದು. ಪ್ರತಿಯೊಬ್ಬ ಲೇಖಕನು ತನ್ನ ಬರಹಗಳ ಮೂಲಕ ಸೆಳೆದು ತನ್ನದೇ ಆದ ಓದುಗ ಪ್ರಪಂಚವನ್ನು ಸೃಷ್ಟಿಸಿಕೊಳ್ಳುವ ಕಾತರ ಹೊಂದಿರುತ್ತಾನೆ. ಬಹುಷಃ ಈ ಪ್ರಕ್ರಿಯೆಗೆ ಆತ ತನ್ನ ಬರಹಗಳನ್ನು ಮಾರಬೇಕಾದ ಸನ್ನಿವೇಶ ಬಂದರೂ ಅಚ್ಚರಿಯಿಲ್ಲ. ಇಲ್ಲಿ ಮಾರಾಟ ಪದವೆನ್ನುವುದು ಅದು ದುಡ್ಡಿಗೆ ಕೊಂಡುಕೊಳ್ಳು ಎಂಬರ್ಥದಲ್ಲಿ ಇಲ್ಲ. ಹೊಸಬರಹಗಾರನಾಗಿ ತಾನು ಅರಳುವ ಸಮಯದಲ್ಲಿ ಆತ ಬರಹದ ಘಮವನ್ನು ಬಿತ್ತಲೇ ಬೇಕಾಗುತ್ತದೆ. ತನ್ಮೂಲಕ ಬರಹಕ್ಕೆ ಓದುಗನನ್ನು ಎಳೆದು ತರಬೇಕಾದ. ಸಕಲ ಸಾಹಸವನ್ನು ಮಾಡಲೇಬೇಕಾಗುತ್ತದೆ. ಈಗಾಗಲೇ ಬರಹ-ಮಾರುಕಟ್ಟೆಯಲ್ಲಿ ನೆಲೆಯೂರಿರುವ ಅತಿರಥ ಮಹಾರಥರ ಎದುರಿಗೆ ತನ್ನ ಬರಹವನ್ನು ವಾಣಿಜ್ಯಕರಣಗೊಳಿಸಬೇಕಾದ ಸಂದರ್ಭವೂ ಎದುರಾದರೆ ಅದು ಅಚ್ಚರಿಯೇನಲ್ಲ.

ಮೇಲೆ ಉಲ್ಲೇಖಿಸಿದಂತೆ, ವಾಣಿಜ್ಯಕರಣಗೊಳಿಸುವ ಉದ್ದೇಶದಿಂದಲೇ ಬರಹಗಾರ ಸನ್ನದ್ಧನಾಗಿ ನಿಂತು ಪ್ರತಿಯೊಬ್ಬ ಓದುಗರನ್ನೂ ಆಕರ್ಷಿಸುವ ಆತುರಕ್ಕೊಳಗಾದರೆ ಕಷ್ಟ. ಮತ್ತದು ಸರಿಯೂ ಅಲ್ಲ. ಆಯಾಯ ಬರಹಕ್ಕೆ ಆಯಾಯ ಓದುಗರಿರುತ್ತಾರೆ ಎನ್ನುವ ಸತ್ಯ ಆರಿಯಬೇಕಾದದ್ದು ಬರೆಯುವವನ ಧರ್ಮ. ಒಬ್ಬರಿಗೊಂದು ರುಚಿಸಿದರೆ, ಇನ್ನೊಬ್ಬರಿಗೊಂದು. ಮಳೆಗಾಲದಲ್ಲಿ ಹಪ್ಪಳವೇ ಗತಿಯಾದರೆ, ಬೇಸಗೆಯಲ್ಲೂ ಅದನ್ನೇ ಮುಂದುವರಿಸುವ ಪರಿಪಾಠ ಓದುಗನದಲ್ಲ. ವೈವಿಧ್ಯಮಯವಿದ್ದರೆ ಬೆಲ್ಲಕ್ಕಿರುವೆ ಮುತ್ತಿದಂತೆ ಮುತ್ತುವುದು ಸಹಜವಾಗಬಹುದು. ಹಾಗಂಥ ಎಲ್ಲವನ್ನೂ ಸಿಹಿಯಾಗಿಯೇ ಬರೆಯಲೂ ಅಸಾಧ್ಯ. ಪ್ರಸ್ತುತ ಸನ್ನಿವೇಶ, ಸಾಮಾಜಿಕ ನಡವಳಿಕೆ, ರಾಜಕೀಯ ವಿದ್ಯಮಾನಗಳ ಸಮ್ಮಿಳನವಲ್ಲಿರಲೇಬೇಕು. ಕೆಲವೊಮ್ಮೆ ಕಹಿ ಎನಬಹುದಾದ ಖಡಕ್ ಚಹಾದಂತ ಒಗರುಗಳನ್ನೂ ಓದುಗನೆದೆಗೆ ಇಳಿಸುವಂಥ ಪ್ರಯತ್ನವನ್ನೂ ಮಾಡಲೇಬೇಕು. ಆದರೆ ಓದುಗನು ಎಲ್ಲಾ ಬರಹದೊಳಗೆ ಇಳಿಯಲೇಬೇಕೆನ್ನುವ ಹಕ್ಕೊತ್ತಾಯ ಸಲ್ಲ.

ಇನ್ನುಳಿದಂತೆ ಬರವಣಿಗೆಯ ಸಂಖ್ಯೆ, ಅಂಕಿಅಂಶಗಳು. ಲೇಖಕ ಜೋಗಿಯವರು ತನ್ನ 'ಹಲಗೆ ಬಳಪ' ಎನ್ನುವ ಹೊತ್ತಗೆಯಲ್ಲಿ ಒಂದು ಕಡೆ ಅತಿವೃಷ್ಟಿ ಸಾಹಿತ್ಯಕ್ಕೆ ಶತ್ರು ಎನ್ನುತ್ತಾರೆ. ಇದನ್ನು ಲೇಖಕರೆನಿಸಿಕೊಂಡವರೆಲ್ಲರೂ ಗಮನಿಸಲೇಬೇಕು. ಏನನ್ನಾದರೂ ಬರೆದೇ ತೀರುವೆ ಎನ್ನುವ 'ಹಠಮಾರಿ' ಧೋರಣೆಯಲ್ಲಿ ಬರೆವ ಸಾಲುಗಳು ಬಹುಶಃ ಹೆಚ್ಚಿನ ಓದುಗರನ್ನು ತಲುಪದಿರಬಹುದು. ದಿನಕ್ಕೆ ಹತ್ತು ಹಲವು ಬರೆವ ಬರವಣಿಗೆಗಾರ ತಾನು ಏನನ್ನು ಮೊದಲು ಹೇಳಹೊರಟಿದ್ದೇನೆ ಎನ್ನುವುದನ್ನು ಅರಿತುಕೊಳ್ಳುವುದು ಮುಖ್ಯವಾಗಬೇಕು. ನಿನ್ನೆ ಬಳಸಿದ ಪದ, ಅಕ್ಷರಗಳೇ ಇಂದಿನ ಬರಹದಲ್ಲೂ, ಅದರ ಭಾವವೇ ಇಂದಿನದರಲ್ಲೂ ಪದೇ ಪದೇ ಮರುಕಳಿಸಬಾರದು. ಬರೆದುದದನ್ನು ಮತ್ತೆ ಓದಿ. ಮಗದೊಮ್ಮೆ ಓದಿ, ಈ ಪ್ರಕ್ರಿಯೆ ಮರುಕಳಿಸಿ ಆ ಬರಹವೆನ್ನುವುದು ಕುಲುಮೆಯದ್ದಿದ ಲೋಹದ ಹೊಳಪಿನಂತನಿಸಿದರೆ ಓದುಗ ಮಹಾಶಯನ ತೆಕ್ಕೆಗೆ ಹರಿಯಬಿಡಬಹುದು. ಅದು ಮುಂಜಾವ ಚಿನ್ನವರ್ಣದ ರವಿರಶ್ಮಿಯಂತೆ ಕಂಗೊಳಿಸದರೆ ಸಾರ್ಥಕತೆ ಪಡೆಯಬಹುದು. ಆ ನಿಟ್ಟಿನಲ್ಲಿ ಬರಹಗಾರರು ತಮ್ಮ ಪ್ರಯತ್ನ ಮುಂದುವರಿಸಬೇಕಾದದ್ದು ಅನಿವಾರ್ಯ.

ಬನ್ನಿ ಒಂದಷ್ಟು ಓದೋಣ ಮೊದಲು... ಅರಿತು, ಅರಗಿಸಿಕೊಂಡು, ಅರುಹೋಣ ನವಿರಾಗಿ ಬರಹರೂಪದಲಿ!

ಶುಭವಾಗಲಿ ಸರ್ವರಿಗೂ

ಪ್ರೀತಿಯಿಂದ,
ಪುಷ್ಪರಾಜ್ ಚೌಟ
ಕನ್ನಡ ಬ್ಲಾಗ್ ನಿರ್ವಹಣಾ ತಂಡ.

Thursday, 31 January 2013

ಬಂಡಾಯ - ಸಾಹಿತ್ಯದಲ್ಲೊಂದು ಹೊಸ ಹುಟ್ಟು ಹಾಕುತ್ತಾ!


ಯಾವುದೇ ಒಂದು ಸಾಹಿತ್ಯದ ಹುಟ್ಟು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿರುತ್ತದೆ. ಎಲ್ಲಾ ತರಹದ ಸಾಹಿತ್ಯಗಳು ಸಾರ್ವಕಾಲಿಕವಾಗಲಾರವು, ಸಾರ್ವಕಾಲಿಕವೆನ್ನಿಸಿದವು ಕೆಲವೇ ಕೆಲವು, ಸಮಾಜದ ಸೈದ್ಧಾಂತಿಕ ಹಾಗೂ ತಾತ್ವಿಕ ಹಿನ್ನೆಲೆಗಳನ್ನು ಕುರಿತು ಗಂಭೀರವಾಗಿ ವಿಚಾರ ಮಾಡತೊಡಗಿದಾಗ ಸಾಹಿತ್ಯ ಚಳುವಳಿಗಳು ಹುಟ್ಟಿಕೊಳ್ಳುತ್ತವೆ, ಇಂಥಹ ವಿಚಾರಗಳೇ ಮನೋಧರ್ಮಗಳಾಗಿ ತನ್ನದೇ ಆದ ಒಂದು ಸಾಹಿತ್ಯದ ವಿಧವನ್ನೇ ಹುಟ್ಟುಹಾಕುವ ಸಂದರ್ಭಗಳು ಬರಬಹುದು. ಹೀಗೆ ರೂಪುತಳೆದದ್ದೇ 'ಬಂಡಾಯ ಅಥವಾ ದಲಿತ ಸಾಹಿತ್ಯ ಎನ್ನುವ ಒಂದು ಪ್ರಕಾರ. ಕನ್ನಡ ಸಾಹಿತ್ಯದಲ್ಲಿ ನವ್ಯೋತ್ತರ ಅಥವಾ ಬಂಡಾಯ ಸಾಹಿತ್ಯ ತನ್ನ ಅಸ್ಥಿತ್ವ ಕಂಡುಕೊಂಡದ್ದು ಎಪ್ಪತ್ತರ ದಶಕದಲ್ಲಿ, ಹೊಸಗನ್ನಡ ಸಾಹಿತ್ಯದ ಈ ನಾಲ್ಕನೆಯ ಆಯಾಮವನ್ನೇ ಇವತ್ತು ಬಂಡಾಯ ಸಾಹಿತ್ಯದ ಸಂದರ್ಭವೆಂದು ಗುರುತಿಸಲಾಗುತ್ತದೆ. ಈ ಮೊದಲೇ ಹೇಳಿದಂತೆ ಬಂಡಾಯ ಅನ್ನುವುದೊಂದು ಮನೋಧರ್ಮ. ಸಾಮಾಜಿಕ ಅಸಮಾನತೆ ಹಾಗೂ ಅನ್ಯಾಯಗಳನ್ನು, ಒಟ್ಟಾರೆಯಾಗಿ ವಸ್ತುಸ್ಥಿತಿಯನ್ನು ಪ್ರಶ್ನಿಸುವ ಮತ್ತು ಪರಿಸ್ಥಿತಿಯನ್ನು ಬದಲಾಯಿಸುವ ಉದ್ದೇಶದಿಂದ ಪ್ರತಿಭಟಿಸುವ ಒಂದು ಪ್ರವೃತ್ತಿ ಈ ಮನೋಧರ್ಮದ ಮುಖ್ಯ ಲಕ್ಷಣವಾಗಿದೆ. ಈ ಕಾಲಘಟ್ಟದ ತನಕ ನಮ್ಮ ಸಾಹಿತ್ಯದಲ್ಲಿ ಪ್ರತಿಭಟನೆಯ ಅಂಶಗಳಿದ್ದುವೇ ಹೊರತು, ಪ್ರತಿಭಟನೆಯನ್ನೇ ಒಂದು ಮೌಲ್ಯವೆಂದು ಒಪ್ಪಿಕೊಂಡ ಪ್ರತಿಭಟನಾ ಸಾಹಿತ್ಯವೆಂಬುದು ಇರಲಿಲ್ಲ. ಇದಕ್ಕಿಂತ ಮೊದಲು ಶರಣರ ವಚನ ಸಾಹಿತ್ಯದಲ್ಲಿ ನೇರವಾಗಿ ಪ್ರಶ್ನಿಸುವ ಅಂಶಗಳಿದ್ದವಾದರೂ ಪರಿಪೂರ್ಣವಾಗಿ ಪ್ರಶ್ನಿಸುವ ಗುಣವಿರಲಿಲ್ಲ. ಹೀಗೆ ಸಾಹಿತ್ಯದಲ್ಲಿ ಪ್ರತಿಭಟನೆಯ ಅಂಶವಿರುವುದಕ್ಕಿಂತ ಸಾಹಿತ್ಯವೇ ಪ್ರತಿಭಟನೆಯಾಗಿ ಹೊಸಹುಟ್ಟು ಕಂಡಿತ್ತು ಬಂಡಾಯ.

ನವೋದಯ ಚಳುವಳಿಯ ಹಿಂದೆ ಪಶ್ಚಿಮದ ರೊಮ್ಯಾಂಟಿಕ್ ಕಾವ್ಯ ಸಂಪ್ರದಾಯವೂ, ಪ್ರಗತಿಶೀಲ ಚಳುವಳಿಯ ಹಿಂದೆ ಯೂರೋಪಿನ ವಾಸ್ತವವಾದೀ ಚಳುವಳಿಗಳೂ, ನವ್ಯದ ಹಿಂದೆ ಪಶ್ಚಿಮದ ಎಲಿಯಟ್, ಅಡೆನ್, ಎಝ್ರಾಪೌಂಡ್ ಇವರ ಕಾವ್ಯದ ಮಾದರಿಗಳೂ, ದಲಿತ-ಬಂಡಾಯದ ಹಿಂದೆ ಎಡಪಂಥೀಯ ಧೋರಣೆಗಳಿಂದ ರೂಪುಗೊಂಡ ಭಾರತೀಯ ಹಾಗೂ ಜಾಗತಿಕ ಪ್ರತಿಭಟನಾ ಸಾಹಿತ್ಯ ಸಂದರ್ಭಗಳೂ ಪ್ರೇರಣೆಗಳಿಂದ ಕೆಲಸ ಮಾಡಿವೆ. ಆದರೆ ಕನ್ನಡದಲ್ಲಿ ಈ ಚಳುವಳಿಗಳ ಸಂದರ್ಭದಲ್ಲಿ ರೂಪುಗೊಂಡ ಬಂಡಾಯ ಸಾಹಿತ್ಯವು ತಾನು ಪ್ರೇರಣೆ ಪಡೆದ ಪಶ್ಚಿಮದ ಸಾಹಿತ್ಯಗಳ ಅನುಕರಣೆಯಾಗಲೀ, ಅನುಸರಣವಾಗಲೀ ಆಗಿಲ್ಲ ಎನ್ನುವುದು ತುಂಬ ಮಹತ್ವದ ಸಂಗತಿ. ಮನುಷ್ಯ ಮನುಷ್ಯನನ್ನು ಶೋಷಣೆಗೆ ಒಳ ಪಡಿಸುವ ತಂತ್ರಗಳನ್ನು ಕುರಿತು ಪ್ರತಿಭಟನೆಯೂ ಪ್ರಜಾಪ್ರಭುತ್ವವಾದೀ ನಿಲುವುಗಳ ಬಗ್ಗೆ ಗಾಢವಾದ ಕಾಳಜಿಗಳೂ ಸಾಂಪ್ರದಾಯಿಕ ಅಥವಾ ಸಾಂಸ್ಥಿಕ ಧರ್ಮಗಳ ನಿರಾಕರಣೆಯೂ ಸಾಹಿತ್ಯದ ಮೂಲದ್ರವ್ಯಗಳಾದದ್ದು ವಿಶೇಷವಾದ ಅಂಶ. ಆನಂತರ ಕೆಲವು ಕಾಲದಲ್ಲಿ ಕಾಣಿಸಿಕೊಂಡ ಪ್ರಗತಿಶೀಲ ಸಾಹಿತ್ಯದ ಧೋರಣೆಗಳು ನವೋದಯಕ್ಕಿಂತ, ಹೆಚ್ಚು ಸಾಮಾಜಿಕ ಕಳಕಳಿಯನ್ನು ಒಳಗೊಂಡದ್ದಕ್ಕೆ ಕಾರಣ, ಅದು ಮಧ್ಯಮವರ್ಗದ ಬದುಕಿನ ಸಂವೇದನೆಗಳನ್ನು ತನ್ನ ವಸ್ತುವನ್ನಾಗಿ ಮಾಡಿಕೊಂಡಿದ್ದರಿಂದ ಮುಂದೆ ಬಂದ ನವ್ಯ ಸಾಹಿತ್ಯ ಮುಖ್ಯವಾಗಿ ನಗರಕೇಂದ್ರಿತವಾಗುತ್ತ ಸ್ವಾತಂತ್ರ್ಯೋತ್ತರ ಭಾರತೀಯ ಪರಿಸರದ ಮೌಲ್ಯಗಳ ಅವನತಿಯನ್ನೂ, ಮನುಷ್ಯನ ಅಂತರಾಳದ ವಿಕಾರಗಳನ್ನೂ, ಪ್ರಖರವಾದ ವಿಮರ್ಶನ ಪ್ರಜ್ಞೆಯಲ್ಲಿ ನಮ್ಮ ವಾಸ್ತವವನ್ನು ಒರೆಗಲ್ಲಿಗೆ ಹಚ್ಚಿ ನೋಡುವ ಪ್ರವೃತ್ತಿಯನ್ನೂ ತನ್ನ ವಸ್ತುವನ್ನಾಗಿ ಮಾಡಿಕೊಂಡಿತು. ಈ ಅನುಕ್ರಮವಾದ ಬೆಳವಣಿಗೆಯ ಪರಿಣಾಮವಾಗಿ, ಶತಮಾನಗಳ ಕಾಲ ಅಕ್ಷರಜ್ಞಾನದ ಸವಲತ್ತುಗಳಿಂದ ವಂಚಿತವಾಗಿದ್ದು ಮತ್ತು ಮೇಲಿನ ಎಲ್ಲ ವರ್ಗದವರುಗಳಿಂದ ತುಳಿತಕ್ಕೆ ಒಳಗಾಗಿದ್ದ ಸಮಾಜದ ಕೆಳಗಿನ ಸ್ತರವೊಂದು, ಮಾತನಾಡಲು ಕಲಿತು ತನ್ನ ಪ್ರತಿಭಟನೆಯನ್ನು ಅಭಿವ್ಯಕ್ತಪಡಿಸತೊಡಗಿದಾಗ, ಮೂಡಿಬಂದಿದ್ದು ಬಂಡಾಯ ಸಾಹಿತ್ಯ.

ಹಿಂದಿನ ಎಲ್ಲ ಸಾಹಿತ್ಯ ಚಳುವಳಿಗಳೂ ತಮ್ಮ ತೆಕ್ಕೆಗೆ ತೆಗೆದುಕೊಳ್ಳದೆ ಹೋದ, ಸಮಾಜದ ಕೆಳವರ್ಗದವರ ಬದುಕನ್ನು, ನಿರ್ಲಕ್ಷಿತರ ಬದುಕನ್ನು ಬಂಡಾಯ ಸಾಹಿತ್ಯ ತನ್ನ ವಸ್ತುವನ್ನಾಗಿ ಮಾಡಿಕೊಂಡಿದೆ. ನಿಜವಾದ ಭಾರತ ಕೇವಲ ರಮ್ಯ ನಿಸರ್ಗದಲ್ಲಾಗಲಿ, ನಗರದ ಮಧ್ಯಮ ವರ್ಗದಲ್ಲಾಗಲೀ, ಗೊಂದಲಪುರದ ಬುದ್ಧಿ ಜೀವಿಗಳ ತಾಕಲಾಟಗಳಲ್ಲಾಗಲಿ ಇಲ್ಲ; ಅದು ಇರುವುದು ಬಹುಸಂಖ್ಯಾತ ಹಳ್ಳಿಗಳ ಬದುಕಿನಲ್ಲಿ. ಹಳ್ಳಿಗಳಲ್ಲಿ ಇರುವ ಈ ಅಸಂಖ್ಯಾತ ಜನಸಾಮಾನ್ಯರು, ಒಂದೆಡೆ ತಮಗಿಂತ ಮೇಲಿನ ವರ್ಗದವರಿಂದ, ಮತ್ತೊಂದೆಡೆ ಭ್ರಷ್ಟ ರಾಜಕಾರಣಿಗಳಿಂದ ಹಾಗೂ ಅಧಿಕಾರಶಾಹೀ, ಪುರೋಹಿತಶಾಹೀ ಕುತಂತ್ರಗಳಿಂದ ತುಳಿತಕ್ಕೆ ಹಾಗೂ ಶೋಷಣೆಗೆ ಒಳಗಾಗಿದ್ದಾರೆ. ಗ್ರಾಮೀಣ ಭಾರತದ ಈ ಶೋಷಿತ ಜನಾಂಗ, ತನ್ನೊಳಗಿನ ಸಂಕಟಗಳಿಗೆ, ತನ್ನೊಳಗಿನ ರೊಚ್ಚಿಗೆ, ತನಗಾಗಿರುವ ಅನ್ಯಾಯಗಳಿಗೆ, ಪ್ರತಿಭಟನೆಯ ದನಿ ಎತ್ತುತ್ತಿರುವುದು ನ್ಯಾಯವಾಗಿದೆ. ಹೀಗಾಗಿ ಪ್ರತಿಭಟನೆಯನ್ನು ಒಂದು ಮೌಲ್ಯವಾಗಿ ಉಳ್ಳ, ರಾಜಕೀಯ ಪ್ರಜ್ಞೆಯಿಂದ ಮೂಡಿದ ಈ ಸಾಹಿತ್ಯ, ಸೌಂದರ್ಯದ ತನ್ಮತೆಯನ್ನು ತರುವ, ಉದಾತ್ತ ತತ್ವಗಳನ್ನು ಹೇಳುವ, ಪೌರಾಣಿಕ-ಧಾರ್ಮಿಕ ಅದ್ಭುತಗಳನ್ನು ತೆರೆದು ತೋರುವ, ಬುದ್ಧಿಯ ಕಸರತ್ತುಗಳನ್ನು ಪ್ರದರ್ಶಿಸುವ ಉದ್ದೇಶದ್ದಲ್ಲ. ಅದು ಇರುವ ವಾಸ್ತವವನ್ನು ತೆರೆದು ತೋರುತ್ತ, ವೈಚಾರಿಕ ಎಚ್ಚರವನ್ನು ಹುಟ್ಟಿಸುತ್ತ, ಪ್ರಶ್ನೆ ಹಾಗೂ ಪ್ರತಿಭಟನೆಗಳ ಮೂಲಕ ಸಾಮಾಜಿಕ ಬದಲಾವಣೆಯನ್ನು ತರುವ ಉದ್ದೇಶದ್ದು. ಬಂಡಾಯ ಸಾಹಿತ್ಯದ ಧೋರಣೆಗಳು ಈಗ ಬರೆಯುತ್ತಿರುವ ಎಲ್ಲ ತಲೆಮಾರಿನ ಅಂದರೆ ನವೋದಯ, ಪ್ರಗತಿಶೀಲ, ನವ್ಯ ಇತ್ಯಾದಿ ವಿವಿಧ ಮಾರ್ಗದ ಬರಹಗಾರರ ಮೇಲೆ ತನ್ನ ಪ್ರಭಾವಗಳನ್ನು ಬೀರಿವೆ. ಸಮಕಾಲೀನ ಬರಹಗಾರರೆಲ್ಲರಲ್ಲೂ ಕಾಣಿಸಿಕೊಳ್ಳುತ್ತಿರುವ ಸಾಮಾಜಿಕ ಕಳಕಳಿ ಬಹುಶಃ ಈ ಬಂಡಾಯ ಸಾಹಿತ್ಯದ ಪರಿಣಾಮವೇ, ಇನ್ನೊಂದು ವಿಶೇಷವೆಂದರೆ, ಕಳೆದ ಒಂದು-ಒಂದೂವರೆ ದಶಕಗಳ ಕಾಲಮಾನದಲ್ಲಿ ಬಹುಸಂಖ್ಯಾತ ಮಹಿಳೆಯರು ಬರೆಯಲು ಶುರುಮಾಡಿರುವುದು ಮತ್ತು ಅವರ ಬರಹಗಳಲ್ಲಿ ಕಂಡುಬರುತ್ತಿರುವ ವೈಚಾರಿಕತೆಗಳು ಹಾಗೂ ದೃಷ್ಟಿಕೋನಗಳು ಖಂಡಿತವಾಗಿಯೂ ಬಂಡಾಯ ಸಾಹಿತ್ಯ ಚಳುವಳಿಯ ಪರಿಣಾಮಗಳಾಗಿವೆ ಎಂದರೆ ತಪ್ಪಾಗಲಾರದು. ಏಕೆಂದರೆ ಬಂಡಾಯ ಸಾಹಿತ್ಯ ಸಂದರ್ಭದಲ್ಲಿ ಎಚ್ಚರಗೊಂಡು ಮಾತನಾಡಲು ತೊಡಗಿದ ಶೋಷಿತ ಸಾಮಾಜಿಕ ವರ್ಗಕ್ಕೆ ಮಹಿಳೆಯರೂ ಸೇರುತ್ತಾರೆ.

ಸ್ವಾತಂತ್ರ್ಯ ಪೂರ್ವ ಭಾರತದ ಪರಿಸರದಲ್ಲಿ ನವೋದಯ ಸಾಹಿತ್ಯ ಸಂದರ್ಭದಲ್ಲಿಯೇ ಪ್ರಗತಿಶೀಲವೆಂಬ ಹೆಸರಿನ ಸಾಹಿತ್ಯ ಚಳುವಳಿಯೊಂದು ಹುಟ್ಟಿಕೊಂಡಿತು. ಉತ್ತರದ ಲಕ್ನೋದಲ್ಲಿ ೧೯೩೬ ರಂದು ಸಾಹಿತಿ ಪ್ರೇಮಚಂದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಭಾರತದ ಪ್ರಗತಿಶೀಲ ಲೇಖಕರ ಪ್ರಥಮ ಅಧಿವೇಶನವೊಂದು ಈ ಚಳುವಳಿಗೆ ಚಾಲನೆ ನೀಡಿತು. ಬದುಕಿನಲ್ಲಿ ಹೊಸ ಸೌಂದರ್ಯವನ್ನು ಅನ್ವೇಷಿಸುವ, ಜನಸಮುದಾಯದ ಮೇಲೆ ನಡೆಯುವ ದಬ್ಬಾಳಿಕೆಗಳನ್ನು ವಿರೋಧಿಸುವ, ಮನುಷ್ಯನ ಘನತೆಯನ್ನು ಎತ್ತಿಹಿಡಿಯುವುದಕ್ಕಾಗಿ, ಸಾಮ್ರಾಜ್ಯಷಾಹಿ, ಹಾಗೂ ಬಂಡವಾಳಷಾಹೀ ಶಕ್ತಿಗಳ ವಿರುದ್ಧ ದನಿಯೆತ್ತುವ ಮತ್ತು ನಿಜವಾದ ಸಮಾನತಾ ಸಾಮಾಜಿಕ ವ್ಯವಸ್ಥೆಯೊಂದನ್ನು ರೂಪಿಸುವ ಹೊಸ ಎಚ್ಚರಗಳನ್ನು ಹುಟ್ಟಿಸುವುದು ತನ್ನ ಉದ್ದೇಶವೆಂದು ಈ ಅಧಿವೇಶನ ಘೋಷಿಸಿತು. ಇದರಿಂದ ಪ್ರೇರಣೆಗೊಂಡು ಕನ್ನಡದಲ್ಲಿ ೧೯೪೩ರ ವೇಳೆಗೆ ಪ್ರಗತಿಶೀಲ ಲೇಖಕರ ಸಂಘವೊಂದು ಅಸ್ತಿತ್ವಕ್ಕೆ ಬಂದಿತು. ಅ.ನ. ಕೃಷ್ಣರಾಯರು ಈ ಸಂಘದ ಮುಖ್ಯ ವಕ್ತಾರರಾದರು. ಅವರೊಂದಿಗೆ, ನಿರಂಜನ, ತ.ರಾ.ಸು, ಕಟ್ಟೀಮನಿ ಮೊದಲಾದ ಉತ್ಸಾಹೀ ಬರಹಗಾರರು ಸೇರಿಕೊಂಡು ಕನ್ನಡದಲ್ಲಿ ಪ್ರಗತಿಶೀಲ ಚಳುವಳಿಯೊಂದು ಹುಟ್ಟಿಕೊಂಡು ಬಹುಸಂಖ್ಯೆಯ ಕತೆ ಕಾದಂಬರಿಗಳ ನಿರ್ಮಿತಿಯಲ್ಲಿ ಇದು ತನ್ನ ಅಭಿವ್ಯಕ್ತಿಯನ್ನು ಕಂಡುಕೊಂಡಿತು.

ಅಲ್ಲದೆ ಭಾರತೀಯ ಪರಿಸರದ ಲೋಹಿಯಾ ಹಾಗೂ ಜೆ.ಪಿ. ಚಳುವಳಿಗಳು, ೧೯೭೪ರಂದು ಕರ್ನಾಟಕದಲ್ಲಿ ರೂಪುಗೊಂಡ ಬರಹಗಾರರ ಒಕ್ಕೂಟ, ರೈತ ಚಳುವಳಿ, ಜಾತಿ ವಿನಾಶ ಸಮ್ಮೇಳನ ಇತ್ಯಾದಿಗಳು ಬಂಡಾಯ ಚಳುವಳಿಯ ಸೈದ್ಧಾಂತಿಕ ನೆಲೆಯನ್ನು ರೂಪಿಸುವುದರಲ್ಲಿ ತಕ್ಕ ಪ್ರಭಾವವನ್ನು ಬೀರಿ ೧೯೭೯ ರಲ್ಲಿ ಪ್ರಥಮ ಬಂಡಾಯ ಸಾಹಿತ್ಯ ಸಂಘಟನೆಯೊಂದು ಪ್ರಾರಂಭವಾಯಿತು. ಸಾಹಿತ್ಯಕವಾಗಿ ಹೇಳುವುದಾದರೆ ಕನ್ನಡದ ದಲಿತ-ಬಂಡಾಯ ಚಳುವಳಿಗೆ ಇದೇ ಬಗೆಯ ಜಾಗತಿಕ ಹಾಗೂ ಭಾರತೀಯ ಪರಿಸರದ ಸಾಹಿತ್ಯ ಚಳುವಳಿಗಳು ಪ್ರೇರಣೆಯನ್ನೊದಗಿಸಿವೆ. ಪಶ್ಚಿಮದ ಕಪ್ಪು ಕಾವ್ಯ, ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಚಳುವಳಿ, ತೆಲುಗಿನ ದಿಗಂಬರ ಕಾವ್ಯದ ಧೋರಣೆಗಳೂ ಕನ್ನಡ ಕವಿಗಳನ್ನು ಪ್ರಭಾವಿಸಿವೆ. ಒಂದು ಮಾತಿನಲ್ಲಿ ಹೇಳುವುದಾದರೆ ದಲಿತ – ಬಂಡಾಯ ಚಳುವಳಿ ಎಡಪಂಥೀಯ ನಿಲುವುಗಳನ್ನೊಳಗೊಂಡ, ಪ್ರತಿಭಟನೆಯನ್ನೆ ತನ್ನ ಕೇಂದ್ರ ಕಾಳಜಿಯನ್ನಾಗಿ ಮಾಡಿಕೊಂಡ ಒಂದು ಜನಪರ ಸಾಹಿತ್ಯ ಚಳುವಳಿಯಾಗಿದೆ.

ವಾಸ್ತವವಾಗಿ ‘ದಲಿತ’ ಎಂಬ ಮಾತಿಗೆ ತುಳಿಯಲ್ಪಟ್ಟವನು ಎಂಬ ಅರ್ಥವಿದೆ. ನಮ್ಮ ಸಾಮಾಜಿಕ ಪರಿಸರದಲ್ಲಿ ಅಸ್ಪೃಶ್ಯರಂತೆ ಇತರ ಹಿಂದುಳಿದ ವರ್ಗಗಳವರೂ ಮೇಲಿನ ವರ್ಗಗಳವರಿಂದ ತುಳಿತಕ್ಕೆ ಶೋಷಣೆಗೆ ಒಳಗಾಗಿರುವ ಕಾರಣದಿಂದ, ಉಚ್ಚ ವರ್ಗದವರಲ್ಲದ ಎಲ್ಲರೂ ಒಂದರ್ಥದಲ್ಲಿ ದಲಿತರೇ ಆಗುತ್ತಾರಲ್ಲವೆ ಎಂಬ ಪ್ರಶ್ನೆಯೊಂದನ್ನು ಎತ್ತಲು ಅವಕಾಶವಿದೆ. ಆದರೆ “ಒಬ್ಬ ಅವಮಾನಿತ ವ್ಯಕ್ತಿ ಸ್ವಾಭಿಮಾನಿಯೂ ಆದಾಗ ಹುಟ್ಟುವ ಸಾಹಿತ್ಯಕ್ಕೆ ಒಂದು ಗುಣವಿರುತ್ತದೆ. ಅದನ್ನು ಪ್ರಪಂಚದ ಎಲ್ಲ ಕಡೆಯೂ ನಾವು ಪ್ರತಿಭಟನಾ ಸಾಹಿತ್ಯವೆಂದು ಕಾಣುತ್ತೇವೆ. ಹೀಗೆ ಅವಮಾನಿತ ಸ್ವಾಭಿಮಾನಿಯಾದವನು ಅಸ್ಪೃಶ್ಯನೂ ಆಗಿದ್ದಲ್ಲಿ ದಲಿತ ಸಾಹಿತ್ಯ ಹುಟ್ಟಿಬರುತ್ತದೆ” – ಎಂಬ ಅನಂತಮೂರ್ತಿಯವರ ವಿಶ್ಲೇಷಣೆಯಲ್ಲಿ ದಲಿತ ಹಾಗೂ ಬಂಡಾಯ ಸಾಹಿತ್ಯಗಳ ಸರಿಯಾದ ವ್ಯತ್ಯಾಸವು ನಿರೂಪಿತವಾಗಿದೆ. ಕನ್ನಡದಲ್ಲಿ ಮೊಟ್ಟಮೊದಲಿಗೆ ಈ ದಲಿತ ಧ್ವನಿ ಕಾಣಿಸಿಕೊಂಡದ್ದು ಸಿದ್ಧಲಿಂಗಯ್ಯನವರ ‘ಹೊಲೆ ಮಾದಿಗರ ಹಾಡು’ ಕೃತಿಯ ಮೂಲಕ ಮತ್ತು ದೇವನೂರು ಮಹಾದೇವ ಅವರ ಕತೆಗಳ ಮೂಲಕ. ಅವರ ‘ಒಡಲಾಳ’ ಈ ಬರವಣಿಗೆಯ ಶ್ರೇಷ್ಠ ನಿದರ್ಶನವಾಗಿದೆ. ಈಗಾಗಲೇ ಪ್ರಸ್ತಾಪಿಸಿದಂತೆ ಬಂಡಾಯ ಸಾಹಿತ್ಯ ಸಂಘಟನೆ ಪ್ರಾರಂಭವಾದದ್ದು, ೧೯೭೯ ರಂದು. ಪ್ರತಿಭಟನೆಯನ್ನು ಒಂದು ಮೌಲ್ಯವನ್ನಾಗಿ ಅಂಗೀಕರಿಸಿದ ಬರಹಗಾರರೆಲ್ಲರ ಒಕ್ಕೂಟ ಇದು. ಈ ಬಂಡಾಯ ಸಾಹಿತ್ಯದ ಮುಖ್ಯವಸ್ತು ಗ್ರಾಮೀಣ ಪರಿಸರದ ಅನುಭವ ದ್ರವ್ಯವಾಗಿದೆ. ಡಾ|| ಬೆಸಗರಹಳ್ಳಿ ರಾಮಣ್ಣ, ಕುಂ. ವೀರಭದ್ರಪ್ಪ, ಕಾಳೇಗೌಡ ನಾಗವಾರ, ಚಂದ್ರಶೇಖರ ಪಾಟೀಲ, ಚನ್ನಣ್ಣವಾಲೀಕಾರ, ಅರವಿಂದ ಮಾಲಗತ್ತಿ, ಮನಜ, ಬರಗೂರು ರಾಮಚಂದ್ರಪ್ಪ ಇಂಥವರ ಕವಿತೆ, ಕಾದಂಬರಿಗಳು ಬಂಡಾಯ ಚಳುವಳಿಯ ಪ್ರತಿನಿಧಿಗಳಾಗಿವೆ.

ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಅತ್ಯಂತ ಗಮನಾರ್ಹವಾದ ಪರಿಣಾಮವೆಂದರೆ, ಬಹುಸಂಖ್ಯಾತ ಮಹಿಳೆಯರು ಸಾಹಿತ್ಯಲೋಕವನ್ನು ಪ್ರವೇಶಿಸಿದ್ದು. ಒಂದರ್ಥದಲ್ಲಿ ಈ ದೇಶದ ಮಹಿಳೆಯರೂ ‘ದಲಿತ’ರೇ ಆದ ಕಾರಣ, ದಲಿತ-ಬಂಡಾಯ ಚಳುವಳಿ ನಿರ್ಮಿಸಿದ ಹೊಸ ಎಚ್ಚರದ ಮೂಲಕ ತಮ್ಮ ಅಭಿವ್ಯಕ್ತಿಯನ್ನು ಕಂಡುಕೊಂಡವರಲ್ಲಿ ಮಹಿಳೆಯರೂ ಸೇರುತ್ತಾರೆ. ಕೇವಲ ವಿದ್ಯಾವಂತ ಮಧ್ಯಮ ವರ್ಗದ ಮಹಿಳೆಯರೇ ನವೋದಯ ಸಂದರ್ಭದಲ್ಲಿ, ಬರೆಹಗಾರರಾಗಿ ಕಾಣಿಸಿಕೊಂಡರೂ, ಅವರಲ್ಲಿ ಸಂಪ್ರದಾಯ ಪ್ರಿಯತೆಯೇ ಮುಖ್ಯವಾಗಿತ್ತೆ ಹೊರತು ತಮ್ಮನ್ನು ನಿಯಂತ್ರಿಸುತ್ತಿದ್ದ ಪಾರಂಪರಿಕ ಮೌಲ್ಯಗಳನ್ನು ಕುರಿತು ಪ್ರಶ್ನಿಸುವ ಹಾಗೂ ಪ್ರತಿಭಟಿಸುವ ಪ್ರವೃತ್ತಿ (ತ್ರಿವೇಣಿ, ವೀಣಾ ಇಂಥ ಒಬ್ಬಿಬ್ಬರನ್ನು ಬಿಟ್ಟರೆ) ಅಷ್ಟಾಗಿ ಅಭಿವ್ಯಕ್ತವಾಗಲೇ ಇಲ್ಲ ಎನ್ನಬಹುದು. ಆದರೆ ಕಳೆದ ಕೆಲವು ವರ್ಷಗಳಲ್ಲಿ ವರ್ಧಿಸಿರುವ ಮಹಿಳಾ ಬರಹಗಾರ್ತಿಯರೂ, ಅವರಲ್ಲಿ ಪ್ರಕಟವಾಗುತ್ತಿರುವ ಪ್ರತಿಭಟನಾ ಪ್ರವೃತ್ತಿಯೂ, ಖಂಡಿತವಾಗಿಯೂ ಈ ಬಂಡಾಯ ಚಳುವಳಿಯ ಪರಿಣಾಮಗಳಾಗಿವೆ. ಜತೆಗೆ ಕರ್ನಾಟಕದ ಉಪಸಂಸ್ಕೃತಿಯಾದ ಮುಸ್ಲಿಂ ಜನಾಂಗದ ಹಲವರೂ, ಮೊಟ್ಟಮೊದಲಿಗೆ ತಮ್ಮ ಧಾರ್ಮಿಕ – ಸಾಂಸ್ಕೃತಿಕ ಪಟ್ಟಭದ್ರಹಿತಾಸಕ್ತಿಗಳ ಶೋಷಣೆಯನ್ನು ತಮ್ಮ ಬರೆಹಗಳ ಮೂಲಕ ದಾಖಲು ಮಾಡುತ್ತಿರುವುದೂ, ಈ ಚಳುವಳಿಯ ಚೌಕಟ್ಟಿನಲ್ಲಿಯೇ ರಹಮತ್ ತರಿಕೆರೆ, ರಂಜಾನ್ ದರ್ಗಾ, ಸಾರಾ ಅಬೂಬಕರ್, ಬಾನುಮುಷ್ತಾಕ್, ಫಕೀರ್ ಮಹಮದ್ ಕಟ್ಪಾಡಿ, ಬೋಳುವಾರು ಮಹಮ್ಮದ್ ಕುಂಞ – ಇಂಥವರ ಬರಹಗಳು ಈ ಮಾತಿಗೆ ನಿದರ್ಶನವಾಗಿವೆ.

ಪ್ರಸ್ತುತ ಸಾಮಾಜಿಕ ವ್ಯವಸ್ಥೆಯಲ್ಲಿ ಕ್ರೌರ್ಯ, ದಬ್ಬಾಳಿಕೆ, ಹಿಂಸೆ, ಅನಾಚಾರಗಳೇ ತಾಂಡವವಾಡುವ ಈ ಸನ್ನಿವೇಷದಲ್ಲಿ ಈ ಮೇಲೆ ಅಭಿವ್ಯಕ್ತ ಪಡಿಸಿದಂತೆ ಚಾರಿತ್ರಿಕವಾಗಿ ಉದಯವಾದ ಬಂಡಾಯ ಸಾಹಿತ್ಯ ಮತ್ತಷ್ಟು ಮೊನಚಾಗಬೇಕಾದ ಅನಿವಾರ್ಯತೆ ಕಂಡುಬರುತ್ತಿದೆ. ತನ್ಮೂಲಕ ಈ ಕಲುಷಿತ ವ್ಯವಸ್ಥೆಯನ್ನು ತಿಳಿಗೊಳಿಸುವಲ್ಲಿ ಅದು ಮಹತ್ತರ ಪಾತ್ರವಹಿಸಲಿ ಎನ್ನುವುದೇ ಆಶಯ.
===========
ವಂದನೆಗಳೊಂದಿಗೆ,
ಪ್ರವರ ಕೊಟ್ಟೂರು
ಕನ್ನಡ ಬ್ಲಾಗ್ ನಿರ್ವಾಹಕ ತಂಡ.
[ಸಲಹೆ, ಸಹಕಾರ: ಕನ್ನಡ ಬ್ಲಾಗ್ ನಿರ್ವಹಣಾ ತಂಡ]
[ಆಕರ: ಜಿ.ಎಸ್.ಶಿವರುದ್ರಪ್ಪ ಅವರ ಸಮಗ್ರ ಗದ್ಯ]

Monday, 31 December 2012

ಗತವರ್ಷದ ಮೆಲುಕು ಹೊಸವರ್ಷದಾಗಮನಕೆ!


ನಮಸ್ಕಾರ ಕನ್ನಡ ಬ್ಲಾಗ್ ಸದಸ್ಯವೃಂದಕ್ಕೆ,

ಯುಗವೊಂದು ಉರುಳಿ ಮಗದೊಂದು ಯುಗ ನಗಲು ಅಣಿಯಾಗುತ್ತಿದೆ. ಎರಡು ಸಾವಿರದ ಹನ್ನೆರಡರ ಅಂತಿಮ ಕ್ಷಣಗಣನೆ ಆರಂಭವಾಗಿದೆ. ಕಂಡ ಕನಸುಗಳೆಷ್ಟೋ, ನನಸುಗಳಾದವೆಷ್ಟೋ? ಅವಲೋಕನ ಮಾಡಬೇಕಾದ ಅವಶ್ಯಕತೆ ಇದ್ದೇ ಇದೆ ಪ್ರತಿಯೊಬ್ಬರಿಗೂ. ಹೌದು ವರ್ಷದ ಮೊದಲಿಗೆ ರೂಪಿಸಿಕೊಂಡ ಹಲವು ಯೋಜನೆಗಳಲ್ಲಿ ಕೆಲವು ಕಾರ್ಯರೂಪಕ್ಕಿಳಿದು, ಇನ್ನೂ ಹಲವೂ ತಣ್ಣನೆ ಮನದೊಳಗೆ ಹಾಗೆ ಮಲಗಿರಲೂಬಹುದು. ಮತ್ತೆ ಎಚ್ಚರಿಸುವ ಕಾಲ ಬಂದಿದೆ. ಅದು ಈ ವರ್ಷದ ಕೊನೆ. ಕಳೆದ ಸಂವತ್ಸರದಲಿ ನೆನೆಗುದಿಗೆ ಬಿದ್ದವುಗಳನ್ನು ಮತ್ತೊಮ್ಮೆ ಆರಿಸಿ, ವಿಶ್ಲೇಷಿಸಿ, ಹದಗೊಳಿಸಿ ಹೊಸವರುಷಕೆ ಹೊಸತನ ಕೊಡಬೇಕು. ಹಾಗೆಯೇ ನನಸುಗೊಂಡವುಗಳು ಯಾವ ದಿಕ್ಕಿನಲ್ಲಿ ಸಾಗುತ್ತಿವೆ ಎನ್ನುವ ಸಿಂಹಾವಲೋಕನ ಕೂಡ ಅವಶ್ಯ. ಬನ್ನಿ ಸಣ್ಣದೊಂದು ದೃಷ್ಟಿ ಹಾಯಿಸೋಣ ಕಳೆದೊಂದು ವರ್ಷದಿಂದ ಕನ್ನಡ ಬ್ಲಾಗ್ ಕುಂಟುತ್ತಾ, ತೆವಳುತ್ತ, ನಲಿಯುತ್ತಾ ಸಾಗಿಬಂದ ಪರಿಯನ್ನು ನಾವು ನೀವು ಜೊತೆಯಾಗಿ, ಹಿತವಾಗಿ! 

ಹಲವು ನೀತಿ-ನಿಯಮ, ರೂಪುರೇಷೆಗಳ ಅಡಿಯಲ್ಲಿ ನೆಲೆನಿಂತು ತನ್ನೆಲ್ಲಾ ಸದಸ್ಯರ ಕ್ರಿಯಾಶೀಲತೆಗಳನ್ನು ಬೆಳಕಿಗೆ ತರುವ ಪ್ರಯತ್ನದತ್ತ ಮುಂದಡಿ ಇಟ್ಟಿತ್ತು ಕನ್ನಡ ಬ್ಲಾಗ್. ೨೦೧೨ರ ಆದಿಯಲ್ಲಿ, ಇತರೆ ಗುಂಪುಗಳಿಗಿಂತ ಭಿನ್ನವಾಗಿ ನಿಂತು ಎಲ್ಲರ ಪ್ರೋತ್ಸಾಹದೊಂದಿಗೆ ತನ್ನ ಸಂಪಾದಕೀಯ ಸರಣಿ ಆರಂಭಿಸಿತ್ತು. ತನ್ಮೂಲಕ ಫೇಸ್ಬುಕ್ ಗುಂಪುಗಳಲ್ಲೇ ವಿಶಿಷ್ಟ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದು ನಮ್ಮ ಈ ತಂಡ. ಸಫಲತೆಯ ಹಾದಿಯಲ್ಲಿ ಸಾಗುತ್ತಿದೆ ಈ ಪ್ರಯತ್ನ. ಜನವರಿ ೨೦೧೨ರ ಮೊದಲ ಸಂಪಾದಕೀಯದಿಂದ ಮೊದಲ್ಗೊಂಡು ಎಲ್ಲ ಲೇಖನಗಳಿಂದ ಆಯ್ದ ಸದಾಶಯದ ತುಣುಕುಗಳನ್ನು ಸಂಕಲನಗೊಳಿಸಿ ಪ್ರಸ್ತುತ ಸಂಪಾದಕೀಯವಾಗಿ ನಿಮ್ಮೆದುರು ಅರ್ಪಿಸುತ್ತಿದ್ದೇವೆ. 

ಸಾಗುವ ದಾರಿಯಲ್ಲಿ ಎಡರು ತೊಡರುಗಳು ಸಹಜ. ಈ ಎಲ್ಲದಕೂ ಕಾಲವೇ ಉತ್ತರ ನೀಡುತ್ತದೆ. ಯುಗಯುಗಗಳು ಕಳೆದರೂ ಯುಗಾದಿ ಮರಳಿ ಬರುತ್ತಿದೆ ಅನ್ನುವಂತೆ ಹಳೆಯದ್ದೆಲ್ಲ ಹಳತಾಗಿ ಕಳಚಿ ಹೊಸಚಿಗುರುಗಳು ವಸಂತನಾಗಮನದಿ ಸತ್ಯಸಹಜ. ನಿರಂತರ ಸಂಕ್ರಮಣವದು. ಆದರೆ ಈ ಕಾಲ ಕಳೆಯುತ್ತಾ ಸಾಗಿದಂತೆ ನಮ್ಮ ಭಾಷಾಭಿಮಾನವನ್ನು ನಶಿಸಲು ಬಿಡದೇ, ನಮ್ಮ ಭಾಷೆಯ ಬೆಳವಣಿಗೆಯ ಬಗ್ಗೆ ನಮ್ಮ ನಿಮ್ಮೆಲ್ಲರ ಪ್ರಾಮಾಣಿಕ ಮತ್ತು ನಿಸ್ಪೃಹವಾದ ಪ್ರಯತ್ನ ಇರಲಿ. "ಕನ್ನಡದಲ್ಲಿ ಅಪಾರ ಸಂಪತ್ತಿದೆ. ಮುತ್ತು ರತ್ನ ವಜ್ರ ಸಮಾನ ಸಾಹಿತ್ಯ ಗಣಿಯಿದೆ. ಅದಮ್ಯ ಪ್ರತಿಭೆಗಳಿದ್ದಾರೆ. ಆದರೆ ಇವೆಲ್ಲ ಕಣ್ಣಿಗೆ ಕಾಣದೆ ಮಸುಕಾಗಿ ಬಿಟ್ಟಿದೆ. ಇವನ್ನು ಹೊರಕ್ಕೆ ತಂದು ಪೋಣಿಸಿ ಸುಂದರ ಹಾರ ಮಾಡಿ ಕನ್ನಡಾಂಬೆಯ ಕೊರಳಿಗೆ ಹಾಕಿ ನಮ್ಮ ಶ್ರೀಮಂತ ಸಂಸ್ಕೃತಿ,ಪರಂಪರೆಯನ್ನು ಮೆರೆಯುವ ಅಭಿಮಾನ,ಪ್ರೀತಿ ಪ್ರತಿಯೊಬ್ಬ ಕನ್ನಡಿಗನಲ್ಲೂ ಚಿಗುರಬೇಕು. ಕನ್ನಡ ಕಳೆದು ಹೋಗುತ್ತಿದೆ ಎಂದು ವ್ಯಾಕುಲವಾಗಿ ಮಾತನಾಡುವ ಬದಲು, ನಮ್ಮ ಬಳಿಯೇ ಇರುವ ಸಿರಿಗನ್ನಡದ ಸಿರಿಯನ್ನು ಜಗತ್ತಿಗೆ ತೋರಿಸುವ ಸದಾಶಯ ಪ್ರತಿಯೊಬ್ಬನಲ್ಲೂ ಮೂಡಿ ಬರಬೇಕು ಎನ್ನುವ ಕರೆಯನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಕೂಡ.

ಬರಹ/ಕವಿತ್ವ ನಮ್ಮೊಳಗಿನ ಶಕ್ತಿ. ಬರಹ ಸ್ವಂತವಾಗದ ಹೊರತು ನಮ್ಮೊಳಗಿನ ಬರಹಗಾರ ಹೊರ ಬರಲಾರ. ಬದುಕಿಗೆ ವರ್ಣ ಪೇರಿಸಿ ಉಸಿರಾಡಿಸುವ ಬಗೆ ಈ ಕವಿತ್ವಕ್ಕೆ ಗೊತ್ತು. ಅದು ದೇಹ ಗೋರಿ ಸೇರಿದರೂ ಕವಿಯನ್ನು ಜೀವಂತವಾಗಿರಿಸುತ್ತದೆ! ಹೌದು, ಯಾರೂ ಹುಟ್ಟುತ್ತಾ ದೊಡ್ಡ ಕವಿಯಾಗಿ ಹುಟ್ಟಲಿಲ್ಲ.ಕೆಲವೊಮ್ಮೆ ತನ್ನ ಮೇಲಿನ ಅಪನಂಬಿಕೆಯಿಂದಲೊ ಅಥವಾ ಯಾವುದಾದರೂ ವಿಮರ್ಶೆಗಳು ತನ್ನಸ್ಥಿತ್ವವನ್ನು ಪ್ರಶ್ನಿಸುವ ಭಯದಲ್ಲಿ ಕವಿತ್ವ ಕಾಡಬೆಳದಿಂಗಳಾಗುತ್ತದೆ. ಅದು ಜೀವ ರಾಶಿಗಳಿಗೆ ಶಕ್ತಿಯಾಗಬೇಕು. ಅವರ ಪರಿಶ್ರಮದ ಫಲವಾಗಿ ಒಂದು ಕಾಲಘಟ್ಟ ಅವರನ್ನು ಆದರಿಸಿ ಗೌರವಿಸಿರುತ್ತದೆ. ಎಲ್ಲಾ ಕವಿ-ಕಲಾವಿದರ ಬದುಕಿನಲ್ಲೂ ಆ ಕಾಲ ಬರುತ್ತದೆ. ಕಾಯಬೇಕಷ್ಟೇ. ಮೊದಲು ಜನಿಸಿದರೇನು, ಕೊನೆಯಲಿ ಜನಿಸಿದರೇನು, ಎಲ್ಲರೂ ಶಾರದಾಂಬೆಯ ಗರ್ಭಸಂಜಾತರೇ! ಪ್ರತಿಭೆಗೆ ತಕ್ಕ ಪ್ರತಿಫಲ ದೊರೆಯುತ್ತದೆ. ನಂಬಿಕೆಯಿರಬೇಕಷ್ಟೆ. ಅವಕಾಶ ಅದೃಷ್ಟಗಳು ಕೆಲವರನ್ನು ಅರಸಿ ಬರುತ್ತವೆ. ಇನ್ನೂ ಕೆಲವರು ತಾನಾಗಿಯೇ ಅದನ್ನು ಅರಸಿ ಹೋಗಬೇಕು. ಎಂದಾದರೂ ಅವಕಾಶ-ಅದೃಷ್ಟಗಳು ನಂಬಿದವರ ಕೈ ಹಿಡಿಯುತ್ತದೆಂಬುದು ನಿತ್ಯಸತ್ಯ!  ಈ ಸತ್ಯದ ಸ್ಪೂರ್ತಿ ನಮ್ಮೊಳಗೂ ಬರಲಿ ಉದ್ದೀಪನವಾಗಲಿ. ಹೀಗೆ ಸಾಹಿತ್ಯವನ್ನು ನಿಂತ ನೀರಾಗಿಸದೆ ಹರಿಯುವ ನದಿಯಂತೆ ನಿರಂತರತೆಯನ್ನು ಮುಂದುವರೆಸುವ ವೇಗವರ್ಧಕಗಳಾಗಿವೆ ಎಂಬ ತಿಳುವಳಿಕೆ ಮುಖ್ಯ. ನಿಜವಾದ ಕೃತಿಯ ನಿರ್ಮಾಣವಾಗುವುದು ಬರಹಗಾರನೊಬ್ಬನ ಸತ್ವ ಹಾಗೂ ವ್ಯಕ್ತಿ ಪ್ರತಿಭೆಯ ಪರಿಣಾಮ. ಸಾಹಿತ್ಯ ಚಳುವಳಿಗಳು ಸ್ವರೂಪತಃ ಸಾಮೂಹಿಕ, ಆದರೆ ಸಾಹಿತ್ಯ ನಿರ್ಮಾಣ ವೈಯಕ್ತಿಕವಾಗಿ ರೂಪುಗೊಳ್ಳುವುದು . ಸಾಹಿತ್ಯದಲ್ಲಿ ಮೂಲಭೂತ ಬದಲಾವಣೆ ಹೊರತರುವ ಸಲುವಾಗಿ ರೂಪುಗೊಳ್ಳುವ ಸಾಹಿತ್ಯವು ಒಂದು ಗಟ್ಟಿಯಾದ ಪರಂಪರೆಯನ್ನು ನಿರ್ಮಿಸುವಂತಿರಬೇಕು ಆ ನಿಟ್ಟಿನಲ್ಲಿ ಸಾಹಿತ್ಯ ಚಳುವಳಿ ಮಹತ್ವದ್ದಾಗಿದೆ ಎಂದು ವಿಷದೀಕರಿಸುತ್ತಾ ಇಂಥ ಮಹೋನ್ನತವಾದ ಸಾಹಿತ್ಯ ಸೃಷ್ಟಿಯ ತಿಳಿವಳಿಕೆಯೊಂದಿಗೆ ಇಂದಿನ ನಮ್ಮ ಬರಹಗಾರರು ತಮ್ಮ ಸುಂದರ ಸೃಷ್ಟಿಗಳಿಗೆ ಕಾರಣೀಭೂತರಾಗಲಿ ಎನ್ನುವ ಆಶಯ ಕೂಡ ನಮ್ಮೆಲ್ಲರಲ್ಲಿದೆ. ಹೀಗೆ ಅಂತರ್ಜಾಲ ಲೋಕದಲ್ಲಿ ನಮ್ಮ-ನಿಮ್ಮೆಲ್ಲರ ಕ್ರಿಯಾಶೀಲತೆ. ಅದು ಬರವಣಿಗೆಯ ಮುಖೇನವಾಗಿರಬಹುದು, ಅಥವಾ ಸಹೃದಯರಾಗಿ ಇರಬಹುದು. ಓದುಗರಾಗಿ ಉತ್ತಮ ವಿಚಾರಗಳನ್ನು ಪ್ರೋತ್ಸಾಹಿಸುವ, ಬಾಲಿಶತನಕ್ಕೊಂದಷ್ಟು ತಿದ್ದುಪಡಿ, ಸಲಹೆ, ಮಾತಿನ ಏಟು ಕೊಟ್ಟರೂ ಬರಹಗಾರನಾಗಿ ಸ್ವೀಕರಿಸಿ ಅದು ತನ್ನ ಮುಂದಿನ ಬರವಣಿಗೆಯನ್ನು ಪಕ್ವಗೊಳಿಸುತ್ತದೆ ಎನ್ನುವ ಮನೋಭಾವ ನಮ್ಮೆಲ್ಲರಲ್ಲೂಒಡಮೂಡಿದೆ ಅನ್ನುವುದು ಸಂತಸದ ವಿಚಾರ ಕೂಡ. ಈ ನಿಟ್ಟಿನಲ್ಲಿ ಇನ್ನಷ್ಟು ಎತ್ತರದ ಮೆಟ್ಟಿಲುಗಳನ್ನು ನಾವು ಏರಬೇಕಾದ ಅವಶ್ಯಕತೆಯೂ ಇದೆ. ಅದಕ್ಕಾಗಿ ನಮ್ಮೆಲ್ಲರ ಪ್ರಯತ್ನವಿರಲಿ ಕೂಡ. ಅದಲ್ಲದೇ ವೈಶಿಷ್ಟ್ಯಪೂರ್ಣ ಸಾಹಿತಿಗಳ ಅಭೂತಪೂರ್ವ ರಚನೆಗಳನ್ನು ನಮ್ಮ ಸ್ವಂತ ಪುಸ್ತಕ ಸಂಗ್ರಹಗಳಲ್ಲಿ ಹೊಂದಿರದಿದ್ದರೆ ಅದೊಂದು ಬಹುದೊಡ್ಡ ಕೊರತೆಯಾದೀತು. ಕನ್ನಡಿಗರಾಗಿ ಕನ್ನಡ ಸಾಹಿತ್ಯಕೃತಿಗಳನ್ನು ಕೊಂಡು ಓದುವ ಪರಿಪಾಠ ಬೆಳೆಸಿಕೊಳ್ಳೋಣ ತನ್ಮೂಲಕ ಕನ್ನಡ ಸಾಹಿತ್ಯಕ್ಕೂ ನಮ್ಮದೇ ಹೃದಯಸ್ಪರ್ಷಿ ಕೊಡುಗೆಯನ್ನೂ ನೀಡೋಣ.

ಮುಂದುವರಿಸಿದಂತೆ, ಒಂದು ಬರಹದ ಬಗೆಗಿನ ವಿಮರ್ಶೆ ಮತ್ತು ಟೀಕೆ ಎಷ್ಟೇ ಕಾರಣಬದ್ಧವಾಗಿದ್ದರೂ ಚುಚ್ಚುವ, ವ್ಯಂಗ್ಯ ಅಥವಾ ಪೂರ್ವಗ್ರಹಪೀಡಿತವಾಗಿರಬಾರದು. ಕನ್ನಡಬ್ಲಾಗ್ ನಲ್ಲಿ ಯಾವುದೇ ವಿಮರ್ಶೆಯೂ ಆ ನಿಟ್ಟಿನಲ್ಲಿ ಹಾದಿ ತಪ್ಪಿಲ್ಲವೆಂಬ ಭರವಸೆಯಿದೆ. ವೈಯುಕ್ತಿಕ ನಿಂದನೆಗಿಳಿದವರನ್ನು, ವಿಚಾರ ಸಂಬಂಧವಿಲ್ಲದ ತುಂಟು ಓತಪ್ರೋತ ಮಾತುಗಾರರನ್ನು ನಿರ್ದಾಕ್ಷೀಣ್ಯವಾಗಿ ಕನ್ನಡಬ್ಲಾಗ್ ನ ನಿಯಮಕ್ಕನುಸಾರವಾಗಿ ಬ್ಲಾಗ್ ನಿಂದ ಅನರ್ಹಗೊಳಿಸಿದ್ದೇವೆ. ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ತಪ್ಪುಗಳನ್ನು ತಿದ್ದಿ, ತೀಡಿ ಒಂದು ಸತ್ವ ಬೆಳವಣಿಗೆಗೆ ಪ್ರತಿಯೊಬ್ಬರೂ ಸಾಕ್ಷಿಯಾಗಿದ್ದಾರೆ. ಇಲ್ಲಿನ ವಿಮರ್ಶೆಗಳ ಅಂತರ್ ಶಕ್ತಿಯಿಂದ ಲೇಖಕ ಮತ್ತೊಂದು ಬರವಣಿಗೆಗೆ ಕೂಡಲೇ ಅನುವಾಗಿ ನಿಧಾನವಾಗಿ ಸಾಹಿತ್ಯದ ಆಯಾಮಗಳಿಗೆ ಒಗ್ಗಿಕೊಳ್ಳುತ್ತಿದ್ದಾನೆ. ಎಲ್ಲರೂ ಸಂಪೂರ್ಣರಲ್ಲ, ಎಲ್ಲಾ ಬರಹಗಳು ಪಕ್ವವಲ್ಲ. ನಮ್ಮ ಕೊರತೆಗಳನ್ನು ಓದುಗರು ತೋರಿಸಿಕೊಡುವಾಗ ಮನಃಪೂರ್ವಕವಾಗಿ ಒಪ್ಪಿಕೊಳ್ಳುವ ತಾಳ್ಮೆಯಿರಬೇಕು. ಬೆಳವಣಿಗೆ ಹಂತ ಹಂತವಾಗಿ ಸಾಗುತ್ತದೆ, ಹೂ ಮೃದು ಅರಿವಾಗಬೇಕಾರೆ, ಮುಳ್ಳಿನಿಂದ ಒಮ್ಮೆ ಚುಚ್ಚಿಸಿಕೊಂಡಿರಬೇಕು. ಕಹಿ ಸಿಹಿಗೆ ಶುದ್ಧ ಕನ್ನಡಿ. ಬರಹದ ಪ್ರಕಾರಗಳನ್ನು ತಿಳಿದುಕೊಂಡವರೊಬ್ಬರು ನಮ್ಮಲ್ಲಿರುವ ಯಾವುದೋ ಕೊರತೆಯನ್ನು ನೀಗಿಸಲು ಪ್ರಯತ್ನ ಪಟ್ಟಾಗ ನಾವು ಗೌರವಿಸಿ ಮುಂದುವರೆಯುವುದು ಕಲಿಯಬೇಕು ಎನ್ನುವ ಜಿಜ್ಞಾಸೆ ಸಾರ್ವಕಾಲಿಕ. ಎಂದೆಂದಿಗೂ ಪ್ರಸ್ತುತ.

ಇನ್ನುಳಿದಂತೆ ಸಾಹಿತಿಗಳು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ತಮ್ಮ ಬರಹದಂತೆ ನಡವಳಿಕೆಯಲ್ಲೂ ಜನ ಸಾಮಾನ್ಯರಿಗೆ ಸಾಹಿತಿಗಳು ಪ್ರೇರಣೆಯಾಗಿದ್ದಾರೆ. ನಮ್ಮ ಬರವಣಿಗೆಗಳು ಕೇವಲ ಪುಸ್ತಕ, ಬ್ಲಾಗು, ನೆಟ್ಟುಗಳಿಗೆ ಸೀಮಿತವಾಗಿರದೆ, ಸಾಮಾಜಿಕ ಜವಾಬ್ದಾರಿಯಿಂದ ಕೂಡಿ, ಪ್ರಗತಿಶೀಲ ವಿಷಯಗಳ ಮೂಲಕ ಜನರಲ್ಲಿ ಜಾಗೃತಿ ತರುವ ಮೂಲಕ ಸಮಾಜದಲ್ಲಿ ಪರಿವರ್ತನೆಯ ಗಾಳಿ ಬೀಸುವತ್ತ ಅನುವು ಮಾಡಿಕೊಡಲಿ. ಕನ್ನಡದ ಮೇಲಿನ ಪ್ರೀತಿ, ಒಲವು ಸಾಮಾಜಿಕ ಅಭಿವೃದ್ಧಿಯತ್ತ ಮುಖ ಮಾಡುವುದು ಮುಖ್ಯ ಅಂಶ. ಹಾಗಾಗಿ ಸಾಹಿತಿಯಾದವನು ಚಿತ್ರಿಸಬೇಕಾದದ್ದು ಇದ್ದುದನ್ನಲ್ಲ, ಇರಬೇಕಾದುದನ್ನು! ವಾಸ್ತವವಾದ ಎಂದರೆ ಸುತ್ತಣ ಬದುಕು ಹಾಗೂ ಪರಿಸರವನ್ನು ಪ್ರಾಮಾಣಿಕವಾಗಿ ಯಥಾವತ್ತಾಗಿ ಚಿತ್ರಿಸಬೇಕೆನ್ನುವ ಒಂದು ಮನೋಧರ್ಮ. ಸಾಹಿತಿಯಾದವನು ಕಂಡದ್ದನ್ನು ಕಂಡ ಹಾಗೆ ಚಿತ್ರಿಸಬೇಕೆನ್ನುವ ಈ ಭಾವ, ಎಲ್ಲ ಕಾಲದ ಸಾಹಿತ್ಯದ ಉದ್ದೇಶಕ್ಕೆ ಹೊರತಾದುದಲ್ಲ ಎಂಬುದು ನಿರ್ವಿವಾದವಾದ ಅಂಶ. ಕಾವ್ಯ ಅಥವಾ ಸಾಹಿತ್ಯದ ವಸ್ತು ಉದಾತ್ತವಾಗಿರಬೇಕು, ಉಳಿದವರಿಗೆ ಉದಾತ್ತ ವ್ಯಕ್ತಿಗಳ ನಡವಳಿಕೆ ಮಾದರಿಯಾಗುವಂತಿರಬೇಕು. ಸಾಹಿತಿಯಿಂದ ಹೊಮ್ಮುವ ಸಾಹಿತ್ಯ ಮಾಡುವ ಕೆಲಸವೆಂದರೆ ಕಂಡದ್ದರ ಅನುಕರಣೆಯಲ್ಲ, ಕಾಣಬಹುದಾದ್ದರ ಅಥವಾ ಸಂಭಾವ್ಯವಾದ ಸಂಗತಿಗಳ ಆದರ್ಶ ರೂಪಗಳನ್ನು ನಿರ್ಮಿಸುವುದು. ಸಾಹಿತ್ಯದಿಂದ ರಾಷ್ಟ್ರಜೀವನ ಹಸನಾಗಬೇಕೆಂಬ, ಜನರ ಮನಸ್ಸು ಸಂಸ್ಕಾರಗೊಳ್ಳಬೇಕೆಂಬ, ಸಮಾಜವನ್ನು ಶ್ರೇಯಸ್ಸಿನ ಕಡೆಗೆ ಕೊಂಡೊಯ್ಯಬೇಕೆಂಬ ಮಾತು ಹಾಗೂ ಮನಸ್ಸು ಸಾಹಿತಿಯದಾಗಿರುತ್ತದೆ. ಇದು ಎಲ್ಲಾ ಸಾಹಿತಿಗಳ ಸಾಹಿತ್ಯದ ಧೋರಣೆಯೂ ಆಗಿರುತ್ತದೆ ಎಂದರೆ ತಪ್ಪಾಗಲಾರದು.

ಅಂತಿಮವಾಗಿ ಒಂದು ಮಾತಂತೂ ಸತ್ಯ. ಬರೆದ್ದದ್ದೆಲ್ಲವೂ ಸಾಹಿತ್ಯವಲ್ಲ.ಎಲ್ಲಾ ಕವಿತೆಗಳೂ ಗೀತೆಗಳಾಗುವುದಿಲ್ಲ, ಎಲ್ಲಾ ಹಾಡೂಗಳೂ ಕವಿತೆಗಳಾಗುವುದಿಲ್ಲ,ಸತ್ವಶಾಲಿಯಾದ ಬರಹದೊಂದಿಗೆ ಬರಹಗಾರರು ಬದ್ಧತೆಯೊಳಗಿದ್ದು ರಚಿಸುವಷ್ಟು ಪ್ರಬುದ್ಧ ಹಾಗೂ ಚಿಂತನಾಶೀಲರಾಗಬೇಕು. ಬರಹಗಾರರೆಲ್ಲ ಈ ಅಂಶಗಳತ್ತ ಚಿತ್ತಹರಿಸಿ ತಮ್ಮ ಲೇಖನಿಗೆ ಶಕ್ತಿ ತುಂಬುವುದರ ಜೊತೆಗೆ, ಜೀವನ ಮೌಲ್ಯಗಳನ್ನು ಅತ್ಯಂತ ಬದ್ಧವಾಗಿ ಎತ್ತಿ ಹಿಡಿದು ಭಾವತೀವ್ರತೆಯಿರುವ ಅರ್ಥಪೂರ್ಣ, ಸಂದೇಶವನ್ನು ಸಾರುವಂತಹ ಸಾಹಿತ್ಯವನ್ನು ರಚಿಸುವತ್ತ ಮುಂದಡಿ ಇಡಲೆಂದು ಆಶಿಸುತ್ತಾ....

ಹೊಸವರ್ಷವನು ಸಂಭ್ರಮದಿ ಆದರಿಸಲು ಮುಂದಡಿಯಿಡೋಣ.

ಶುಭವಾಗಲಿ.

ಸಂಕಲನ: ಪುಷ್ಪರಾಜ್ ಚೌಟ
ಸಹಾಯ, ಸಹಕಾರ: ಕನ್ನಡ ಬ್ಲಾಗ್ ನಿರ್ವಹಣಾ ತಂಡ.

Friday, 30 November 2012

ಸಾಹಿತ್ಯ ಚಳುವಳಿಯು ನಿಂತ ನೀರಾಗದೆ ಹರಿವ ನದಿಯಾಗಲಿ!


ಶತ ಶತಮಾನಗಳಿಂದ ತನ್ನ ವೈವಿಧ್ಯತೆ, ಸತ್ವ ಮತ್ತು ಪಕ್ವತೆಯನ್ನು ಕಾಪಾಡಿಕೊಂಡು ಬಂದಿರುವ ಕನ್ನಡ ಸಾಹಿತ್ಯ ಪ್ರಕಾರಗಳು ಮಾನವೀಯ ಮೌಲ್ಯಗಳನ್ನು ಬದುಕಿನ ಅನುಭವಗಳ ಮೂಲಕ ಸಾರವತ್ತಾಗಿ ಉಣಬಡಿಸುತ್ತಲೇ ಬಂದಿವೆ.ಈ ಸಾಹಿತ್ಯ ಪರಿಕರಗಳೊಂದಿಗೆ ಜೀವ ದ್ರವ್ಯಗಳನ್ನಾಗಿ ಮಾಡಿಕೊಂಡು ಸಮಾಜಮುಖಿ ಚಿಂತನೆಗಳಿಗೆ ಒತ್ತು ಕೊಟ್ಟು ಸಾಹಿತ್ಯ ಸೃಷ್ಟಿಮಾಡಿ ಅಮೋಘ ಯಶಸನ್ನು ಪಡೆದ ಮಹಾನ್ ಮೇಧಾವಿಗಳು, ಕವಿಗಳು, ಲೇಖಕರು, ವಿಮರ್ಶಕರನ್ನು ಹುಟ್ಟಿ ಬೆಳಸಿದ ಮತ್ತು ಅವರಿಂದ ತನ್ನ ಕೀರ್ತಿ, ಮೌಲ್ಯಗಳನ್ನು ಹೆಚ್ಚಿಸಿಕೊಂಡ ಕರುನಾಡಿನ ಕನ್ನಡ ಸಾಹಿತ್ಯ ಮತ್ತು ಅವುಗಳ ನಿರ್ಮಾತೃಗಳ ಬಗ್ಗೆ ತಿಳಿಯುವ ಹಂಬಲ ಪ್ರತಿಯೊಬ್ಬ ಕನ್ನಡಿಗನಲ್ಲೂ ಬರಬೇಕು. ಅದಕ್ಕಿಂತ ಮಿಗಿಲಾಗಿ ಸೃಜನಶೀಲವಾದುದನ್ನು ಸೃಷ್ಟಿಸುವ ಬರಹಗಾರನಾಗಬೇಕೆಂಬ ಹಂಬಲವಿರುವವನಿಗೆ ಇದರ ಅರಿವು ಮತ್ತು ತಿಳಿವಳಿಕೆ ಇರಬೇಕಾದ್ದು ಅತ್ಯವಶ್ಯಕವಾಗಿದೆ. ಆ ನಿಟ್ಟಿನಲ್ಲಿ ನಮ್ಮ ಸಾಹಿತ್ಯ ಸೃಷ್ಟಿಯ ದಿಕ್ಕು ಸಾಗಲೆಂಬ ಆಶಯದೊಂದಿಗೆ ಕನ್ನಡ ಸಾಹಿತ್ಯದ ಕುರಿತಾದ ನನ್ನ ಅನಿಸಿಕೆಗಳನ್ನು ಹರಿಯಬಿಡುತ್ತಿದ್ದೇನೆ. 

ನನ್ನೀ ಅಭಿವ್ಯಕ್ತಿಗೆ ಪ್ರೇರಣೆ ಮತ್ತು ಪ್ರಚೋದನೆ ಮೂಡಿಸಿದ್ದು ಡಾ|ಜಿ .ಎಸ್ .ಶಿವರುದ್ರಪ್ಪನವರ ಸಮಗ್ರ ಗದ್ಯ -2 ಮತ್ತು ವಿ .ಬಿ .ತಾರಕೇಶ್ವರ ಅವರ 'ಸಮಕಾಲೀನ ಕರ್ನಾಟಕ ಚರಿತ್ರೆಯ ವಿವಿಧ ಆಯಾಮಗಳು' ಎಂಬ ಪುಸ್ತಕಗಳು. ಈ ಶತಮಾನದ ಸಾಹಿತಿಗಳಿಗೆ ಸಾಹಿತ್ಯ ನಿರ್ಮಾಣಕ್ಕೆ ಬೇಕಾಗುವ ಅಂಶಗಳತ್ತ ಒಂದು ಮುನ್ನುಡಿಯಾಗಿ ಈ ಪುಸ್ತಕಗಳು ಅಪರೂಪದ್ದೆನಿಸುತ್ತವೆ. ಸಾಮಾನ್ಯವಾಗಿ, ಸಾಹಿತ್ಯ ಎಂದರೇನು? ಅವುಗಳ ಪ್ರಕಾರಗಳೇನು? ಸಾಹಿತ್ಯದ ಬರವಣಿಗೆ ಮತ್ತದರ ಉದ್ದೇಶಗಳೇನು? ಇಂತಹ ಹಲವಾರು ಪ್ರಶ್ನೆಗಳಿಗೆ ಈ ಗ್ರಂಥಗಳು ಉತ್ತರವಾಗುತ್ತವೆ.

ಸಾಹಿತ್ಯ ನಿರ್ಮಾಣ ಕೇವಲ ಪುಸ್ತಕಗಳ ಅಧ್ಯಯನದಿಂದ ಆಗುವ ಕೆಲಸವಲ್ಲ ,ಅದು ಸಾಹಿತಿಯೊಬ್ಬನ ಜೀವನದ ಅನುಭವದಿಂದ ಆಗುವಂತಹುದು. ತನ್ನ ಪರಿಸರದಲ್ಲಿ ಪರಿಚಿತವಾಗುವ ಸಮಕಾಲೀನ ಸಾಹಿತ್ಯ ಮತ್ತು ತನ್ನಂತೆಯೇ ಸಮಕಾಲೀನತೆಗೆ ದನಿ ನೀಡುತ್ತಿರುವ ಸೃಜನಶೀಲ ಲೇಖಕರು ಮತ್ತು ಅವರ ಸಾಹಿತ್ಯ ನಿರ್ಮಾಣದ ಶೈಲಿ ಹೆಚ್ಚು ಪ್ರಸ್ತುತವಾಗಿರುತ್ತದೆ. ನಂತರ ಅವರಿಂದ ಸಾಹಿತ್ಯ ನಿರ್ಮಾಣದ ಕಿಡಿ ಹೊತ್ತಿ ಅವರ ಬರವಣಿಗೆ, ದೃಷ್ಟಿ-ಧೋರಣೆಗಳು ಮತ್ತು ಅಭಿವ್ಯಕ್ತಪಡಿಸುವ ವಿಧಿ-ವಿಧಾನಗಳು ಪರಿಣಾಮ ಬೀರುತ್ತದೆ. ಅದರ ಜೊತೆಯಲ್ಲಿ ಸೃಷ್ಟಿಕರ್ತನು ತನ್ನ ಅಭಿವ್ಯಕ್ತಗೊಳಿಸುವ ವಿವಿಧ ಆಯಾಮಗಳನ್ನು ಬದಲಾಯಿಸಿಕೊಳ್ಳಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ ಸಾಹಿತಿಗಳ ಬರಹದ ಜ್ಞಾನ, ಸ್ವಂತ ಅನುಭವ ಮತ್ತು ತನ್ನ ಬುದ್ಧಿ-ಕ್ಷಮತೆಯಿಂದ ಅವಲೋಕಿಸಿ ಮನದಲ್ಲಿನ ಭಾವನೆಗಳನ್ನು ಕ್ರಿಯಾತ್ಮಕವಾಗಿ ಓದುಗನನ್ನು ತಲುಪುವಂತೆ ಅಭಿವ್ಯಕ್ತಗೊಳಿಸುವ ರೂಪವನ್ನು "ಸಾಹಿತ್ಯ" ಎನ್ನಬಹುದು.

ಸಾಹಿತ್ಯ ಪರಂಪರೆಯ ಪುಟಗಳ ತಿರುವಿ ನೋಡಿದರೆ ಬದುಕೇ ಸಾಹಿತ್ಯ ನಿರ್ಮಾಣದ ಮೂಲ ವಸ್ತುವಾಗಿದೆ. ಕಾಲ ಅನಂತ, ಬದುಕು ನಿರಂತರ! ಇಂತಹ ಅಂತ್ಯವಿಲ್ಲದ ಬದುಕನ್ನು ಅನೇಕ ಮೇಧಾವಿಗಳು ತಮ್ಮ ಅನುಭವದ ಮೂಲಕ ತಮ್ಮದೇ ರೀತಿಯಲ್ಲಿ ಅಭಿವ್ಯಕ್ತಗೊಳಿಸುತ್ತಾರೆ. ನಿರಂತರತೆಯ ಒಂದು ಅಂಗವಾಗಿ ನಿಲ್ಲುವ ಸಮಕಾಲೀನ ಸಾಹಿತಿಯ ಹಿಂದೆ, ಹಿಂದಿನ ಅನುಭವ ಪರಂಪರೆ ಗಾಢವಾಗಿ ಪ್ರವಹಿಸುತ್ತದೆ ಹಾಗೂ ನಿಯಂತ್ರಿಸುತ್ತದೆ ಅಂದರೆ ಪ್ರಸ್ತುತ ಸಾಹಿತಿಯ ಹಿಂದೆ, ಒಂದು ಅಖಂಡವಾದ ಶತಶತಮಾನಗಳ ಜೀವನಾನುಭವ ಮತ್ತು ಅದನ್ನು ಅಂದಂದಿನ ಕಾಲಕ್ಕೆ ಹಿಡಿದಿರಿಸಿದ ಲೇಖಕರ ಅಭಿವ್ಯಕ್ತಿ ಪರಂಪರೆ ಈ ಎರಡೂ ಇರುತ್ತದೆ. ಹೀಗೆ ಹಿಂದಿನದು ಸ್ವಲ ಮಟ್ಟಿಗೆ ಅಪ್ರಜ್ಞಾಪೂರ್ವಕ ಮತ್ತು ಬಹುಮಟ್ಟಿಗೆ ಪ್ರಜ್ಞಾಪೂರ್ವಕ ಪ್ರಯತ್ನಗಳ ಮೂಲಕ, ಸಮಕಾಲೀನ ಲೇಖಕನಲ್ಲಿ ಅವನ ಸಾಹಿತ್ಯ ನಿರ್ಮಾಣಕ್ಕೆ ನೆರವಾಗುತ್ತದೆ. ಈ ದೃಷ್ಟಿಯಿಂದ ಇಂದಿನ ಸಾಹಿತಿಗೆ, ಹಿಂದಿನ ಸಾಹಿತ್ಯ ಕೃತಿಗಳ ಅಧ್ಯಯನ ಅತ್ಯಂತ ಅಗತ್ಯವಾದ ಪರಿಕರಗಳಲ್ಲಿ ಒಂದಾಗಿದೆ.

ಆಯಾ ಭಾಷೆಯ ಚಲನಶೀಲ ಚರಿತ್ರೆಯನ್ನು ಪ್ರತಿಯೊಬ್ಬ ಸಾಹಿತಿಯೂ ತಿಳಿದುಕೊಳ್ಳಬೇಕು. ಅದರಿಂದ ವಿವಿಧ ಕವಿ-ಮನೋಧರ್ಮಗಳ ಅಭಿವ್ಯಕ್ತಿಯನ್ನು ಮತ್ತು ಅಭಿವ್ಯಕ್ತಿಗೊಳಿಸುವಾಗ ಎದುರಿಸಿದ ಸೋಲು-ಗೆಲುವು, ಸಾಧನೆ-ಸಿದ್ಧಿಗಳನ್ನು ಅವುಗಳ ಅಧ್ಯಯನದಿಂದ ಅರಿವಿಗೆ ತಂದುಕೊಳ್ಳಬೇಕು. ಪ್ರಸ್ತುತ ಸಮಾಜದಲ್ಲಿ ಸ್ವದೇಶಿ ಪರಂಪರೆಯಷ್ಟೇ ಸಾಲದು. ಅದರ ಜೊತೆಗೆ ತನ್ನ ಪರಿಚಯ ಮತ್ತು ಕಲಿಕೆಯ ಮೂಲಕ ಅನ್ಯ ಭಾಷಾ ಸಾಹಿತ್ಯಗಳೂ ಅವನ ಪರಂಪರೆಯ ಒಂದು ಭಾಗವಾಗುತ್ತದೆ.ಈ ಎರಡರ ಸಮ್ಮಿಲನವು ಸಾಹಿತಿಯಾಗುವನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ.

ಸಾಹಿತ್ಯ ಪ್ರಕಾರಗಳ ಹಿನ್ನಲೆ ಮತ್ತು ಅವುಗಳನ್ನು ಉಗಮವಾಗಿಸಿದ ಸಾಹಿತ್ಯ ಚಳುವಳಿಗಳ ಬಗ್ಗೆ ಸಹ ತಿಳಿದುಕೊಳ್ಳಲೇಬೇಕು. ಒಂದು ಸಾಹಿತ್ಯ ಪೀಳಿಗೆಯಿಂದ-ಪೀಳಿಗೆಗೆ ಹಸ್ತಾಂತರವಾಗಬೇಕಾದರೆ ಪ್ರಗತಿಶೀಲ ಕವಿಮನಗಳ ದಿಟ್ಟ ಧೋರಣೆಗಳ ಮೂಲಕವೇ ಸಾಧ್ಯ. ಅದೇ ಸಾಹಿತ್ಯ ಚಳುವಳಿ. ಅಂದಿನಿಂದ ಇಂದಿನವರೆಗೆ ಕೃತಿ, ಕರ್ತೃವಿನ ವಿವರಣೆಯೊಂದಿಗೆ ವಿವಿಧ ಕಾಲಘಟ್ಟಗಳಲ್ಲಿ ಸಾಹಿತ್ಯ ಪರಂಪರೆಯನ್ನು ವಿಂಗಡಿಸುವುದನ್ನು ಕಾಣಬಹುದು. ಭಾಷೆಯಲ್ಲಿನ ಬದಲಾವಣೆ ಆಧರಿಸಿ ಹಳೆಗನ್ನಡ, ನಡುಗನ್ನಡ ಮತ್ತು ಹೊಸಗನ್ನಡ ಎಂದಾಗಿಯೂ; ಸಾಹಿತ್ಯ ಪ್ರಕಾರಕ್ಕನುಗುಣವಾಗಿ ಚಂಪೂಯುಗ, ವಚನಯುಗವಾಗಿಯೂ; ಕೃತಿಕಾರರನ್ನಾಧರಿಸಿ ಪಂಪಯುಗ, ಬಸವಯುಗ, ಕುಮಾರವ್ಯಾಸಯುಗ ಎಂದು ಇತಿಹಾಸ ರಚನೆಯಾಗಿವೆ.

ಪಂಪನಿಂದ ನಯಸೇನನವರೆಗೂ ಎರಡು ಶತಮಾನಗಳ ಕಾಲವನ್ನು ಹಳೆಗನ್ನಡ ಸಾಹಿತ್ಯ ಎಂದು ಕರೆಯುತ್ತಾರೆ. ಈ ಸಾಹಿತ್ಯ ಪರಂಪರೆಯಲ್ಲಿ ಧರ್ಮನಿಷ್ಠೆ ಮತ್ತು ಪ್ರಭುನಿಷ್ಠೆ ಇವು ಮೂಲ ಲಕ್ಷಣಗಳಾಗಿವೆ. ಪಂಪನ ಕಾಲದಲ್ಲಿ ರಚಿತವಾದ ಆದಿಪುರಾಣವು ಆಗಿನ ಕಾಲಕ್ಕೆ ಮಹಾಕಾವ್ಯವಾಗಿ ಒಂದು ಉತ್ತಮ ಪ್ರಕಾರವೆನಿಸಿತ್ತು. ಅವನೇ ಹೇಳುವಂತೆ "ಆದಿಪುರಾಣದೊಳರಿವುದು ಧರ್ಮಮಂ ಕಾವ್ಯಧರ್ಮಮುಮಂ" ಎನ್ನುವ ಘೋಷಣೆಯ ಮೂಲಕ ಧರ್ಮ ಮತ್ತು ಕಾವ್ಯಧರ್ಮಗಳೆರಡನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಲೆಗಾರಿಕೆಯನ್ನು ಕಲಿಸಿಕೊಟ್ಟವನು ಪಂಪ. ಸಾಹಿತ್ಯ ಬದಲಾವಣೆ ಎಂದರೆ ಮೂಲಭೂತವಾಗಿ ಬರವಣಿಗೆಯ ಕ್ರಮ ಅಥವಾ ರೀತಿ ಅಥವಾ ಶೈಲಿಯಲ್ಲಿ ಬದಲಾವಣೆ. ಇವು ಆತ್ಮಸಂತೃಪ್ತಿ ಹಾಗು ಜನಪರ ಅಭಿಪ್ರಾಯಗಳ ಮೇರೆಗೆ ಪೂರಕವಾಗಿರುತ್ತವೆ. ಹಾಗೆಯೇ ಪಂಪನಿಗೆ ಎದುರಾದ ರಾಜಭಾಷೆಯಾದ ಸಂಸ್ಕೃತ ಮತ್ತು ಪ್ರಾದೇಶಿಕ ಭಾಷೆ ಕನ್ನಡ. ಇದರ ಸಮಸ್ಯೆ ಬಿಡಿಸಿದ್ದು ಕನ್ನಡ ಮೊದಲ ಕೃತಿ ಎಂದೇ ಪ್ರಸಿದ್ದವಾಗಿರುವ "ಕವಿರಾಜಮಾರ್ಗ" ಅದರ ವಿಧಿ-ವಿಧಾನದಲ್ಲಿ ಕೃತಿ ರಚನೆ ಮಾಡುವಾಗ "ಸಂಸ್ಕೃತ ಪದದ ಬಳಕೆಯಿಂದ ಕನ್ನಡ ನಾಡು-ನುಡಿಯ ಸೊಗಡನ್ನು ಕಬಳಿಸುವಂತಿರಬಾರದೆಂದು ಉಲ್ಲೇಖಿಸಿದ್ದಾನೆ. ಇದನ್ನು ಪಂಪ ಎತ್ತಿ ಹಿಡಿದು ತಿರುಳ್ಗನ್ನಡ ಅಂದರೆ ದೇಸೀ ಕನ್ನಡ ಎಂದು ಕರೆಯುತ್ತಾನೆ. ಆ ಕಾಲಕ್ಕೆ ದೇಸೀ ಸಾಹಿತ್ಯ ನಿರ್ಮಾಣ ಪಂಪನಿಂದ ಆಯಿತು ಅದು 'ಏಕವ್ಯಕ್ತಿ ಚಳುವಳಿ' ಎಂದು ಘೋಷಿತಗೊಂಡಿದೆ. ನಂತರ ನಯಸೇನನು ಸಂಸ್ಕೃತ ಮತ್ತು ಕನ್ನಡವನ್ನು ಬೇರ್ಪಡಿಸಿ ಶುದ್ಧ ಕನ್ನಡವನ್ನು 'ಧರ್ಮಾಮೃತ' ಎಂಬ ಕೃತಿಯ ಮೂಲಕ ರೂಢಿಗೆ ತರುತ್ತಾನೆ.

ಭಕ್ತಿ ಮತ್ತು ಅನುಭಾವ ಸಾಹಿತ್ಯ ಚಳುವಳಿಗಳು ಕನ್ನಡ ಸಾಹಿತ್ಯ ಪರಂಪರೆಗೆ ತಿರುವು ಕೊಟ್ಟ ಅತೀ ಉತ್ತಮ ಚಳುವಳಿಗಳಾಗಿವೆ. ಇದರಲ್ಲಿ ಹರಭಕ್ತಿ ಪ್ರೇರಣೆಯಿಂದಾದ ವಚನಗಳು ಮತ್ತು ಹರಿಭಕ್ತಿ ಪ್ರೇರಣೆಯಿಂದಾದ ದಾಸ ಕೀರ್ತನೆಗಳು ಭಕ್ತಿ ಮತ್ತು ಅನುಭಾವದ ನೆಲೆಗಟ್ಟು ಹೊಂದಿ ಆದ ಹೊಸ ಪ್ರಕಾರಗಳು. ಹಳೆಗನ್ನಡ ಸಾಹಿತ್ಯ ನಿರ್ಮಾಣವಾದಾಗ ವಚನ, ರಗಳೆ, ಷಟ್ಪದಿ, ಕೀರ್ತನೆ ಈ ರೀತಿಯ ಆವಿಷ್ಕಾರಗಳಾದವು. ಒಂದು ಸಾಮಾಜಿಕ, ಧಾರ್ಮಿಕ ಎಚ್ಚರವನ್ನು ಹುಟ್ಟಿಸಿದ್ದು ಈ ಚಳುವಳಿಗಳು ಎಂಬುದು ವಿಶೇಷತೆಯಾಗಿದೆ. ಈ ಹಾದಿಯಲ್ಲಿ ಹನ್ನೆರಡನೆ ಶತಮಾನದ ಬಸವಣ್ಣ, ಚೆನ್ನಬಸವಣ್ಣ, ಅಲ್ಲಮಪ್ರಭು ಮುಂತಾದವರು ಶಿವಭಕ್ತಿಯ ಆಸರೆಯಲ್ಲಿ ಸಾಮಾಜಿಕ ನೆಲೆಗಟ್ಟನ್ನು ಮಾನವೀಯ ಮೌಲ್ಯಗಳಿಂದ ಸುಭದ್ರಗೊಳಿಸಲು ಶ್ರಮಿಸಿದ ಹಿರಿಮೆ ಅವರಿಗೆ ಸಲ್ಲುತ್ತದೆ. ಇದರಲ್ಲಿನ ಧಾರ್ಮಿಕ ನಿಲುವು ವಾಸ್ತವ ಜೀವನವನ್ನು ಒಪ್ಪಿಕೊಂಡ ಒಂದು ಕ್ರಮ, ಆದರೆ ಹನ್ನೆರಡನೇ ಶತಮಾನದಲ್ಲಾದ ಸಾಮಾಜಿಕ-ಧಾರ್ಮಿಕ ಚಳುವಳಿಗಳು ಹೆಣ್ಣು-ಗಂಡೆಂಬ ತಾರತಮ್ಯವಿಲ್ಲದೆ ಪ್ರೋತ್ಸಾಹ ಪಡೆದವು.ಅಕ್ಕಮಹಾದೇವಿ ಮೊದಲ ಕವಯಿತ್ರಿಯಾಗಿ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದರು .ಇದಾದ ನಂತರ ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ನರಹರಿತೀರ್ಥರು ಕನ್ನಡದಲ್ಲಿ ಮೊತ್ತಮೊದಲ ದೇವರನಾಮಗಳನು ಬರೆದರು. ಕೃಷ್ಣದೇವರಾಯನ ಗುರುಗಳಾಗಿದ್ದ ವ್ಯಾಸರಾಯರು ವಿಜಯನಗರಕ್ಕೆ ಬಂದು ಬ್ರಹ್ಮಸೂತ್ರಗಳ ಅರ್ಥವೆಲ್ಲರಿಗೂ ತಿಳಿಯುವಂತೆ ಕನ್ನಡದಲ್ಲಿ ಹೊಸ ಪ್ರಯತ್ನ ಮಾಡಿದರು. ಒಟ್ಟಾರೆ ವಚನಗಳು ಮತ್ತು ಕೀರ್ತನೆಗಳು ಕನ್ನಡ ಸಾಹಿತ್ಯದ ಅತ್ಯಂತ ವಿಶಿಷ್ಟ ರೂಪಗಳು. 

ನಂತರ ಆದ ಆಧುನಿಕ ಕನ್ನಡ ಸಾಹಿತ್ಯ ಚಳುವಳಿಗಳು ಕನ್ನಡ ಸಾಹಿತ್ಯದ ವೇಗ ಮತ್ತು ಅದಕ್ಕೆ ಕಾರಣವಾದ ಸಾಹಿತ್ಯ ಸ್ವರೂಪವು ಬೆರಗು ಹುಟ್ಟಿಸುವಂತವು, ಅದರಲ್ಲಿ ನವೋದಯಸಾಹಿತ್ಯ, ಪ್ರಗತಿಶೀಲಸಾಹಿತ್ಯ, ನವ್ಯಸಾಹಿತ್ಯ ಮತ್ತು ದಲಿತ - ಬಂಡಾಯ ಸಾಹಿತ್ಯ ಚಳುವಳಿಗಳೆಂದು ನಿರ್ದೇಶಿತವಾಗುವುದು.
ಹೀಗೆ ಸಾಹಿತ್ಯ ಚಳುವಳಿಗಳಿಂದ ಈ ಸಾಹಿತ್ಯ ಪರಂಪರೆ ಒಂದು ಮತ್ತೊಂದಕ್ಕೆ ಪೂರಕವಾಗುತ್ತ ,ಸಾಹಿತ್ಯವನ್ನು ನಿಂತ ನೀರಾಗಿಸದೆ ಹರಿಯುವ ನದಿಯಂತೆ ನಿರಂತರತೆಯನ್ನು ಮುಂದುವರೆಸುವ ವೇಗವರ್ಧಕಗಳಾಗಿವೆ ಎಂಬ ತಿಳುವಳಿಕೆ ಮುಖ್ಯ. ನಿಜವಾದ ಕೃತಿಯ ನಿರ್ಮಾಣವಾಗುವುದು ಬರಹಗಾರನೊಬ್ಬನ ಸತ್ವ ಹಾಗೂ ವ್ಯಕ್ತಿ ಪ್ರತಿಭೆಯ ಪರಿಣಾಮ. ಸಾಹಿತ್ಯ ಚಳುವಳಿಗಳು ಸ್ವರೂಪತಃ ಸಾಮೂಹಿಕ, ಆದರೆ ಸಾಹಿತ್ಯ ನಿರ್ಮಾಣ ವೈಯಕ್ತಿಕವಾಗಿ ರೂಪುಗೊಳ್ಳುವುದು . ಸಾಹಿತ್ಯದಲ್ಲಿ ಮೂಲಭೂತ ಬದಲಾವಣೆ ಹೊರತರುವ ಸಲುವಾಗಿ ರೂಪುಗೊಳ್ಳುವ ಸಾಹಿತ್ಯವು ಒಂದು ಗಟ್ಟಿಯಾದ ಪರಂಪರೆಯನ್ನು ನಿರ್ಮಿಸುವಂತಿರಬೇಕು ಆ ನಿಟ್ಟಿನಲ್ಲಿ ಸಾಹಿತ್ಯ ಚಳುವಳಿ ಮಹತ್ವದ್ದಾಗಿದೆ ಎಂದು ವಿಷದೀಕರಿಸುತ್ತಾ ಇಂಥ ಮಹೋನ್ನತವಾದ ಸಾಹಿತ್ಯ ಸೃಷ್ಟಿಯ ತಿಳಿವಳಿಕೆಯೊಂದಿಗೆ ಇಂದಿನ ನಮ್ಮ ಬರಹಗಾರರು ತಮ್ಮ ಸುಂದರ ಸೃಷ್ಟಿಗಳಿಗೆ ಕಾರಣೀಭೂತರಾಗಲಿ ಎನ್ನುವ ಆಶಯ ನನ್ನದು.

ವಂದನೆಗಳೊಂದಿಗೆ,

ಪ್ರೀತಿಯಿಂದ,
ಕನ್ನಡ ಬ್ಲಾಗ್ ನಿರ್ವಾಹಕ ಮಂಡಳಿಯ ಪರವಾಗಿ,
ನಿಮ್ಮ ಜಿ. ಪಿ .ಗಣಿ.
ಸಲಹೆ/ಸಹಕಾರ: ಕನ್ನಡ ಬ್ಲಾಗ್ ನಿರ್ವಹಣಾ ತಂಡ)

Tuesday, 30 October 2012

ಗೀತಸಾಹಿತ್ಯ - ಬದ್ಧತೆಯನ್ನು ಬದಿಗೊತ್ತಿ ಸತ್ವಹೀನ ನಡೆಯತ್ತ!


ಕನ್ನಡ ಚಿತ್ರರಂಗ, ರಂಗಭೂಮಿಯನ್ನು ಸಮೃದ್ಧಗೊಳಿಸಿ ಮನಸೂರೆಗೊಳಿಸುವಂತಿದ್ದ  "ಗೀತ (ಚಿತ್ರ) ಸಂಗೀತ"ವೆಂಬ ಸಾಹಿತ್ಯ ಪ್ರಕಾರವು ಎಗ್ಗಿಲ್ಲದ ಸಿಗ್ಗಿಲ್ಲದ ಅರ್ಥಹೀನ, ಭಾವಹೀನ, ಥಳುಕುಬಳುಕಿನ ಕೊಳಕು ಸಾಹಿತ್ಯ ರಚನೆಗಷ್ಟೇ ಸೀಮಿತಗೊಂಡು ಕವಲುದಾರಿಯತ್ತ ಸಾಗುತ್ತಿದ್ದು ನಮ್ಮ ಇಂದಿನ ಚಿತ್ರ(ಗೀತ) ಸಾಹಿತಿಗಳ ಬೌದ್ಧಿಕ ದಿವಾಳಿತನಕ್ಕೆ ಜೀವಂತ ಸಾಕ್ಷಿಯಾಗಿ ನೂರಾರು ರಚನೆಗಳನ್ನು ಪುಷ್ಠೀಕರಿಸಿ ವಿಷದೀಕರಿಸಬಹುದಾಗಿದೆ. ನಮ್ಮ ಇತ್ತೀಚಿನ ಕೆಲವು ಕವಿಗಳಂತೂ ಮನಸ್ಸಿಗೆ ತೋಚಿದ್ದನ್ನೆಲ್ಲಾ ಗೀಚಿ, ತಮ್ಮದು ಶ್ರೇಷ್ಠ ರಚನೆಯೆಂದು ಬೀಗಿಕೊಳ್ಳುತ್ತಾ ನಾನೊಬ್ಬ ಮಹಾನ್ ಕವಿಯೇ ಆಗಿ ಬಿಟ್ಟಿರುವೆನೆಂಬ ಗುಂಗಿನಲ್ಲಿ ವಿಹರಿಸುತ್ತಾ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನವ ಮೌಲ್ಯಗಳ ಬಗ್ಗೆ ಬದ್ಧತೆಯನ್ನೇ ಕಳೆದುಕೊಂಡಿರುವುದನ್ನು ಗಮನಿಸಿದರೆ ಅತ್ಯಂತ ಕಳವಳವಾಗುತ್ತದೆ. 'ಹೊಡಿ ಮಗ ಹೊಡಿ ಮಗ ಬಿಡಬ್ಯಾಡ ಅಂವನ್ನ...' ಇಂಥ ಪಲ್ಲವಿಯಿಂದಾರಂಭಗೊಳ್ಳುವ ಚಿತ್ರ ಗೀತೆಯೂ ಜನಪ್ರಿಯವಾಗುತ್ತದೆ! ರಚನಾ ಕರ್ತೃವೂ ಪ್ರಸಿದ್ಧಿಗೆ ಬರುತ್ತಾನೆ. ಅದೇ 'ನನ್ನ ಪ್ರೀತಿಯ ದೇವತೆಯೂ ಬಳಿ ಬಂದಳು, ನನ್ನ ಹೃದಯದ ಬಾಗಿಲಿಗೇ ಬೆಳಕಾದಳು...’ ಎನ್ನುವ ಭಾವ ತೀವ್ರತೆಯ ಗೀತೆ ಹಿಟ್ ಆಗುತ್ತಿಲ್ಲದಿರುವುದಕ್ಕೆ ಇಂದಿನ ಪೀಳಿಗೆಯ ಆಸ್ವಾದನೆಯ ದೃಷ್ಠಿ ಎತ್ತ ಸಾಗಿದೆ ಎಂಬುದರ ದ್ಯೋತಕವಾಗಿದೆ.

ಗೀತ ಸಾಹಿತ್ಯದ ಹೆಮ್ಮೆಯ ಖಣಿಗಳಾಗಿದ್ದ ಕಣಗಾಲ್ ಪ್ರಭಾಕರ ಶಾಸ್ತ್ರಿ, ಜಿ.ವಿ.ಅಯ್ಯರ್, ಹುಣಸೂರು ಕೃಷ್ಣಮೂರ್ತಿ, ಕರೀಂಖಾನ್, ಚಿ.ಉದಯಶಂಕರ್, ಸಿದ್ಧಲಿಂಗಯ್ಯ ಅವರಂಥ ಕವಿ ಮಾನ್ಯರು ಅದೆಂಥ ರಮ್ಯ ಮನೋಹರ ಭಾವ ದುಂದುಭಿಯನ್ನು ಹರಿಸಿಲ್ಲ? ನವ ರಸಗಳ ಮಾಧುರ್ಯ ಬೆರೆತ ರಸಸ್ವಾದನೆಯ ಗಮ್ಮತ್ತು ಮನದಲ್ಲಿ ಗುಂಯ್ ಗುಡಿಸುತ್ತಿದ್ದವು. 'ಇವಳು ಯಾರು ಬಲ್ಲೇ ಏನು| ಇವಳ ಹೆಸರು ಹೇಳಲೇನು....,'  'ಬಾ ನಲ್ಲೆ ಬಾ ನಲ್ಲೆ ಮಧುಚಂದ್ರಕೆ...,'  'ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ | ಸುಳಿದಾಡಬೇಡ ಗೆಳತಿ | ಮುದ್ದಾದ ನಿನ್ನ ಮಲ್ಲಿಗೆಯ ಮೈಯ ಸುಟ್ಟಾವು ಬೆಳ್ಳಿ ಕಿರಣ....', 'ಮಾನವನಾಗುವೆಯಾ ಇಲ್ಲಾ ದಾನವನಾಗುವೆಯ, ನೀ ಮಾನವ ಕುಲಕ್ಕೆ ಮುಳ್ಳಾಗುವೆಯಾ.....', ‘ಕೋಟೆ ಕಟ್ಟಿ ಮೆರೆದವರೆಲ್ಲ ಏನಾದರು | ಮೀಸೆ ತಿರುವಿ ಮೆರೆದವರೆಲ್ಲ ಮಣ್ಣಾದರು.....ಮುಂತಾಗಿ ಈ ಸುಂದರ ಗೀತ ಸಾಹಿತ್ಯ ಪ್ರಕಾರಗಳಲ್ಲಿ ಅದೆಂಥ ಅದ್ಭುತ ಸಂದೇಶ ಅಡಗಿದೆ, ಅದೆಷ್ಟು ಹಿತವಡಗಿದೆಯಲ್ಲವೇ? ’ಪ್ರೀತಿನೆ ಆ ದ್ಯಾವ್ರು ತಂದ ಆಸೆ ನಮ್ಮ ಬಾಳ್ವೆಗೆ...', 'ಸ್ವಾಭಿಮಾನದ ನಲ್ಲೆ,ಸಾಕು ಸಂಯಮ ಬಲ್ಲೆ | ಹೊರಗೆ ಸಾಧನೆ ಒಳಗೆ ವೇದನೆ | ಇಳಿದು ಬಾ ಬಾಲೆ......ಹೀಗೆ ಹೆಣ್ಣನ್ನು ನವೀರಾಗಿ ಛೇಡಿಸುವ ಈ ಸುಂದರ ಹಾಡುಗಳ ಜೊತೆಗೆ 'ಬಳಿ ನೀನಿರಲು, ಬಿಸಿಲೇ ನೆರಳು, ಮಧುಪಾನ ಪಾತ್ರೆ ನಿನ್ನೊಡಲು....', ಎಂದೂ ಸೇರಿಸಿ ಶೃಂಗಾರ ಬೆರೆಸಿ ಉಣಿಸಿದ ಕವಿಸಾಲುಗಳು ಇಂದಿಗೂ ಅನುರುಣಿಸುತ್ತವೆಯಲ್ಲವೇ?

ಇಂದಿನ ಗೀತ ಸಾಹಿತಿಗಳ ಬಗ್ಗೆ ಪಾಪ ಎನಿಸುವುದು ಕಿವಿಗಡಚಿಕ್ಕುವ ಸಂಗೀತೋಪಕರಣಗಳ ಸದ್ದಿನಿಂದ ಹೊರಬಂದು ಕಿವಿ ತೆರೆದರೆ ಸಾಕು, ಕೇಳುವುದು ಈ ಕೊಳಕು ಗೀತೆಗಳೇ, ' ಹೂಂ ಅಂದ್ಲು ಆ ದಿನ|ಊಹೂಂ ಅಂದ್ಲು ಈ ದಿನ...', 'ಮನೆತಂಕ ಬಾರೆ ಮನೆತಂಕ| ಹೊಡಿತಿನಿ ಡವ್ವು ಕೊನೆತಂಕ....', 'ಥೂ...ಅಂತಾ ಉಗಿದರೂ ನಿನ್ನೇ ಪ್ರೀತಿ ಮಾಡ್ತೇನಿ ಹೋಗೇ ಹೋಗಮ್ಮ ಹೋಗೇ ಹೋಗೆ....', 'ಯಾಕಿಂಗಾಡ್ತರೋ ಈ ಹುಡುಗರು......', ಇತ್ಯಾದಿ ಇತ್ಯಾದಿ ಇಂಪಿಲ್ಲದ ಕಂಪಿಲ್ಲದ ಸೊಂಪಿಲ್ಲದ ಮಸಾಲೆ ಗೀತೆಗಳು ಸಾರುವ ಸಂದೇಶ, ನೀಡುವ ಆನಂದವಾದರೂ ಏನು? ಈ ಗೀತೆಗಳಿಗಿಂತ ನಮ್ಮ ಹಿಂದಿನ ಗೀತ ಸಾಹಿತಿಗಳ 'ಗಿಲ್ ಗಿಲಿ ಗಿಲಕ್, ಕಾಲು ಗೆಜ್ಜೆ ಝಣಕ್ಕು ಕೈ ಬಳೆ ಠಣಕ್ಕು....', 'ಸಿಟ್ಯಾಕೊ ಸಿಡುಕ್ಯಾಕೋ ನನ್ನ ಜಾಣಾ,ಇಟ್ಟಾಯ್ತು ನಿನಮೇಲೆ ನನ್ನ ಪ್ರಾಣ....', ಮುಂತಾಗಿ ಹೊರಬಂದ ಅದೆಷ್ಟೋ ಹಾಡುಗಳೇ ವಾಸಿ ಎನಿಸುತ್ತವೆ.

'ಬಾ ತಾಯೆ ಭಾರತಿಯೇ, ಭಾವ ಭಾಗೀರಥಿಯೇ...', 'ಕನ್ನಡದ ಕುಲದೇವಿ ಕಾಪಾಡು ಬಾ ತಾಯೆ,ಮುನ್ನಡೆಯ ಕನ್ನಡದ ದಾರಿ ದೀವಿಗೆ ನೀಯೆ....', ಇತ್ಯಾದಿಯಾಗಿ ಬರೆದು ಪಾವನಗೊಳಿಸಿದ ಅಯ್ಯರ್ ಅವರ ಗೀತಗಾನಗಳು ನಮ್ಮ ಹೃನ್ಮನಗಳನ್ನು ತಣಿಸಿ ಆನಂದ ನೀಡುತ್ತವೆ.ಇಂಥ ರಚನೆ ಇಂದೇಕೆ ಇಲ್ಲ? ನಮ್ಮ ಕವಿ ಮನಸುಗಳ ಚಿಂತನಾ ಲಹರಿಗೇನಾಗಿದೆ? ಎಂದು ಪ್ರಶ್ನಿಸಬೇಕಾಗಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವ ಜನಮಾನಸದಲ್ಲಿ ಸದಾಕಾಲ ಉಳಿಯುವಂತಹ ಗೀತ ಸಾಹಿತ್ಯವನ್ನು ರಚಿಸುವಲ್ಲಿ ಎಡವಿರುವುದರ ಹಿಂದೆ ದುಡ್ಡೊಂದನ್ನೇ ಮಾಡಬೇಕೆಂಬ ವ್ಯಾಪಾರ ಮನೋವೃತ್ತಿಯ ಕ್ಷಣಿಕ ಲಾಭದ ಪಾಲಷ್ಟೇ ಗೋಚರವಾಗುತ್ತದೆ!

ಒಲವಿನ ಕವಿ, ಚಿತ್ರ(ಗೀತ)ಸಾಹಿತಿಯಾಗಿದ್ದ ಕಣಗಾಲ್ ಪ್ರಭಾಕರ ಶಾಸ್ತ್ರಿಯವರ ಈ ಹಾಡು ಮನದಲ್ಲಿ ಇಂದಿಗೂ ಮಾರ್ದನಿಸುವುದಿಲ್ಲವೇ?
"ಧುಮ್ಮಿಕ್ಕಿ ಹರಿಯುವ ಜಲಧಾರೆಯಲ್ಲೂ
ದುಂಬಿಯ ಹಾಡಿನ ಝೇಂಕಾರದಲ್ಲೂ
ಘಮ್ಮನೆ ಹೊಮ್ಮಿರುವ ಹೊಸ ಹೂವಿನಲ್ಲೂ
ತುಂಬಿದೆ ಒಲವಿನ ಸಾಕ್ಷಾತ್ಕಾರ....." 
-ಇಂಥ ಸುಂದರ ಅರ್ಥಪೂರ್ಣ ಪದಗಳ ಲಾಲಿತ್ಯದಲ್ಲಿ ಒಡಮೂಡಿದ ಶಾಸ್ತ್ರಿಯವರ ಒಲವಿನೊರತೆಯ ಕವಿತೆಗಳು ಇಂದೇಕೆ ಕಾಣುತ್ತಿಲ್ಲ ಎಂಬ ಕೊರಗು ಇಂದಿನ ಕನ್ನಡ ಚಿತ್ರರಂಗದ್ದು, ಕನ್ನಡ ಗೀತ ಸಾಹಿತ್ಯ ಪ್ರಕಾರದ್ದು ಎನ್ನಬೇಕಾಗಿದೆ. ಒಲವಿನ ಭಾವ ತೀವ್ರತೆಯು ಕಣಗಾಲ ಕವಿತೆಯ ಶಕ್ತಿಯಾಗಿತ್ತೆಂಬುದಕ್ಕೆ ಈ ಕವಿತೆಯನ್ನು ಗಮನಿಸಿ.

ಹಾಡೋಣ ಒಲವಿನ ರಾಗಮಾಲೆ
ಆಡೋಣ ಒಲವಿನ ರಾಸಲೀಲೆ
ಈ ಧರೆಯ ಆ ಗಿರಿಯ ಬೆಳ್ಮುಗಿಲ ಮೇಲೆ
ಹೂಬಳ್ಳಿ ಹೂಗಾಳಿ ನದಿಯಲೆಯ ಮೇಲೆ
ಮೈ ಮರೆಸೋ ಒಲವಿನ ನಾದಲೇಲೆ
ಒಲವೇ....... ಬಾಡದ ಸಂಬಂಧ ಮಾಲೆ| 
-ಈ ತರಹದ ಸುಮಧುರ ಪ್ರೇಮ ಗೀತೆಯು ಜಿ.ಎಸ್.ಎಸ್.ರವರ 'ಹಳೆಯ ಹಾಡು ಹಾಡು ಮತ್ತೆ| ಅದನೆ ಕೇಳಿ ಸುಖಿಸುವೆ, ಹಳೆಯ ಹಾಡಿನಿಂದ ಹೊಸತು ಜೀವನವನೇ ಕಟ್ಟುವೆ| ಎಂಬ ಇಂಪಾದ, ಅರ್ಥವಂತಿಕೆಯ ನವಿರಾದ ಸಾಲುಗಳು ಮನೋಗತವಾಗುತ್ತವೆಯಲ್ಲವೇ?

ಇಂದಿನ ಗೀತ ಸಾಹಿತ್ಯ ಪ್ರಕಾರದಲ್ಲಿ ರಚನೆಯಾಗುತ್ತಿರುವ ಕವಿತೆಗಳಲ್ಲಿ ಸ್ವಲ್ಪವಾದರೂ ಹೆಮ್ಮೆ ಉಳಿದಿದ್ದರೆ ಅದು ಜಯಂತ ಕಾಯ್ಕಿಣಿ ಅವರಂಥ ಸತ್ವಯುತ, ಅಪರೂಪದ ಕವಿಗಳಿಂದ ಎನ್ನಲೇಬೇಕು.(ಕಾಯ್ಕಿಣಿ ಅವರನ್ನು ಉದಾಹರಣೆಗಷ್ಟೇ ತೆಗೆದುಕೊಳ್ಳಲಾಗಿದೆ). ಈ ಹಿಂದೆ ಗೀತ ಸಾಹಿತ್ಯಕ್ಕೆ ಕೃತಿ ರಚನೆಯಾದ ಆನಂತರ ರಾಗ ಸಂಯೋಜನೆ ಮಾಡಬೇಕಾಗಿತ್ತು. ಅದು ತುಂಬಾ ಕಷ್ಟದಾಯಕವಾಗಿತ್ತು. ಚಲನ ಚಿತ್ರದ ಸನ್ನಿವೇಶಕ್ಕೆ ತಕ್ಕಂತೆ ಹಾಡು ಬರೆಯಬೇಕಾದಾಗ, ಅದರ ನಿರ್ದೇಶಕ ಗೀತ ಸಾಹಿತಿಯನ್ನು ಆ ಹಾಡಿನ ಚಿತ್ರೀಕರಣ ನಡೆಯುವ ಸ್ಥಳವನ್ನು ತೋರಿಸಿ, ಕಥೆಯ ಸನ್ನಿವೇಶ ಸಂದರ್ಭವನ್ನು ವಿವರಿಸಿ ಅದಕ್ಕೆ ತಕ್ಕಂತೆ ಹಾಡು ಬರೆಸುತಿದ್ದರು. ಆದರೆ ಈಗ ಮೊದಲೇ ಸಿದ್ಧಪಡಿಸುವ ರಾಗಕ್ಕೆ ತಕ್ಕಂತೆ ಸಾಹಿತ್ಯ ರಚಿಸಬೇಕಾಗುತ್ತದೆ. ರಚನೆಕಾರ ಈ ಇಕ್ಕಟ್ಟಿನಲ್ಲಿ 'ಮೀಟರ್' ಎನ್ನುವ ಕಟ್ಟುಪಾಡಿಗೆ ಗಂಟುಬಿದ್ದು ಯದ್ವಾತದ್ವಾ ಸಾಹಿತಿಯಾಗುವುದು ಸಹಜ. ಉದಾ; ರಾಂಬೋ ಚಿತ್ರದ ಹಾಡು ''ಜಯ ಜಯ ಜಾಕೆಟ್ಟು, ಜಯನ್ ಗಂಡ ರಾಕೆಟ್'' ಇದು ಯಾವ ಗೀತ ಸಾಹಿತ್ಯವೋ ಅರ್ಥವಾಗಲಿಲ್ಲ. ಹಾಗಾಗಿ ಇತ್ತೀಚಿನ ಅಧ್ವಾನದ ಗೀತ ಸಾಹಿತ್ಯಕ್ಕೆ ಕವಿ ಕಾರಣನಲ್ಲ. ಗೀತ ಸಾಹಿತಿಯೂ ಒಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರ ಆಣತಿಯಂತೆ ಬರೆಯಬೇಕಾಗುತ್ತದೆ. ಇಲ್ಲಿ ಕವಿಗೆ ಯಾವುದೇ ಸ್ವಾತಂತ್ರ್ಯ ಇರುವುದಿಲ್ಲವೆಂಬುದನ್ನು ಅರಿಯಬೇಕಾಗುತ್ತದೆ. 

ಹೊಸತಲೆಮಾರಿಗೆ ನವ ಗೀತಸಾಹಿತ್ಯ ರಚಿಸಿ ರಾಗ ಸಂಯೋಜಕರಾದ ಹಂಸಲೇಖ, ಗೀತಪ್ರಿಯ, ವಿಜಯನಾರಸಿಂಹ, ಆರ್. ಎನ್. ಜಯಗೋಪಾಲರಂಥವರಲ್ಲದೇ, ಗೀತ ಸಾಹಿತ್ಯಕ್ಕಷ್ಟೇ ತಮ್ಮನ್ನು ಮುಡಿಪಾಗಿಡದ ದೊಡ್ಡರಂಗೇಗೌಡರಂಥಹ ಕವಿವರ್ಯರೂ ಪರಸಂಗದ ಗೆಂಡೆತಿಮ್ಮ ಚಿತ್ರದ ತೇರ ಏರಿ ಅಂಬರದಾಗೆ ನೇಸರ ನಗುತಾನೆ ಹಾಗು ನೋಟದಾಗೆ ನಗೆಯ ಮೀಟಿ ಮೋಜಿನಾಗೆ ಎಲ್ಲೆಯ ದಾಟಿ ಎಂಬ ಹಾಡು ಬರೆದು ಪ್ರಸಿದ್ಧರಾದರು. ಈಗಲೂ ಸಹ ಚಲನಚಿತ್ರಕ್ಕೆ ಗೀತೆಗಳನ್ನು ಬರೆಯುತಿದ್ದಾರೆ. ಅದಲ್ಲದೇ ಪಿ.ಲಂಕೇಶ್ ಸಾಹಿತಿಯಾಗಿ ಬಹು ದೊಡ್ಡ ಹೆಸರು. ಲೇಖಕರು ಉತ್ತಮ ಕವಿಗಳು ಕೂಡ. ಇವರೇ ಬರೆದು ನಿರ್ದೇಶನ ಮಾಡಿದ ಎಲ್ಲಿಂದಲೋ ಬಂದವರು ಚಿತ್ರದ ಹಾಡು ಕೆಂಪಾದವೋ ಎಲ್ಲ ಕೆಂಪಾದವೋ, ಹಸಿರಿದ್ದ ಗಿಡಮರ, ಬೆಳ್ಳಗಿದ್ದ ಹೂವೆಲ್ಲ ನೆತ್ತಾರ ಕುಡಿದಾಂಗೆ ಕೆಂಪಾದವೋ ಎಂಬ ಗೀತೆ ಸಮಾಜದಲ್ಲಿನ ಅಸಮತೋಲನವನ್ನು ಎತ್ತಿ ಹಿಡಿದ ಕವಿತೆ. ಈ ರೀತಿಯ ಗೀತ ಸಾಹಿತ್ಯವನ್ನು ನಾವು ಇಂದಿನ ಚಲನಚಿತ್ರದಲ್ಲಿ ಕಾಣುವುದಕ್ಕೆ ಸಾಧ್ಯವಿಲ್ಲ. ಡಾ|ಚಂದ್ರಶೇಖರ ಕಂಬಾರರು ಕೈ ಆಡಿಸದ ಕ್ಷೇತ್ರವಿಲ್ಲ ಎಂದು ಹೇಳಬೇಕು. ಪ್ರಸಿದ್ಧ ನಾಟಕಕಾರರು, ಜಾನಪದ ಶೈಲಿಯ ರಚನೆಯಲ್ಲಿ ಎತ್ತಿದ ಕೈ. ಇವರು ಬರೆದು ನಿರ್ದೇಶನ ಮಾಡಿದ ಕಾಡು ಕುದುರೆ ಚಿತ್ರದ ಕಾಡುಕುದುರೆ ಓಡಿ ಬಂದಿತ್ತಾ ಎಂಬ ಗೀತೆಯನ್ನು ಕೇಳುತಿದ್ದಂತೆ ಈಗಲೂ ಕೇಳುಗನ ಹೃದಯ ರೋಮಾಂಚನಗೊಳ್ಳುತ್ತದೆ. ಮೇಲಿನ ಎಲ್ಲಾ ಉದಾಹರಣೆಗಳ ಹೊರತಾಗಿಯೂ ಕುವೆಂಪು, ದ.ರಾ.ಬೇಂದ್ರೆಯಂಥ ಮಹಾನ್ ಕವಿಗಳ ರಚನೆಗಳನ್ನು ಅಳವಡಿಸಿಕೊಂಡು ಒಂದು ಕಾಲದಲ್ಲಿ ಶ್ರೀಮಂತಿಕೆಯನ್ನು ಪ್ರದರ್ಶಿಸಿತ್ತು ನಮ್ಮ ಚಿತ್ರಜಗತ್ತು ಎಂದರೆ ತಪ್ಪಾಗಲಾರದು.

ಇನ್ನು ಯೋಗರಾಜ್ ಭಟ್ಟರು ಮುಂಗಾರು ಮಳೆಯಲ್ಲಿ ''ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ. ನಿನ್ನ ಮುಗಿಲ ಸಾಲೆ, ಧರೆಯ ಕೊರಳ ಪ್ರೇಮದ ಮಾಲೆ ಸುರಿವ ಒಲುಮೆಯ ಜಡಿ ಮಳೆಗೆ ಪ್ರೀತಿ ಮೂಡಿದೆ'' ಎಂದು ಹೃದಯವನ್ನು ಬಸಿದು ಬರೆದವರು, ಜಂಗ್ಲೀ ಚಿತ್ರಕ್ಕೆ '' ಹಳೆ ಪಾತ್ರೆ ಹಳೆ ಕಬ್ಬಿಣ ಹಳೆ ಪೇಪರ್ ತಾರಾ ಹೋಯಿ '' ಅನ್ನೋದನ್ನು ಬರೆಯುವುದಲ್ಲದೆ ಮುಂದುವರಿದು ಚಿಂಗಾರಿ ಎಂಬ ಚಿತ್ರದಲ್ಲಿ ಅರ್ಥವೇ ಇಲ್ಲದ '' ಕೈ ಕೈಯ್ಯ ಕಚ್ಚಾಸುಡಾ ಬೊಸುಡಾ, ತಲೆ ಕೆಟ್ಟ ಭಟ್ಟ ಎಬುಡಾ ತಬುಡಾ, ನಡಬಾರಿ ಗಟ್ಟಿ ಕಾ ಮುಕುಡ'' ಎಂದು ಬರೆಯುತ್ತಾರೆ. ಮೊದಲೇ ಸಿದ್ಧ ಪಡಿಸಿದ್ದ ರಾಗಕ್ಕೆ ಸುಮ್ಮನೆ ಈ ಅಧ್ವಾನದ ಪದಗಳನ್ನು ತುಂಬಿದ್ದಾರೆ. ಅವರೇ ಹೇಳಿಕೊಳ್ಳುವಂತೆ ಈ ಹಾಡಿಗೆ ಯಾವುದೇ ಅರ್ಥವಿಲ್ಲ. ಈ ಹಾಡನ್ನು ಪ್ರಯೋಗಶೀಲತೆಯ ಹೆಸರಲ್ಲಿ ಪ್ರೇಕ್ಷಕ ಏನನ್ನಾದರೂ ಸ್ವೀಕರಿಸುತ್ತಾನೆ ಎಂಬ ದುರಹಂಕಾರದಿಂದ ಬರೆಯುತ್ತಾರೆ. ಉತ್ತಮ ಚಲನ ಚಿತ್ರಗೀತ ಸಾಹಿತ್ಯ ಹೊರಹೊಮ್ಮುವುದಕ್ಕೆ ನಿರ್ದೇಶಕ ಹಾಗು ನಿರ್ಮಾಪಕರು ಸಹ ಮನಸ್ಸು ಮಾಡಬೇಕು. ಇಂದಿಗೂ ಸಹ ಒಬ್ಬ ನಿಜವಾದ ಪ್ರೇಕ್ಷಕ ಕೇಳುವುದು ದೊಡ್ಡ ರಂಗೇ ಗೌಡರು ರಚಿಸಿರುವ ''ಜನ್ಮ ನೀಡಿದ ಭೂ ತಾಯಿಯ, ನಾ ಹೇಗೆ ತಾನೇ ತೊರೆಯಲಿ'' ಎಂಬ ಗೀತೆಯನ್ನು. ಚಿ:ಉದಯಶಂಕರ್ ರಚಿಸಿರುವ '' ಮಾಮರವೆಲ್ಲೋ ಕೋಗಿಲೆಯೆಲ್ಲೋ , ಏನೀ ಸ್ನೇಹ ಸಂಬಂಧ, ಎಲ್ಲಿಯದು ಈ ಅನುಬಂಧ'', ಕಣಗಾಲ್ ಪ್ರಭಾಕರ ಶಾಸ್ತ್ರಿಗಳು ರಚಿಸಿರುವ ವೀರಕೇಸರಿ ಚಿತ್ರದ ''ಮೆಲ್ಲುಸಿರೇ ಸವಿಗಾನ ''  ಎಂಬ ಗೀತೆಗನ್ನು ಮಾತ್ರವೇ.  ಅರ್ಥವಿಲ್ಲದ ರಚನೆಗಳನ್ನು ರಚಿಸಿ ಮನರಂಜನೆಯ ಹೆಸರಲ್ಲಿ ಸಂಸ್ಕೃತಿ ಹಾಗು ಕನ್ನಡ ಸಾಹಿತ್ಯದ ತುಚ್ಛೀಕರಣ ಸಲ್ಲದು. ಇದು ಕೀಳು ಅಭಿರುಚಿಯ ನಿರ್ಮಾಪಕರಿಗೆ ಮಾತ್ರ ಸಾಧ್ಯ. ವ್ಯಾಪಾರ ವ್ಯವಹಾರದಲ್ಲಿ ಲಾಭವೇ ಮುಖ್ಯ,  ಹಾಗೆಂದು ಪ್ರೇಕ್ಷನ ಅಭಿರುಚಿ ಇವರಿಗೆ ನಗಣ್ಯವಾಗಬಾರದು.

ನಮ್ಮ ಕನ್ನಡ ಬ್ಲಾಗಿನ ಸಾವಿರಾರು ಸಕ್ರಿಯ ಸದಸ್ಯರ ಪೈಕಿ ನೂರಾರು ಕವಿಗಳ ಅನುಭೂತಿ ನೀಡುವಂತ ಅರ್ಥಪೂರ್ಣ ಕವಿತೆಗಳನ್ನು ಓದಿ ನಾನು ಆಸ್ವಾದಿತನಾಗಿರುವೆನೆಂದು ತಿಳಿಸಲು ಹೆಮ್ಮೆಯಾಗುವುದು. ಈ ಕವಿಗಳಲ್ಲಿ ಕೆಲವರು ಪ್ರಸಿದ್ಧರು ಇನ್ನು ಕೆಲವರು ಪ್ರಸಿದ್ಧಿಗೆ ಬರಬೇಕಾದವರೂ ಆಗಿದ್ದಾರೆ. ಶ್ರೀಯುತರುಗಳಾದ ಹೃದಯಶಿವ , ರವಿ ಮೂರ್ನಾಡು, ಬದರಿನಾಥ ಪಲವಲ್ಲಿ, ಲತಾ ದಾಮ್ಲೆ, ಭೀಮಸೇನ, ಗುರುನಾಥ ಬೋರಗಿ, ತಿರುಮಲೈ ರವಿ, ಸತೀಶ ರಾಮನಗರ, ಮೋಹನ್ ಕೊಳ್ಳೆಗಾಲ, ಪುಷ್ಪರಾಜ್ ಚೌಟ, ಈಶ್ವರ ಕಿರಣ ಭಟ್ಟ, ಪವನ ಹರಿತಸ, ಪ್ರಮೋದ್ ಡೀವಿ, ಪ್ರವರ ಕೊಟ್ಟೂರು, ಪ್ರಸಾದ್ ವಿ ಮೂರ್ತಿ, ಗಣೇಶ ಜೀ ಪಿ, ಪರೇಶ್ ಸರಾಫ್, ಆರತಿ ಘಟಿಕರ್, ವಿಶ್ವಜಿತ್ ರಾವ್, ಕೃಷ್ಣಮೂರ್ತಿ ಭದ್ರಾವತಿ, ಕೃಷ್ಣಮೂರ್ತಿ ಅವರಂಥ ಕವಿಗಳಿಗೆ ಈ ಗೀತ ಸಾಹಿತ್ಯವನ್ನು ಸೃಷ್ಟಿಸುವ ಅದಮ್ಯ ಶಕ್ತಿ ಇರುವುದನ್ನು ನೋಡಿದ್ದೇನೆ. (ನನ್ನ ನೆನಪಿನಂಗಳದಿಂದ ತೆಕ್ಕೆಯಲ್ಲಿನ ಕೆಲವು ಹೆಸರುಗಳನ್ನಷ್ಟೇ ಉದ್ಗರಿಸಿದ್ದೇನೆ. ಇನ್ನೂ ಹಲವಾರು ಬರಹಗಾರರನ್ನು ನಮೂದಿಸಲು ಇನ್ನಷ್ಟು ಕಾಲಾವಕಾಶ ಬೇಕು ಮತ್ತು ಅದರ ಅಳವಡಿಕೆ ನಮ್ಮ ಮುಂದಿನ ಲೇಖನದಲ್ಲಿ).  ಇಂಥಹ ಎಲೆಮರೆಕಾಯಿಯಂಥವರು ರಚಿಸಿದ ಎಲ್ಲವೂ ಗೀತ ಸಾಹಿತ್ಯವಾಗಿಲ್ಲ.  ಆದರೆ ಗೀತ ಸಾಹಿತ್ಯ ಸೃಷ್ಟಿಸುವಷ್ಟು ಬೌದ್ಧಿಕ ವಿಸ್ತಾರವಿರುವುದನ್ನು ಇವರಲ್ಲಿ ನಾವು ಗಮನಿಸಬಹುದು. 

ಅಂತಿಮವಾಗಿ ಒಂದು ಮಾತಂತೂ ಸತ್ಯ. ಎಲ್ಲಾ ಕವಿತೆಗಳೂ ಗೀತೆಗಳಾಗುವುದಿಲ್ಲ, ಎಲ್ಲಾ ಹಾಡೂಗಳೂ ಕವಿತೆಗಳಾಗುವುದಿಲ್ಲ,ಇವುಗಳನ್ನು ಅರ್ಥೈಸುವಷ್ಟು ಶಕ್ತನೂ ನಾನಲ್ಲ. ಆದರೆ ನಮ್ಮ ಬ್ಲಾಗಿನ ನೂರಾರು ಸತ್ವಶಾಲಿಯಾದ ಕವಿಗಳು ಬದ್ಧತೆಯಿದ್ದು ರಚಿಸುವಷ್ಟು ಪ್ರಬುದ್ಧ ಹಾಗೂ ಚಿಂತನಾಶೀಲರಾಗಿದ್ದಾರೆ.ಕನ್ನಡ ಬ್ಲಾಗಿನ ನಮ್ಮೆಲ್ಲ ಹಿರಿ/ಕಿರಿಯ ಕವಿ ಹೃದಯರು ಈ ಅಂಶಗಳತ್ತ ಚಿತ್ತಹರಿಸಿ ತಮ್ಮ ಲೇಖನಿಗೆ ಶಕ್ತಿ ತುಂಬುವುದರ ಜೊತೆಗೆ,ಜೀವನ ಮೌಲ್ಯಗಳನ್ನು ಅತ್ಯಂತ ಬದ್ಧವಾಗಿ ಎತ್ತಿ ಹಿಡಿದು ಭಾವತೀವ್ರತೆಯಿರುವ ಅರ್ಥಪೂರ್ಣ,ಸಂದೇಶವನ್ನು ಸಾರುವಂತಹ ಗೀತ ಸಾಹಿತ್ಯ ಪ್ರಕಾರವನ್ನು ರಚಿಸುವತ್ತ ಮುಂದಡಿ ಇಡಲೆಂದು ಆಶಿಸುತ್ತಾ ನಮ್ಮ ಬ್ಲಾಗಿನ ಸದಸ್ಯರುಗಳಿಗೆಲ್ಲ ಈ ಸಂಪಾದಕೀಯವು ಮಾಹಿತಿಪೂರ್ಣವಾಗಿದ್ದು ಇಷ್ಟವಾಗುವುದೆಂದು ಭಾವಿಸುತ್ತೇನೆ.

ಎಲ್ಲರಿಗೂ ಶುಭವಾಗಲಿ!

ಪ್ರೀತಿಯಿಂದ
ಕನ್ನಡ ಬ್ಲಾಗ್ ನಿರ್ವಾಹಕ ಮಂಡಳಿಯ ಪರವಾಗಿ,
 ಬನವಾಸಿ ಸೋಮಶೇಖರ್
===== 
ಸಲಹೆ/ಸಹಕಾರ: ಕನ್ನಡ ಬ್ಲಾಗ್ ನಿರ್ವಹಣಾ ತಂಡ.

Thursday, 27 September 2012

ಸಾಮಾಜಿಕ ಬದಲಾವಣೆಯತ್ತ ಸಾಹಿತಿಯ ಬದ್ಧತೆ!


ಸಾಹಿತಿಯಾದವನು ಚಿತ್ರಿಸಬೇಕಾದದ್ದು ಇದ್ದುದನ್ನಲ್ಲ, ಇರಬೇಕಾದುದನ್ನು! ವಾಸ್ತವವಾದ ಎಂದರೆ ಸುತ್ತಣ ಬದುಕು ಹಾಗೂ ಪರಿಸರವನ್ನು ಪ್ರಾಮಾಣಿಕವಾಗಿ ಯಥಾವತ್ತಾಗಿ ಚಿತ್ರಿಸಬೇಕೆನ್ನುವ ಒಂದು ಮನೋಧರ್ಮ. ಸಾಹಿತಿಯಾದವನು ಕಂಡದ್ದನ್ನು ಕಂಡ ಹಾಗೆ ಚಿತ್ರಿಸಬೇಕೆನ್ನುವ ಈ ಭಾವ, ಎಲ್ಲ ಕಾಲದ ಸಾಹಿತ್ಯದ ಉದ್ದೇಶಕ್ಕೆ ಹೊರತಾದುದಲ್ಲ ಎಂಬುದು ನಿರ್ವಿವಾದವಾದ ಅಂಶ. ಕಾವ್ಯ ಅಥವಾ ಸಾಹಿತ್ಯದ ವಸ್ತು ಉದಾತ್ತವಾಗಿರಬೇಕು, ಉಳಿದವರಿಗೆ ಉದಾತ್ತ ವ್ಯಕ್ತಿಗಳ ನಡವಳಿಕೆ ಮಾದರಿಯಾಗುವಂತಿರಬೇಕು. ಸಾಹಿತಿಯಿಂದ ಹೊಮ್ಮುವ ಸಾಹಿತ್ಯ ಮಾಡುವ ಕೆಲಸವೆಂದರೆ ಕಂಡದ್ದರ ಅನುಕರಣೆಯಲ್ಲ, ಕಾಣಬಹುದಾದ್ದರ ಅಥವಾ ಸಂಭಾವ್ಯವಾದ ಸಂಗತಿಗಳ ಆದರ್ಶ ರೂಪಗಳನ್ನು ನಿರ್ಮಿಸುವುದು. ಸಾಹಿತ್ಯದಿಂದ ರಾಷ್ಟ್ರಜೀವನ ಹಸನಾಗಬೇಕೆಂಬ, ಜನರ ಮನಸ್ಸು ಸಂಸ್ಕಾರಗೊಳ್ಳಬೇಕೆಂಬ, ಸಮಾಜವನ್ನು ಶ್ರೇಯಸ್ಸಿನ ಕಡೆಗೆ ಕೊಂಡೊಯ್ಯಬೇಕೆಂಬ ಮಾತು ಹಾಗೂ ಮನಸ್ಸು ಸಾಹಿತಿಯದಾಗಿರುತ್ತದೆ. ಇದು ಎಲ್ಲಾ ಸಾಹಿತಿಗಳ ಸಾಹಿತ್ಯದ ಧೋರಣೆಯೂ ಆಗಿರುತ್ತದೆ ಎಂದರೆ ತಪ್ಪಾಗಲಾರದು.

ಸಾಹಿತಿಗಳ ಬಗ್ಗೆ ಜನಸಾಮಾನ್ಯರಲ್ಲಿ ಒಂದು ರೀತಿಯ ಗೌರವ ಭಾವನೆಯಿದೆ. ಸಾಹಿತಿಯಾದವನಿಗೆ ಮುಖ್ಯವಾಗಿ ಇರಬೇಕಾದ ಗುಣವೆಂದರೆ, ತನ್ನ ಸುತ್ತ ಮುತ್ತಣದ ಸಮಾಜವನ್ನು ಕುರಿತ ಹೊಸ ಎಚ್ಚರ ಹುಟ್ಟಿಸುವುದು. ನಾವೆಲ್ಲರೂ ಸಮಾಜದ ಒಂದು ಭಾಗ, ಈ ಕಾರಣದಿಂದ ತಾನು ಬೇರೂರಿ ಬದುಕುವ ಸಮಾಜದ ವಿವರವಾದ ಹಾಗೂ ಯಥಾವತ್ತಾದ ಚಿತ್ರವನ್ನು ಸಾಹಿತ್ಯದ ಮೂಲಕ ಜನಸಾಮಾನ್ಯರಿಗೆ ಕಟ್ಟಿಕೊಡುವುದು, ಸಮಾಜದ ಅಸಾಂಗತ್ಯಗಳನ್ನು ಬಯಲಿಗಿಡುವುದು, ಮತ್ತು ಆ ಮೂಲಕ ಓದುಗರ ಸಾಮಾಜಿಕ ಅರಿವನ್ನು ವಿಸ್ತರಿಸುವುದು ತನ್ನ ಮೊದಲ ಕರ್ತವ್ಯ ಎಂಬ ನಂಬಿಕೆ ನಿಜವಾದ ಬರಹಗಾರನಿಂದ ಹೊಮ್ಮಿದಾಗ ಮಾತ್ರ ಬದಲಾವಣೆಯನ್ನು ನಿರೀಕ್ಷಿಸಬಹುದು. ವ್ಯಕ್ತಿನಿಷ್ಠತೆಯ ಬದಲು, ಒಂದು ಬಗೆಯ ವಸ್ತುನಿಷ್ಠ ನಿಲುವಿನಲ್ಲಿ ನಿಂತು ತನ್ನ ಸುತ್ತಣ ಸಾಮಾಜಿಕ ಪರಿಸರದಲ್ಲಿ ಇದ್ದುದನ್ನು ಇದ್ದ ಹಾಗೆ, ಯಾವ ಉತ್ಪ್ರೇಕ್ಷೆ, ಆದರ್ಶಗಳ ಸೋಂಕೂ ಇಲ್ಲದೆ, ಯಾವ ರೀತಿಯ ನಾಸ್ತಿಕತೆ ಅಥವಾ ಆಶಾವಾದದ ಸ್ಪರ್ಶವಿಲ್ಲದಂತೆ ಚಿತ್ರಿಸುವುದು ಸಮಾಜಮುಖಿ ಬರಹಗಾರನಿಗೆ ಮಾತ್ರ ಸಾಧ್ಯ. ಹಾಗೆಂದು ಎಲ್ಲರೂ ಬರೆಯುವುದಕ್ಕೆ ಪ್ರಾರಂಭಿಸಿದರೆ ಎಲ್ಲರೂ ಸಾಹಿತಿಗಳಾಗಲು ಸಾಧ್ಯವಿಲ್ಲ. ಸಾಹಿತಿಗಳು ಸಾಮಾಜಿಕ ಬದ್ಧತೆಯನ್ನು ಹೊಂದಿದವರಾಗಿದ್ದು, ವಸ್ತುನಿಷ್ಠವಾಗಿ ಚಿಂತಿಸುವ ಬರೆಯುವ ಹಾಗೂ ಜನಸಾಮಾನ್ಯರ ಬವಣೆಗಳ ಬಗ್ಗೆ ಬೆಳಕು ಚೆಲ್ಲುವ ದಾರ್ಶನಿಕರಿವರು ಎಂಬ ಅಗೋಚರ ಅಂಕಿತವನ್ನು ಮನಸಲ್ಲೇ ಹಾಕಿಕೊಂಡ ಓದುಗ ಮಹಾಶಯನನ್ನು ಕಾಣಬಹುದು.

ಸಾಹಿತ್ಯ ಆಯಾ ಕಾಲಘಟಕ್ಕೆ ಅನುಗುಣವಾಗಿ ಬದಲಾಗುತ್ತಾ ಸಾಗುವುದನ್ನು ನಾವು ಕಾಣಬಹುದು. ಹಳಗನ್ನಡ ಸಾಹಿತ್ಯ, ನಡುಗನ್ನಡ ಸಾಹಿತ್ಯ, ಹೊಸಗನ್ನಡ ಸಾಹಿತ್ಯ ಬಂಡಾಯ ಸಾಹಿತ್ಯ, ನವೋದಯ ಸಾಹಿತ್ಯ, ಈಗ ಪ್ರಗತಿಪರ ಸಾಹಿತ್ಯ . ನವ್ಯ ಸಾಹಿತ್ಯ. ಜೊತೆಗೆ ದಾಸ ಸಾಹಿತ್ಯ, ವಚನ ಸಾಹಿತ್ಯಾದಿಯಾಗಿ ಹತ್ತು ಹಲವು ಪ್ರಕಾರಗಳು ಅರಳಿ ನಿಂತದ್ದು ಅರಿವಿನ ವಿಷಯ. ಹಾಗೆಯೇ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವ ಬರಹಗಾರನ ದೃಷ್ಟಿಕೋನಗಳು ಸಹ ಒಬ್ಬರಿಂದ ಒಬ್ಬರಿಗೆ ವ್ಯತ್ಯಾಸವಾಗುತ್ತಾ ಹೋಗುತ್ತದೆ. ಒಬ್ಬ ಬರಹಗಾರನ ಕವಿತೆಗೆ, ಕಥೆಗೆ, ಕಾದಂಬರಿಗೆ ಕೆಲವು ಘಟನೆಗಳು ಪ್ರೇರಣೆಯಾಗಬಹುದು. ನೈಜ ಘಟನೆಗಳು ಕಥೆಯ ವಸ್ತುವಿಷಯವಾಗಬಹುದು. ಅಥವಾ ಕಾಲ್ಪನಿಕವಾಗಿ ಚಿತ್ರಿಸಿ ಮತ್ತೊಂದು ದೃಷ್ಟಿಕೋನದತ್ತ ಓದುಗನನ್ನು ಕರೆದೊಯ್ಯಬಹುದು. ಒಟ್ಟಿನಲ್ಲಿ ಹೊಸದೊಂದು ಚಿಂತನೆಗೆ ಸಾಹಿತ್ಯ ಬರಹ ಕಾರಣವಾಗುತ್ತದೆ ಎಂಬುದು ಸುಳ್ಳಲ್ಲ. ಹೀಗೆ ಒಬ್ಬ ಸೃಜನಶೀಲ ಬರಹಗಾರನ ಬರಹ ವಯಕ್ತಿಕವಾಗಿ ಹಾಗೂ ಸಾರ್ವಜನಿಕವಾಗಿ ಎರಡು ಸ್ತರಗಳಲ್ಲಿ ತೆರೆದುಕೊಳ್ಳುತ್ತದೆ. ತನ್ನ ಆತ್ಮ ಸಂತೋಷಕ್ಕೆ ಬರೆದುಕೊಂಡ ವೈಯಕ್ತಿಕ ಬರಹದ ಬಗ್ಗೆ ಸಾಹಿತಿಗೆ ಯಾವ ವಿಧವಾದ ಕಟ್ಟುಪಾಡುಗಳಿರುವುದಿಲ್ಲ. ಆದರೆ ಸಾರ್ವಜನಿಕ ಸಮಸ್ಯೆಗಳನ್ನು ತನ್ನ ಬರಹಕ್ಕೆ ವಸ್ತುವಿಷಯವನ್ನಾಗಿ ಆಯ್ಕೆ ಮಾಡಿಕೊಂಡು ರಚಿಸಿದ ಕಥೆ, ಕವಿತೆ, ಲೇಖನ ಯಾವುದೇ ಆಗಲಿ ಅದು ಚರ್ಚಿತ ವಿಷಯವಾಗಿ ಅನಾವರಣಗೊಳ್ಳುತ್ತದೆ. ನಮ್ಮಲ್ಲಿನ ಕೆಲ ಸಾಹಿತಿಗಳು ತಮ್ಮ ಬರವಣಿಗೆಯಲ್ಲಿ ಮಾತ್ರ ಸಕ್ರಿಯರಾಗಿದ್ದು, ಕೃತಿಯಲ್ಲಿ ಮೌನ ತಾಳುವ ಚಾಳಿಯನ್ನು ರೂಢಿಸಿಕೊಂಡಿರುವುದು ಸುಳ್ಳಲ್ಲ. ಈ ಹಿಂದೆ ಕನ್ನಡ ಸಾಹಿತ್ಯ ರಾಜಾಶ್ರಯ ಹಾಗು ಧರ್ಮಾಶ್ರಯಗಳಲ್ಲಿ ಬೆಳೆದು ಬಂದಿತ್ತು. ಆಗ ಆಸ್ಥಾನ ಕವಿಗಳು ಕೆಲವೊಮ್ಮೆ ರಾಜನನ್ನು ಸಂತೃಪ್ತಿಪಡಿಸುವ, ರಾಜನ ಆಳ್ವಿಕೆಯನ್ನು ಹೊಗಳುವ ಹೊಗಳುಭಟ್ಟ ಕಾರ್ಯಕ್ಕೆ ಮಾತ್ರ ಸೀಮಿತವಾಗಿದ್ದುದ್ದನ್ನು ಇತಿಹಾಸದ ಪುಟಗಳನ್ನು ಅವಲೋಕಿಸಿದಾಗ ನಮಗೆ ಅರಿವಾಗುತ್ತದೆ. ನಮ್ಮ ಕೆಲ ಸಾಹಿತಿಗಳು ರಾಜ್ಯೋತ್ಸವ ಪ್ರಶಸ್ತಿ ತಪ್ಪಿಹೊಗುವುದೆಂಬ ಭಯದಿಂದ, ಸರ್ಕಾರವು ಸಾಹಿತಿಗಳಿಗೆ ನೀಡುವ ನಿವೇಶನ ತಮ್ಮ ಕೈ ತಪ್ಪಿ ಹೋಗುತ್ತದೆಂಬ ಸ್ವಾರ್ಥದಿಂದ ಬಾಯಿಗೆ ಬೀಗ ಜಡಿದುಕೊಂಡು ಕುಳಿತಿರುತ್ತಾರೆ. ಸರಕಾರದ ಮಾರಕ ನೀತಿಗಳನ್ನು ಧಿಕ್ಕರಿಸುವ, ಪ್ರತಿಭಟಿಸುವ ಸೊಲ್ಲು ಇಂಥಹವರಲ್ಲಿ ಪಾತಾಳ ಸೇರಿರುತ್ತದೆ. ಮತ್ತೊಬ್ಬರನ್ನು ಓಲೈಸುವ ಸಂಸ್ಕೃತಿಗೆ ಒಗ್ಗಿಹೊಗಿರುತ್ತಾರೆ. ಹಾಗೆಂದು ಎಲ್ಲರು ಇದೇ ರೀತಿಯಲ್ಲಿ ಯೋಚಿಸುತ್ತಾರೆ ಎಂಬುದು ಅಕ್ಷಮ್ಯವಾಗುತ್ತದೆ. ಇವರ ನಡುವೆ ಅಸ್ಪೃಶ್ಯತೆ ಎಂಬ ಜಾಡ್ಯದ ನಿವಾರಣೆಗಾಗಿ ಹೋರಾಡಿದ, ಬಾಲ್ಯವಿವಾಹದ ಅನಾಹುತಗಳ ಬಗ್ಗೆ ಎಚ್ಚರಿಸುವ, ವಿಧವಾ ವಿವಾಹಕ್ಕೆ ಪ್ರೋತ್ಸಾಹಿಸುವ, ಜಾತಿಗಳಲ್ಲಿರುವ ಮೌಢ್ಯದ ಬಗ್ಗೆ ದನಿ ಎತ್ತುವ ಮೂಲಕ ಸುಧಾರಣೆಗೆ ಕಾರಣೀಕರ್ತರಾದ ಮಹನೀಯರನ್ನು ಸಹ ಕಾಣಬಹುದು. ಸರಕಾರದ ಅನೀತಿಯುತ ಕಾರ್ಯಗಳನ್ನು ಕಂಡು ಪ್ರತಿಭಟನಾ ಸೂಚಕವಾಗಿ ತಮಗೆ ಸರಕಾರ ನೀಡಿದ್ದ ಪ್ರಶಸ್ತಿಯನ್ನು ಹಿಂದಿರುಗಿಸಿದ ಸಾಹಿತಿಗಳು ಸಹ ನಮ್ಮ ಕಣ್ಣ ಮುಂದೆ ಇದ್ದಾರೆ. ಇವರ ನಡುವೆ ಸಮಾಜಕ್ಕೆ ಯಾವೊಂದೂ ಉಪಯೋಗವಿಲ್ಲದ ಸುದ್ದಿಯ ಸದ್ದಿಗೆ ಬಿದ್ದ ಕೆಲವರು, ಪಳಿಯುಳಿಕೆಗಳನ್ನು ಹೆಕ್ಕಿಕೊಂಡು ಕೆಸರಾಟದಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯವನ್ನು ಕೆದಕುವ ಕೆಲಸಕ್ಕೆ ಕೈ ಹಾಕಿ ಸುದ್ದಿಯ ಶೂರನೆಸಿಕೊಂಡ ಮತಿಹೀನರನ್ನು ಸಹ ಕಾಣಬಹುದಾಗಿದೆ. 

’ಸಾಹಿತಿ’ ಎಂಬ ಹಣೆಪಟ್ಟಿ ಕಟ್ಟಿಕೊಂಡು ಹಲವಾರು ಬಿರುದು ಬಾವಲಿಗೆ ಭಾಜನರಾಗಿ ಕಾಗದದ ಮೇಲಿನ ಅಕ್ಷರಗಳಿಗೆ ಮಾತ್ರ ಸೀಮಿತರಾಗುವ ಸಾಹಿತಿಗಳ ನಡುವೆ, ತಮ್ಮ ಬರಹಕ್ಕೆ ನ್ಯಾಯ ಸಲ್ಲಿಸುವ ಮೂಲಕ ಕೃತಿಗಿಳಿದು ಕನ್ನಡವನ್ನು ಪಸರಿಸಿ, ತಮ್ಮದು ಕೇವಲ ಕಾಗದದ ಮೇಲಿನ ಬರಹವಲ್ಲ ಅಂತರಂಗದಲ್ಲಿ ಹುಟ್ಟಿ ಕೃತಿಯಲ್ಲಿ ಹೊರಹೊಮ್ಮುವುದು ಎಂದು ತೋರಿಸಿಕೊಟ್ಟ ಕೆಲ ಸಾಹಿತಿಗಳು ಕರ್ನಾಟಕ ಏಕೀಕರಣದಲ್ಲಿ ತೊಡಗಿಸಿಕೊಂಡು ಬೀದಿಗಿಳಿದು ಹೋರಾಡಿದರು. ಜತೆಗೆ ತಮ್ಮ ಅತ್ಯಮೂಲ್ಯ ಕೊಡುಗೆಯನ್ನು ನೀಡಿದರು. ಇಂತಹ ಕೆಲ ದಾರ್ಶನಿಕರ ಉಲ್ಲೇಖ ಮಾಡುವುದು ಈ ಸಂದರ್ಭದಲ್ಲಿ ಸೂಕ್ತವೆನಿಸುತ್ತದೆ.

ಕನ್ನಡ ನಾಡಿಗೆ ಪಾದ್ರಿಯಾಗಿ ಬಂದು ಕನ್ನಡಾಭಿಮಾನಿಗಳಿಗೆ ಮಾದರಿಯಾದ ಜಾರ್ಜ್ ಫರ್ಡಿನೆಂಡ್ ಕಿಟ್ಟೆಲ್ ರವರು ಸುಮಾರು ೭೦,೦೦೦ ಶಬ್ದಗಳನ್ನೊಳಗೊಂಡ ಕನ್ನಡ-ಇಂಗ್ಲಿಷ್ ನಿಘಂಟನ್ನು ಅಂತಿಮವಾಗಿ ೧೮೯೨ ರಲ್ಲಿ ಸಿದ್ಧಪಡಿಸಿದರು. ನೆನಪಿರಲಿ ಈ ನಿಘಂಟಿನ ಕಾರ್ಯವನ್ನು ತಮ್ಮ ಒಳಿತಿಗಾಗಿ ಮಾಡಿಕೊಂಡವರಲ್ಲ. ಈ ನಿಘಂಟನ್ನು ರಚಿಸಲು ಅಪಾರವಾಗಿ ಶ್ರಮಿಸಿದರು. ಇದರಿಂದಾಗಿ ಅವರು ಕಣ್ಣು ನೋವು ಹಾಗೂ ನರಗಳ ದೌರ್ಬಲ್ಯಕ್ಕೂ ತುತ್ತಾದರು. ಅಂತಿಮವಾಗಿ ೧೮೯೪ ರಲ್ಲಿ ಕಿಟ್ಟೆಲ್ ರವರ ನಿಘಂಟು ಪ್ರಕಟವಾಯಿತು. ಜೊತೆಗೆ ಕನ್ನಡದಲ್ಲಿ ಆರು ಪುಸ್ತಕಗಳನ್ನು ಕೂಡ ಅವರು ರಚಿಸಿದ್ದಾರೆ. 

ಖ್ಯಾತಿವೆತ್ತ ಇಂಜಿನಿಯರ್ ಆದರೂ ಅದಕ್ಕಂಟದೇ ದಕ್ಷ ಆಡಳಿತಗಾರ ಜೊತೆಗೆ ಒಳ್ಳೆಯ ಬರಹಗಾರನಾಗಿ ಕನ್ನಡನಾಡಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಮತ್ತೋರ್ವ ಮಹನೀಯ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಈ ದಿನ ನಾವು ಕಾಣುತ್ತಿರುವ ಕರ್ನಾಟಕ ಸಾಹಿತ್ಯ ಪರಿಷತ್ ಸ್ಥಾಪನೆಯ ಹಿಂದೆ ಸರ್ ಎಂ.ವಿಯವರ ನೆರಳಿದೆ ಎಂಬುದನ್ನು ಮರೆಯಬಾರದು. ಕನ್ನಡದ ಏಕೀಕರಣದಲ್ಲಿ ಕಾಣಬರುವ ಮತ್ತೊಂದು ಮುಖವೆಂದರೆ ಬೆಂಜಮಿನ್ ಲೂಯಿ ರೈಸ್. ಪುರಾತತ್ವ ಇಲಾಖೆಯಲ್ಲಿ ಸುಮಾರು ೨೨ ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಗ್ರಾಮಗಳ ದೇವಾಲಯಗಳ ಬಳಿ ನಿಲ್ಲಿಸಿದ್ದ ಶಾಸನಗಳನ್ನು ಸ್ವಪ್ರಯತ್ನದಿಂದ ಓದಿ ಅರ್ಥೈಸಿಕೊಂಡು ಲೇಖನಗಳನ್ನು ಸಹ ಬರೆಯುತಿದ್ದರು. ನಾಗವರ್ಮನ ಕರ್ನಾಟಕ ಭಾಷಾಭೂಷಣ, ಕರ್ನಾಟಕ ಶಬ್ದಾನುಶಾಸನ, ಪಂಪರಾಮಾಯಣ ಹಾಗು ಅಮರಕೋಶವೆಂಬ ಹಲವಾರು ಗ್ರಂಥಗಳನ್ನು ತಾಳೆ ಒಲೆಯಿಂದ ಸಂಪಾದಿಸಿ ಪ್ರಕಟಿಸಿದ ಕೀರ್ತಿ ರೈಸ್ ರವರಿಗೆ ಸಲ್ಲುತ್ತದೆ. 

ಮಾತೃಭಾಷೆ ತಮಿಳಾದರೂ ಹುಟ್ಟು ಕನ್ನಡಿಗರಾದ ಟಿ.ಪಿ ಕೈಲಾಸಂ ರವರ ಕೊಡುಗೆ ಅಪಾರ. ತಮ್ಮ ಕಾಲದಲ್ಲಿ ಸಮಾಜ ಅನುಭವಿಸುತಿದ್ದ ಸಮಸ್ಯೆಗಳನ್ನು ವಸ್ತು ವಿಚಾರವಾಗಿಟ್ಟುಕೊಂಡು ರಚಿಸಿದ ತಮ್ಮ ನಾಟಕಗಳನ್ನು ಓದುಗರ ಮುಂದೆಸೆದು ಸುಮ್ಮನಾಗುತ್ತಿರಲಿಲ್ಲ. ತಾವು ನಾಟಕ ತಂಡವನ್ನು ಕಟ್ಟಿ ಅದರ ಮೂಲಕ ಎಚ್ಚರಿಕೆಯ ಸಂದೇಶಗಳನ್ನು ರಂಜನೀಯವಾಗಿ ಸ್ವಾರಸ್ಯಪೂರ್ಣವಾಗಿ ಜನರಿಗೆ ಮುಟ್ಟಿಸುತಿದ್ದರು. ೨೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರಿವರು. ಎಲ್ಲಾ ಕನ್ನಡಿಗರ ಮನೋಭಾವ ಒಂದಾಗಬೇಕು, ಕೇವಲ ರಾಜಕೀಯ ಪ್ರಾದೇಶಿಕ ಏಕೀಕರಣ ಮಾತ್ರವಲ್ಲವೆಂಬುದು ಕೈಲಾಸಂ ರವರ ಮನೋಗತವಾಗಿತ್ತು. ಈ ನಿಟ್ಟಿನಲ್ಲಿ ಶ್ರಮಿಸಿದ್ದರು. 

ಸಣ್ಣ ಕಥೆಗಳ ಜನಕ ಜ್ಞಾನಪೀಠ ಪ್ರಶಸ್ತಿ ವಿಜೇತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರವರನ್ನು ನಾವು ಸ್ಮರಿಸಿಕೊಳ್ಳದೆ ಇದ್ದಲ್ಲಿ ಅದು ಅಪೂರ್ಣ ಕಥೆಯಂತಾಗುತ್ತದೆ. ಇವರ ಚಿಕ್ಕವೀರ ರಾಜೇಂದ್ರ ಎಂಬ ಐತಿಹಾಸಿಕ ನಾಟಕಕ್ಕೆ ೧೯೮೩ ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತ್ತು. ಇವರು ಸುಮ್ಮನೆ ಕೃತಿಗಳನ್ನು ರಚಿಸುತ್ತಾ ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಕರ್ನಾಟಕದ ಏಕೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಎಲ್ಲಾ ಭಾಗಗಳ ಜನತೆಯ ಅಭಿಪ್ರಾಯ ಹಾಗೂ ಕರ್ನಾಟಕ ಏಕೀಕರಣದ ಮಹತ್ವವನ್ನು ತಿಳಿಸಲು ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಸಂಚರಿಸಿದರು. ಆಗ ತಮಿಳುನಾಡಿನ ಸರಹದ್ದಿನಲ್ಲಿದ್ದ ಹೊಸೂರು, ಡೆಂಕಣಿ ಕೋಟೆ, ಕೊಳ್ಳೇಗಾಲ, ಸತ್ಯ ಮಂಗಲ ಕೃಷ್ಣಗಿರಿ, ಧರ್ಮಪುರಿ , ಗೋಪಿಚೆಟ್ಟಿಪಾಳ್ಯ ಈ ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕ ಭಾಷಣಗಳ ಮೂಲಕ ಏಕೀಕರಣದ ಅಗತ್ಯತೆಯನ್ನು ಮನಗಾಣಿಸಿದರು. ಬಳ್ಳಾರಿ ಜಿಲ್ಲೆಯು ಇಡಿಯಾಗಿ ಕರ್ನಾಟಕದಲ್ಲೇ ಉಳಿಯಬೇಕೆಂದು ಹೋರಾಟಮಾಡಿದವರಲ್ಲಿ ಮಾಸ್ತಿಯು ಒಬ್ಬರು ಎಂಬುದು ನಿರ್ವಿವಾದ. 

ನನ್ನಂಥವರು ಕನ್ನಡಕ್ಕೆ ಅನೇಕರಿದ್ದಾರೆ. ಆದರೆ ನನಗಿರುವುದು ಒಂದೇ ಕನ್ನಡ ಎಂದು ಹೇಳುತ್ತಾ ಕನ್ನಡ ನಾಡಿನ ಏಕೀಕರಣಕ್ಕೆ ದುಡಿದ ಮತ್ತೋರ್ವ ಸಾಹಿತಿ ಅ. ನ. ಕೃ ರವರು. ಕನ್ನಡದಲ್ಲಿ ಪ್ರಗತಿಶೀಲ ಸಾಹಿತ್ಯ ಚಳವಳಿಯ ಪ್ರವರ್ತಕರಿವರು. '' ರಾಜಕೀಯ ದೃಷ್ಟಿಯಿಂದ ನಮಗೊಂದು ಪ್ರಾಂತ ಲಭಿಸಿದರೂ, ಇದಿನ್ನೂ ಕನ್ನಡ ಪ್ರಾಂತವಾಗಿಲ್ಲ. ಒಂದು ಭಾಗದ ಕನ್ನಡಿಗರಿಗೂ, ಇನ್ನೊಂದು ಭಾಗದ ಕನ್ನಡಿಗರಿಗೂ ಸ್ನೇಹ, ಸೌಹಾರ್ದ ಬೆಳೆಯುವುದರ ಬದಲು ಈರ್ಷೆ, ವೈಷಮ್ಯಗಳು ಹೆಚ್ಚಿವೆ. ಕನ್ನಡಿಗರೆಲ್ಲರ ಹೃದಯ ಬೆಸೆದು, ಅವರಲ್ಲಿ ಉತ್ಕಟ ಕನ್ನಡಾಭಿಮಾನವನ್ನು ಹುಟ್ಟಿಸುವ ಕೆಲಸ ಇನ್ನೂ ಉಳಿದಿದೆ. ಈ ನಾಡನ್ನು ಒಂದುಗೂಡಿಸಲು ಹಿಂದೊಮ್ಮೆ ಹೊರಟ ಕನ್ನಡ ಭಂಟರು, ಮತ್ತೆ ಈ ಕೆಲಸಕ್ಕೆ ಟೊಂಕ ಕಟ್ಟಿ ನಿಲ್ಲಬೇಕು. ರಾಜಕಾರಣಿಗಳ ಕೈಗೆ ಸಿಕ್ಕ ಕರ್ನಾಟಕ ಮತ್ತೆ ಹೋಳು ಹೋಳಾಗುವುದಕ್ಕೆ ನಾವು ಅವಕಾಶ ಕೊಡಬಾರದು'' ಎಂಬ ಎಚ್ಚರಿಕೆಯನ್ನು ನೀಡಿದ್ದಲ್ಲದೆ, ಅಖಂಡ ಕರ್ನಾಟಕ ಏಕೀಕರಣಕ್ಕೆ ತಮ್ಮನ್ನು ಸಮರ್ಪಿಸಿಕೊಂಡು ಲೇಖನ, ಭಾಷಣ, ಹೋರಾಟಗಳ ಮೂಲಕ ಕನ್ನಡಿಗರನ್ನು ಎಚ್ಚರಿಸುವ ಕೆಲಸವನ್ನು ಮಾಡುವ ಮೂಲಕ ಕನ್ನಡಿಗರ ಎದೆಯಲ್ಲಿ ಸ್ವಾಭಿಮಾನದ ಕಿಚ್ಚನ್ನು ಬಿತ್ತುವಲ್ಲಿ ಅ.ನ.ಕೃರವರ ಪಾತ್ರ ಕಡಿಮೆಯಿಲ್ಲ. 

ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ, ಕನ್ನಡಕ್ಕಾಗಿ ಕೊರಳೆತ್ತು, ಅಲ್ಲಿ ಪಾಂಚಜನ್ಯ ಮೊಳಗುತ್ತದೆ. ಕನ್ನಡಕ್ಕಾಗಿ ಕಿರುಬೆರಳೆತ್ತಿದರೆ ಸಾಕು ಇಂದು ಅದೇ ಗೋವರ್ಧನಗಿರಿಯಾಗುತ್ತದೆ. ಈ ಸಾಲುಗಳನ್ನು ಬರೆದವರಾರೆಂದು ತಿಳಿಯಲು ಹೆಚ್ಚು ಶ್ರಮ ಪಡಬೇಕಾಗಿಲ್ಲ. ಅವರೇ ನಮ್ಮ ರಾಷ್ಟ್ರ ಕವಿ ಕುವೆಂಪು. ಇಂಟರ್ ಮೀಡಿಯಟ್ ಹಂತದಲ್ಲೇ ಕನ್ನಡ ಮಾಧ್ಯಮ ಶಿಕ್ಷಣವನ್ನು ಜಾರಿಗೆ ತಂದವರು ಕುವೆಂಪು. ಶಿಕ್ಷಣದ ಎಲ್ಲಾ ಹಂತಗಳಲ್ಲೂ ಕನ್ನಡದ ವ್ಯಾಪಕ ಬಳಕೆಗೆ ಪ್ರಯತ್ನಿಸಿದರು. ಇವರ ಶ್ರೀ ರಾಮಾಯಣ ದರ್ಶನಂ ಎಂಬ ಕೃತಿಗೆ ೧೯೬೮ ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತು. ಪ್ರಸಾರಾಂಗದ ಮೂಲಕ ಕನ್ನಡ ಪುಸ್ತಕಗಳ ಪ್ರಕಣೆಗೆ ಬುನಾದಿ ಹಾಕಿದರು. ಕನ್ನಡ ಅಧ್ಯಾಪಕ, ಉಪಪ್ರಾಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಸಹಸ್ರಾರು ವಿದ್ಯಾರ್ಥಿಗಳಿಗೆ ಜ್ಞಾನ ಬೋಧನೆ ಮಾಡಿದರು. ಕನ್ನಡನಾಡಿನಲ್ಲಿ ಕನ್ನಡ ಪ್ರಥಮ ಭಾಷೆಯಾಗಬೇಕು. ಎಲ್ಲಾ ವಿದ್ಯಾಸಂಸ್ಥೆಗಳಲ್ಲಿಯೂ ಕನ್ನಡವೇ ಬೋಧಕ ಭಾಷೆಯಾಗಬೇಕು. ಕೋರ್ಟು ಕಚೇರಿ ಮೊದಲಾದ ಸರ್ಕಾರಿ ಸಂಸ್ಥೆಗಳ ವ್ಯವಹಾರವೆಲ್ಲಾ ಕನ್ನಡದಲ್ಲಿಯೇ ನಡಿಯಬೇಕು, ಇಂಗ್ಲೆಂಡಿನಲ್ಲಿ ಇಂಗ್ಲಿಷ್ ಇರುವಂತೆ, ಫ್ರಾನ್ಸಿನಲ್ಲಿ ಫ್ರೆಂಚ್ ಇರುವಂತೆ ಕರ್ನಾಟಕದಲ್ಲಿ ಕನ್ನಡವಿರಬೇಕು ಎಂದು ಹೋರಾಡಿದ ಬಹುಮುಖ ಪ್ರತಿಭೆಯುಳ್ಳವರು ಪುಟ್ಟಪ್ಪನವರು. ಏಕೀಕರಣದ ಪರವಾಗಿ ಕಾಲೇಜಿನ ಸಮಾರಂಭವೊಂದರಲ್ಲಿ ಮಾತನಾಡಿದರು ಎಂಬ ಕಾರಣಕ್ಕೆ ಸಚಿವ ಮಹಾಶಯನೊಬ್ಬನಿಂದ ಎಚ್ಚರಿಕೆಯ ನೋಟೀಸ್ ಬಂದಾಗ ಕುವೆಂಪುರವರಿಂದ ಮೊಳಗಿದ ಕವನ '' ಅಖಂಡ ಕರ್ನಾಟಕ ''ಅಖಂಡ ಕರ್ಣಾಟಕ ಅಲ್ತೋ ನಮ್ಮ ಬೂಟಾಟದ ರಾಜಕೀಯ ಇಂದು ಬಂದು ನಾಳೆ ಸಂದು ಹೋಹ ಸಚಿವ ಮಂಡಲರಚಿಸುವುದೊಂದು ಕೃತಕವಲ್ತೋಸಿರಿಗನ್ನಡ ಸರಸ್ವತಿಯ ವಜ್ರ ಕರ್ಣಕುಂಡಲ! ಅಖಂಡ ಕರ್ಣಾಟಕ ಅಲ್ತೋ ನಮ್ಮ ನಾಲ್ಕು ದಿನದ ರಾಜಕೀಯ ನಾಟಕ! ನೃಪತುಂಗನೆ ಚಕ್ರವರ್ತಿ! ಪಂಪನಿಲ್ಲಿ ಮುಖ್ಯಮಂತ್ರಿ ! ರನ್ನ ಜನ್ನ ನಾಗವರ್ಮರಾಘವಾಂಕ ಹರಿಹರಬಸವೇಶ್ವರ ನಾರಣಪ್ಪಸರ್ವಜ್ಞ ಷಡಕ್ಷರ ಸರಸ್ವತಿಯೇ ರಚಿಸಿದೊಂದು ನಿತ್ಯ ಸಚಿವ ಮಂಡಲತನಗೆ ರುಚಿರ ಕುಂಡಲ!ಕರ್ಣಾಟಕ ಎಂಬುದೇನು ಹೆಸರೇ ಬರಿಯ ಮಣ್ಣಿಗೆ? ಮಂತ್ರ ಕಣಾ! ಶಕ್ತಿ ಕಣಾ! ತಾಯಿ ಕಣಾ! ದೇವಿ ಕಣಾ! ಬೆಂಕಿ ಕಣಾ! ಸಿಡಿಲು ಕಣಾ! ಕಾವಕೊಲುವ ಒಲವ ಬಲವಪಡೆದ ಛಲದ ಚಂಡಿ ಕಣಾ ಋಷಿಯ ಕಾಣ್ಬ ಕಣ್ಣಿಗೆ. ಈ ರೀತಿ ಕನ್ನಡ ನಾಡಿನ ಬಗ್ಗೆ ಭಾವುಕರಾಗಿ ಅಷ್ಟೇ ತೀವ್ರವಾಗಿ ಆ ಸಚಿವನಿಗೆ ತಮ್ಮ ಕವನದ ಮೂಲಕ ಪ್ರತ್ಯುತ್ತರವನ್ನು ನೀಡಿದ್ದರು ಕುವೆಂಪು. 

ಹೀಗೆ ಕೇವಲ ಬರಹಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ ಕರ್ನಾಟಕ ಏಕೀಕರಣಕ್ಕೆ ದುಡಿದ ನೂರಾರು ಮಹನೀಯರಿದ್ದಾರೆ. ಅವರಲ್ಲಿ ಕೆಲವರನ್ನು '' ಬರಹಗಾರನ ಸಾಮಾಜಿಕ ಬದ್ಧತೆ '' ಗೆ ಉದಾಹರಣಾಪೂರ್ವಕವಾಗಿ ಎತ್ತಿಕೊಂಡಿದ್ದೇವೆ. ಇಲ್ಲಿ ಉದಾಹರಿಸಿದಂತೆ ಹಲವು ಸಾಹಿತಿಗಳು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ತಮ್ಮ ಬರಹದಂತೆ ನಡವಳಿಕೆಯಲ್ಲೂ ಜನ ಸಾಮಾನ್ಯರಿಗೆ ಸಾಹಿತಿಗಳು ಪ್ರೇರಣೆಯಾಗಿದ್ದಾರೆ. ನಮ್ಮ ಬರವಣಿಗೆಗಳು ಕೇವಲ ಪುಸ್ತಕ, ಬ್ಲಾಗು, ನೆಟ್ಟುಗಳಿಗೆ ಸೀಮಿತವಾಗಿರದೆ, ಸಾಮಾಜಿಕ ಜವಾಬ್ದಾರಿಯಿಂದ ಕೂಡಿ, ಪ್ರಗತಿಶೀಲ ವಿಷಯಗಳ ಮೂಲಕ ಜನರಲ್ಲಿ ಜಾಗೃತಿ ತರುವ ಮೂಲಕ ಸಮಾಜದಲ್ಲಿ ಪರಿವರ್ತನೆಯ ಗಾಳಿ ಬೀಸುವತ್ತ ಅನುವು ಮಾಡಿಕೊಡಲಿ. ಕನ್ನಡದ ಮೇಲಿನ ಪ್ರೀತಿ, ಒಲವು ಸಾಮಾಜಿಕ ಅಭಿವೃದ್ಧಿಯತ್ತ ಮುಖ ಮಾಡಲಿ. 

ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಳ್ಳೋಣ. ಆರೋಗ್ಯವಂತ ಆರಾಮದಾಯಕ ವಾತಾವರಣ ನಿರ್ಮಿಸೋಣ.
===================
ವಂದನೆಗಳೊಂದಿಗೆ
ಸತೀಶ್ ಡಿ. ಆರ್. ರಾಮನಗರ
ಕನ್ನಡ ಬ್ಲಾಗ್ ನಿರ್ವಹಣಾ ತಂಡ