Friday, 31 January 2014

ಓದಿನ ಸುತ್ತ... ಸತ್ವವು ಎತ್ತ?

"ಆ ಕೃತಿಯನ್ನು ಓದಿ ಮುಗಿಸಿದ್ದೇನೆ"-ಈ ಧ್ವನಿಯ ಬಿತ್ತರವು ಪ್ರಸ್ತುತ ಓದುಗ ವಲಯದಲ್ಲಿ ಬಹು ಎತ್ತರದಲ್ಲಿ ಕೇಳಿಬರುತ್ತಿರುವಂತ ಪದಪುಂಜ. ಫೇಸ್ಬುಕ್- ನಂತಹ ಅಂತರ್ಜಾಲ ತಾಣಗಳಲ್ಲೂ ಕೂಡ ಈ ಏರುದನಿ ಮೊಳಗುತ್ತಲೇ ಇದೆ. ಕ್ಷೀಣಿಸಿದ ಓದುಗರ ಸಂಖ್ಯೆ ಎನ್ನುವ ಕೊರಗಿನ ನಡುವೆಯೂ ಒಂದಿಷ್ಟು ಸಂತಸ ತಂದಿಡುವ ವಿಚಾರವೆಂಬ ಅಂಶ ಮೇಲ್ನೋಟಕ್ಕೆ ಕಂಡುಬಂದರೂ, ಇಂತಹ ಧ್ವನಿಗಳ ಆಂತರಿಕ ಮೌಲ್ಯ ಅಥವಾ ವಾಸ್ತವಿಕ ಅಂಶಗಳೇನು ಎನ್ನುವುದನ್ನೂ ಧೃಡಪಡಿಸಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದರೂ ಆಶ್ಚರ್ಯ ಪಡಬೇಕಾದ ಸಂಗತಿಯೇನಲ್ಲ. ಹೇಳಹೊರಟಿರುವ ವಿಚಾರದ ಹಿಂದೆ ಓದುಗಬಳಗವನ್ನು ಗುರಿಯಾಗಿಸಬೇಕೆಂಬ ಅಂಶ ನಮಗಿರದಿದ್ದರೂ, ಕಣ್ಣೆದುರಿಗೆ ಕಾಣಸಿಗುವ "ಕಟುಸತ್ಯ''ವೊಂದನ್ನು ತೆರೆದಿಡಬೇಕಾದ ಆವಶ್ಯಕತೆ ಇದೆಯೆಂದೆನಿಸುತ್ತದೆ.

ಇತ್ತೀಚಿನ ಬಹುತೇಕ ಓದುಗರೆನಿಸಿಕೊಂಡವರು 'ಇದನ್ನು ಓದಿದ್ದೇನೆ, ಅದನ್ನೂ ಓದಿದ್ದೇನೆ, ಅವರ ಎಲ್ಲ ಕೃತಿಗಳನ್ನೂ ಓದಿದ್ದೇನೆ, ಇವರ ಮೂರು ಕೃತಿಗಳು ನನ್ನ ಬಳಿ ಇವೆ, ಎರಡು ಮುಗಿಸಿಯಾಗಿದೆ", ಇನ್ನೆರಡು ನಿನ್ನೆ ತಂದೆ" ಎಂಬಿತ್ಯಾದಿ ಮೇರು ಹೇಳಿಕೆಗಳನ್ನೇ ನೀಡುವಾಗ ಕುತೂಹಲ ಮನೆಮಾಡುತ್ತದೆ. ಮಹತ್ವಪೂರ್ಣ ಕೃತಿಗಳ ಹೆಸರುಗಳೆಲ್ಲ ಇವರ ನಾಲಗೆಯ ತುದಿಯಲ್ಲಿ ನಲಿದಾಡುವಾಗಲೆಲ್ಲ ಅಚ್ಚರಿಯ ಜೊತೆ ಬೆಚ್ಚಿಬೀಳುವ ಸಂದರ್ಭವೂ ಎದುರಾಗಬಹುದು.

ಮಹತ್ವದ ಕೃತಿಗಳೋ ಅಥವಾ 'ಹೆಸರು' ಪಡೆದ ಕೃತಿಗಳ ಪ್ರತಿಗಳು ಬಳಿ ಇದ್ದಕೂಡಲೇ ಯಾರೂ ಓದುಗ ಎನ್ನುವ ಹಣೆಪಟ್ಟಿಯನ್ನು ಹೊರುವುದಿಲ್ಲ. ಅಷ್ಟೇ ದಿಟವಾದ ಅಂಶವೆಂದರೆ ಸಾವಿರ ಪುಟಗಳದ್ದೋ, ನೂರು ಪುಟಗಳದ್ದೋ ಒಂದು ಕೃತಿಯನ್ನು, ಆ ಕೃತಿ ಹೆಸರು ಪಡೆದಿದೆ ಎಂಬ ಇರಾದೆಯಲ್ಲಿ ಓದಿದ ತಕ್ಷಣಕ್ಕೂ ಬಹುಶಃ ನಾವು ಓದುಗರಾಗುವುದಿಲ್ಲವೇನೋ. ಒಟ್ಟಿನಲ್ಲಿ ಯಾರು ಎಷ್ಟು ಓದಿದ್ದಾರೆ ಎನ್ನುವ ತುಲನೆ ಮಾಡುವ ಕೈಂಕರ್ಯವನ್ನು ಯಾರೂ ಮಾಡುವುದಿಲ್ಲವಾದರೂ, ಏನನ್ನೂ ಓದದೇ 'ಎಲ್ಲವನೂ ಬಲ್ಲವರು ನಾವೆಂಬ' ನಡವಳಿಕೆಯ ಬಿಂಕಕ್ಕೆ ಮೌಲ್ಯವಿರದು. ವೇಗದ ಬದುಕಿನ ವಾತಾವರಣದ ಪ್ರಸ್ತುತ ಓದುಗಳೆಲ್ಲವೂ 'ರೋಬೋಟ್'ಶೈಲಿಯಲ್ಲಿ ಪರಿವರ್ತಿತಗೊಳ್ಳುತ್ತಿರುವುದೇ ಇದಕ್ಕೆ ಕಾರಣವಿರಬಹುದು. ಎಲ್ಲರೂ ಓದಿದ್ದಾರೆ, ತಾನೂ ಓದಿಮುಗಿಸಬೇಕೆನ್ನುವ ತರಾತುರಿಯಲ್ಲಿ 'ಓದು' ಎನ್ನುವುದು 'ಧ್ಯಾನ'ವಾಗದೆ, ಅಧ್ವಾನದತ್ತ ಮುಖಮಾಡಿರುವುದಂತೂ ಸತ್ಯ. ಶಾಂತಚಿತ್ತರಾಗಿ ಕೃತಿಯೊಂದರಾಳಕ್ಕಿಳಿದು, ಅದರ ಹರಿವಿನಲ್ಲಿ ತಾನೂ ಹರಿವಾಗುವ 'ಭಾವನಾತ್ಮಕ' ಓದಿನ ಶ್ರೀಮಂತಿಕೆ ಎಲ್ಲರಲ್ಲೂ ಕಾಣುತ್ತಿಲ್ಲ. ಅಕ್ಕಿಕಾಳನ್ನು ಬಿಸಿನೀರಿನಲ್ಲದ್ದಿ 'ಅನ್ನ'ವೆಂದುಂಬುವುದನ್ನೇ ಪರಿಪಾಠ ಮಾಡಿಕೊಂಡ ಆತುರಗಾರರಾಗಿಬಿಟ್ಟಿದ್ದೇವೆ ನಾವೆಲ್ಲ!

ಓದಿನ ಮಟ್ಟಿಗೆ ಹೇಳುವುದಾದರೆ 'ಅಕ್ಕಿಯನುಂಡು ಉದರಬೇನೆಯನನುಭವಿಸುವ' ಅಪೂರ್ಣ ನಡೆಯನ್ನು ಬಿಟ್ಟು, 'ಓದಬೇಕು' ಎನ್ನುವ ಹಂಬಲದ ಭಾವವೊಂದು ತನ್ನೊಳಮನದಿಂದ ಮೂಡಿ, ಪುಸ್ತಕದೊಡಲನ್ನರಗಿಸಿಕೊಳ್ಳುವ ತವಕ ಎಂದಿಗೆ ಒಡಮೂಡುತ್ತದೋ; ಅಂದಿಗದು ಅನ್ನವಾಗಿ ಅರಳಬಹುದು, ಒಡಲ ತಣಿಸಬಹುದು, ಸಾರ್ಥಕ್ಯದ ತೃಪ್ತಿಯಿರಬಹುದು. ಈ ತೃಪ್ತಿಯು ಮನವನ್ನು ಹಲವು ತಾರ್ಕಿಕ ಯೋಚನೆಗಳಿಗೋ, ಮರೆಯಾಗದ, ಮರೆಯಲಾಗದ ಭಾವಗಳನ್ನು ಮನದಾಳದೊಳಗೊಡಮೂಡಿಸಬಹುದು. ಇಂತಹ ಓದಿಗೆ ಅದರದ್ದೇ ಆದ ಏಕಾಗ್ರತೆಯಿದ್ದು, ಯಾವುದೇ ಲೇಖಕ ತನ್ನ ಕೃತಿಯೊಳಗೆ ಅರುಹುವ, ವಿಶದಪಡಿಸಲು ಪ್ರಯತ್ನಿಸುವ ಒಳಹೂರಣವನ್ನೂ ತನ್ನ ನಡೆನುಡಿಯಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನದತ್ತವೂ ಸಾಗಬಹುದು. ತನ್ಮೂಲಕ ಸಾಮಾಜಿಕ ಬದಲಾವಣೆಯ ಗಾಳಿ ಬೀಸುವ ಸಂದರ್ಭವೂ ಉದ್ಭವವಾಗಬಹುದು. ಸಾಧ್ಯವೇ ನಮಗೆ?

ಆದರೆ, ಆ ಮಟ್ಟಿನ ಆಳವಾದ ತುಡಿತದಿಂದಾಗುವ ಓದು ನಮ್ಮ ಸಾಮರ್ಥ್ಯದ ಪರಿಧಿಯಲ್ಲಿದೆಯೇ? ಇರಲೂಬಹುದು, ಇಲ್ಲದಿರಲೂಬಹುದು. ಇದನ್ನು ಹೊರತುಪಡಿಸಿ, ಪ್ರಸ್ತುತವಾಗಿ ಮೊದಲ ಪರಿಚ್ಛೇದದ ಧ್ವನಿಯ ಬಗ್ಗೆಯೇ ದನಿ ಎತ್ತುವುದಾದರೆ ಓದಿದ್ದೇನೆ ಎನ್ನುವ ಹೆಚ್ಚಿನ ಓದುಗಳೆಲ್ಲ ಆಷಾಢಭೂತಿತನವನ್ನು ಮೈಗೇರಿಸಿಕೊಂಡ ಓದುಗಳಾಗಿ ಕಾಣಿಸುತ್ತವೆಯೇ ಹೊರತು ನಿಜಬಣ್ಣದವುಗಳಲ್ಲ! ಓದುಗನೆನ್ನುವ ಹಣೆಪಟ್ಟಿ ತನಗಿರಬೇಕೆಂಬ ಚಪಲಕ್ಕೆ ಅರಗಿಸಿಕೊಳ್ಳಲಾಗದ, ಅರಿವಾಗದ 'ಗ್ರಂಥ'ಗಳನ್ನೆಲ್ಲ ಮುಂದಿಟ್ಟುಕೊಳ್ಳುವ ಪರಿಪಾಠ ಆರಂಭವಾಗಿದ್ದು ಖೇದಕರ. ಒಂದೇ ಉಸುರಿಗೆ ಸಾವಿರದೈನೂರು ಪುಟಗಳ ಕಾದಂಬರಿಯನ್ನೋದಿ ಮುಗಿಸಿ 'ನಾನು ಮುಗಿಸಿದ್ದೇನೆ' ಅನ್ನುವುದಕ್ಕಿಂತಲೂ 'ಮೂರು ಪುಟ'ಗಳನು ನೂರುದಿನದಲಿ ಅರಗಿಸಿಕೊಳ್ಳಲು ಪ್ರಯತ್ನಪಟ್ಟಿದ್ದೇನೆ ಎನ್ನುವ ಭಾವವೇ ಓದುಗರಾಗಿ ನಮ್ಮೊಳಗಿರಬೇಕು. ಪರೀಕ್ಷಾಭ್ಯಾಸದ ಪರಿಯಲಿ ಕೃತಿಯೊಳಗೋಡುವುದಕ್ಕಿಂತ ಕೃತಿಯೊಳಗಣ ಸತ್ವವನು ಪರಿಕಿಸುತೋದುವುದು ಸೂಕ್ತವಾಗಬಹುದು.

ಒಟ್ಟಾರೆಯಾಗಿ, ಓದು ಎನ್ನುವುದನ್ನು ಅಧ್ಯಯನಪೂರ್ಣವೆಂದೆನಿಸಲಾಗದಿದ್ದರೂ, ಅಧ್ವಾನವಾಗಿಸದೆ ಆತ್ಮೀಯವಾಗಿಯಾದರೂ ಅಳವಡಿಸಿಕೊಳ್ಳೋಣ!

ವಂದನೆಗಳೊಂದಿಗೆ,
ಪುಷ್ಪರಾಜ್ ಚೌಟ, ಬೆಂಗಳೂರು

ಸಹಕಾರ/ಸಲಹೆ: ಕನ್ನಡ ಬ್ಲಾಗ್ ನಿರ್ವಹಣಾ ತಂಡ

Tuesday, 31 December 2013

ಸಂಸ್ಕೃತಿಯ ಜೀವನಾಡಿ ಸಾಹಿತ್ಯ!

ಹಸುಗೂಸಿನ ’ಅಮ್ಮಾ…’ ಎಂಬ ಸಣ್ಣಚೀರಿನ ಒಲವಿನಂತೆ ಜನಜೀವನಕ್ಕೆ ಹಾಸುಹೊಕ್ಕಾಗಿ ಹರಿದು ಬಂದದ್ದು ಸಾಹಿತ್ಯ. ಸಾಹಿತ್ಯದ ಹುಟ್ಟು ಇಂಥದ್ದಕ್ಕೇ ಎಂದು ಉಲ್ಲೇಖಿಸಲಾಗದಿದ್ದರೂ, ನಾನಾ ಕಾರಣಕ್ಕೆ ಅದು ಒಂದು ಸಂಸ್ಕೃತಿಯ ಎಲ್ಲಾ ಸ್ಥರಗಳಿಂದಲೂ ಒಂದೊಂದಂಶಗಳನ್ನು ಎರವಲು ಪಡೆದು ತಾನಾಗಿ ಅವತರಿಸಿರಬಹುದು. ಆದ್ದರಿಂದಲೇ ಸಾಹಿತ್ಯ ಕೇವಲ ಒಂದು ಅಭಿವ್ಯಕ್ತಿ ಮಾಧ್ಯಮವಲ್ಲ, ಅದು ಒಂದು ಸಂಸ್ಕೃತಿಯ ಮೂರ್ತರೂಪ! ಆ ವಿವಿಧ ಸ್ಥರಗಳಿಂದ ಬಂದ ಒಂದೊಂದಂಶಗಳು ಭಾಷೆಯನ್ನು ತನ್ಮೂಲಕ ಸಾಹಿತ್ಯವನ್ನು ವಿಸ್ತರಿಸುತ್ತಾ ಸಾಗಿವೆ. ಆಲದ ಮರದ ಬೀಳಲುಗಳಂತೆ ಹಬ್ಬಿ ಹರಡುವುದೇ ಜೀವಂತ ಭಾಷೆಯ ಮತ್ತು ಸಾಹಿತ್ಯದ ಮೂಲಗುಣ.

ಸಂವಹನವೇ ಪ್ರಧಾನವಾಗಿ ಭಾಷೆ ಉದಿಸಿದರೂ, ಜನಜೀವನದೆಡೆಗಿನ ತುಡಿತ ಸಾಹಿತ್ಯದುದಯಕ್ಕೆ ನಾಂದಿಯಾಗಿರಬಹುದು. ಯಾವುದೇ ಭಾಷೆಯಿಂದ ಮೂಡಿದ ಸಾಹಿತ್ಯವನ್ನು ತೆಗೆದುಕೊಂಡರೂ ಈ ಅಂಶ ಅರಿವಿಗೆ ಬರುತ್ತದೆ. ಇಂಗ್ಲೆಂಡ್ ನಿಂದ ಹರಿಯುವ ಸಾಹಿತ್ಯಕ್ಕೆ ಹೇಗೆ ಆ ಸಂಸ್ಕೃತಿಯ ಛಾಯೆಯಿರುತ್ತದೋ, ಹಾಗೆ ಅಮೇರಿಕಾದಲ್ಲಿ ಸೃಷ್ಟಿಯಾಗುವ ಸಾಹಿತ್ಯಕ್ಕೆ ಅಲ್ಲಿಯ ಛಾಯೆಯಿರುತ್ತದೆ, ಹಾಗೆ ಒಬ್ಬ ಭಾರತೀಯ ಬರೆಯುವ ಸಾಹಿತ್ಯದ ದೃಷ್ಟಿಕೋನವೇ ಭಿನ್ನ! ಇಲ್ಲಿ ಪ್ರತಿಯೊಬ್ಬರ ದೃಷ್ಟಿಕೋನಗಳು ಭಿನ್ನ ಎಂಬುದಷ್ಟೇ ಅಲ್ಲದೆ, ತಾವು ಬೆಳೆದು ಬಂದ ಸಂಸ್ಕೃತಿಯೂ ಅಲ್ಲಿ ಕೆಲಸ ಮಾಡಿರುತ್ತದೆ. ಆ ದೃಷ್ಟಿಕೋನಗಳು ಭಿನ್ನವಾಗಲು ಸಂಸ್ಕೃತಿಯೇ ಮೂಲವೆಂದರೂ ತಪ್ಪಾಗಲಾರದೇನೋ.

ಕನ್ನಡ ಭಾಷೆಯನ್ನು ತೆಗೆದುಕೊಂಡರೆ; ಅದು ದ್ರಾವಿಡ ಭಾಷೆಯಾಗಿ ಅನ್ಯ ಭಾಷೆಗಳಂತೆ ತನ್ನವರ ಅಗತ್ಯಗಳಿಗೆ ಬೆಳೆದುಕೊಂಡು ನಿಂತ ಪುರಾತನ ಭಾಷೆಗಳಲ್ಲೊಂದು. ಅನಾದಿಕಾಲದ ನಾಗರಿಕತೆಗಳೂ ಕನ್ನಡವನ್ನೇ ಉಸಿರಾಡಿರಬಹುದೆಂಬ ಉಲ್ಲೇಖಗಳು ಸಿಗುತ್ತವೆ. ತನ್ನ ನಾನಾ ಸಾಂಸ್ಕೃತಿಕ ನೆಲೆಗಳಿಂದ ಬಂದ ಅಂಶಗಳನ್ನು ತನ್ನಲ್ಲಿ ಲೀನ ಮಾಡಿಕೊಂಡು ತಾನೊಂದು ಸಂಪೂರ್ಣ ಸಂಸ್ಕೃತಿಯ ಪಡಿಯಚ್ಚಾಗಿ ನಿಲ್ಲುತ್ತದೆ. ಆ ಅಂಶಗಳು ಹಳೇ ಮೈಸೂರು ಪ್ರಾಂತ್ಯದಿಂದಾಗಿರಬಹುದು, ಕರಾವಳಿ ಸೀಮೆಯಿಂದಾಗಿರಬಹುದು, ಮಲೆನಾಡು ಸೀಮೆಯಿಂದಾಗಿರಬಹುದು, ಬಯಲು ಸೀಮೆಗಳಿಂದಲೋ, ಗಡಿನಾಡುಗಳ ತಡಿಯಿಂದಲೋ, ಹೊರನಾಡಿನಿಂದಲೋ ಆಗಿರಬಹುದು. ಆದರೆ ಮಾತೃಬೇರು ಕನ್ನಡ ಸಂಸ್ಕೃತಿಯಾಗಿರುತ್ತದೆ. ಆದ್ದರಿಂದಲೇ ಕನ್ನಡ ತನ್ನ ಸಾಂಸ್ಕೃತಿಕ ಅನನ್ಯತೆಯನ್ನು ಕಾಪಾಡಿಕೊಂಡು ಬರುತ್ತಿದೆ.

ಇಲ್ಲಿ ಒಂದೇ ಪ್ರದೇಶದ ಬೇರೆ ಬೇರೆ ಕೋನಗಳಿಂದ ಬರುವ ಸಂಸ್ಕೃತಿಯ ಬೇರುಗಳೂ ಹೇಗೆ ಬೇರೆ ಬೇರೆ ಪರಿಣಾಮಗಳಿಗೆ ನಾಂದಿಯಾಗುತ್ತಿವೆ ಎಂದರೆ ಅಲ್ಲಿನ ಜನರ ಅಭಿರುಚಿ, ವಿಶ್ಲೇಷಣೆ, ಸಂಶ್ಲೇಷಣೆ ವಿಧಾನಗಳು ಬೇರೆ ಇರುತ್ತವೆ, ಅವರ ಅಕ್ಕಪಕ್ಕದ ಸಂಸ್ಕೃತಿಯೊಂದಿಗೆ ಕೊಟ್ಟು-ಕೊಳ್ಳುವಿಕೆ ನಡೆದೇ ಇರುತ್ತದೆ. ಕಾಲ ಮತ್ತಿತರ ಆಕ್ರಮಣಗಳಿಗೆ ಎದೆಯೊಡ್ಡಿ ಜನಜೀವನದೊಂದಿಗೆ ಬದಲಾಗುತ್ತ ಮರುಸೃಷ್ಟಿಗೊಳ್ಳುವುದು ಸಂಸ್ಕೃತಿಯ ಜೀವಂತಿಕೆಯಾದರೆ ಅದರ ಅಗತ್ಯಗಳಿಗೆ ತುಡಿಯುವುದು ಸಾಹಿತ್ಯದ ಅಗತ್ಯವಾಗುತ್ತದೆ. ಇಲ್ಲಿ ಮಡಿವಂತಿಕೆ ತೋರಿದಷ್ಟೂ ಸಾಹಿತ್ಯವೂ ತನ್ನ ಪರಿಧಿಯನ್ನು ವಿಸ್ತರಿಸದಿರುವ ಸಾಧ್ಯತೆಯೇ ಹೆಚ್ಚು. ಬಹುಶಃ ಸಂಸ್ಕೃತದಂಥ ಮೇರು ಭಾಷೆಯೊಂದು ಮಡಿವಂತಿಕೆ ಎಂಬ ಈ ಕಟ್ಟುಪಾಡಿನೊಳಗೆ ಸೊರಗುತಿದೆಯೇನೋ! ಆದರೂ ಬದಲಾವಣೆ ಎಷ್ಟರಮಟ್ಟಿಗೆ ಸಹ್ಯ? ಎಂಬ ಜಿಜ್ಞಾಸೆ ಕಾಡಬಹುದು. ನಮ್ಮ ಹಿಂದಿನ ಎಷ್ಟೋ ಕವಿಗಳು, ವಚನಕಾರರು, ದಾಸಶ್ರೇಷ್ಟರು, ಬರಹಗಾರರು ಈ ನಿಟ್ಟಿನಲ್ಲಿ ಉದಾಹರಣೆಯಾಗುತ್ತಾರೆ. ಪಂಪ ’ಕನ್ನಡ ಭಾರತ’ ವನ್ನೂ, ಕುಮಾರವ್ಯಾಸ ’ಗದುಗಿನ ಭಾರತ’ ವನ್ನೂ ಬರೆಯುವಾಗ ಎಷ್ಟೆಷ್ಟು ಮೂಲಗಳಿಂದ ಸಾರ ಹೀರಿಕೊಂಡರೂ ಅವನ್ನು ಕನ್ನಡವಾಗಿಸುವಂತೆ ಕಟ್ಟಿಕೊಟ್ಟಿದ್ದಾರೆ. ಕುವೆಂಪು, ಬೇಂದ್ರೆ, ಬಿ.ಎಂ.ಶ್ರೀ, ಜಿ.ಎಸ್.ಎಸ್, ಅಡಿಗರು, ಲಂಕೇಶರು, ಇನ್ನುಳಿದವರು ಮಾಡಿದ್ದೂ ಇದನ್ನೇ. ಇಲ್ಲಿ ಸಂಸ್ಕೃತಿ ಎಷ್ಟರಮಟ್ಟಿಗೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕೆಂದರೆ, ತನಗಗತ್ಯವಾದುದ್ದನ್ನು ಸ್ವೀಕರಿಸಿ ತನ್ನೊಳಗೆ ಜೀರ್ಣಿಸಿಕೊಂಡು ಕನ್ನಡ, ’ಕನ್ನಡ ಮಯ’ವಾಗೇ ಉಳಿಯುವವರೆಗೆ.

ಪಾಶ್ಚಾತ್ಯರ ಆಂಗ್ಲ ಸಾಹಿತ್ಯದೊಂದಿಗೆ ಅನುಸಂಧಾನಗಳನ್ನೇರ್ಪಡಿಸಿ ಪ್ರಯೋಗಗಳನ್ನು ಸೃಜಿಸಿದ ಬಿ.ಎಂ.ಶ್ರೀ ಈ ಕೊಡು-ಕೊಳ್ಳುವ ಬಗೆಗಿನ ಪುಳಕವನ್ನು ಹೀಗೆ ಹೇಳುತ್ತಾರೆ,
“ಇವಳ ಸೊಬಗನವಳು ತೊಟ್ಟು ನೋಡಬಯಸಿದೆ,
ಅವಳ ತೊಡಿಗೆ ಇವಳಿಗಿಟ್ಟು ಹಾಡಬಯಸಿದೆ”

ಇಷ್ಟೆಲ್ಲಾ ಅನುಸಂಧಾನಗಳು ಒಂದು ಸಂಸ್ಕೃತಿಯ ಜೀವಂತಿಕೆಗೆ ವರದಾನವಾದರೂ, ಅವುಗಳಿಂದೊದಗಬಹುದಾದ ಅಪಾಯಗಳಿಗೇನೂ ಕಮ್ಮಿಯಿಲ್ಲ. ಹೆಚ್ಚೆಚ್ಚು ಅಂಶಗಳನ್ನು ಆಮದುಮಾಡಿಕೊಂಡಷ್ಟೂ ನಮ್ಮ ಅಂಶಗಳು ಪರಕೀಯವೆನಿಸಬಹುದು. ಇಲ್ಲವೇ ಆಮದು ಕೊಟ್ಟ ಸಂಸ್ಕೃತಿಯ ಪಡಿನೆಳಲಾಗಿ ನಮ್ಮ ಸಂಸ್ಕೃತಿಯೂ ಆಗಿಬಿಡಬಹುದು. ಆದ್ದರಿಂದ ಆಮದಿನ ನಂತರ ಅವುಗಳನ್ನು ನಮ್ಮದು ಮಾಡಿಕೊಂಡು ಸ್ವೀಕರಿಸುವ ಅಗತ್ಯವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕಾದ್ದು ಉಳಿಯಬಲ್ಲ ಸಾಹಿತ್ಯ ಪರಂಪರೆಯ ತಾಕತ್ತು. ಕನ್ನಡ ಭಾಷೆ ಮತ್ತು ಸಾಹಿತ್ಯ ಬೆಳವಣಿಗೆಯಲ್ಲಿ, “ಒಂದು ಭಾಷೆಯನ್ನು ಯಾವಾಗ ಜನರು ಉಪಯೋಗಿಸೋದಿಲ್ಲ ಆಗ ಸಾಯುತ್ತೆ, ಸಂಸ್ಕೃತದ ಅವನತಿಯ ಹದಿಯೇ ಇದು” ಎಂಬ ತೇಜಸ್ವಿಯವರ ಮಾತು ಎಂದಿಗೂ ನೆನಪಿನಲ್ಲಿಡಬೇಕಾದದ್ದು. ಈ ಮಾತು ಮುಂದಿನ ನಮ್ಮ ಪರಭಾಷಾ ವ್ಯಾಮೋಹದಿಂದ ಮರೆಯಾಗಬಹುದಾದ ಕನ್ನಡ ಪದಗಳವರೆಗೂ ಪ್ರಸ್ತುತವಾಗಬಹುದು. ಕನ್ನಡ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಈ ಹೊತ್ತಿನ ಎಲ್ಲಾ ಕನ್ನಡಿಗರದ್ದಾಗಿರುತ್ತದೆ. ಆದ್ದರಿಂದ ಕನ್ನಡ ಕೇವಲ ಭಾಷೆಯಾಗದೆ, ಸಾಹಿತ್ಯ ಕೇವಲ ಅಭಿವ್ಯಕ್ತಿಯಾಗದೆ, ಕರ್ನಾಟಕದ ಸಮಷ್ಟಿಯೇ ಆಗಿದೆ.

ನುಡಿ ಕನ್ನಡ,
ನಡೆ ಕನ್ನಡ,
ಮುಡಿ ಕನ್ನಡ,
ಗುಡಿ ಕನ್ನಡ.

- ಪ್ರಸಾದ್.ಡಿ.ವಿ, ಮೈಸೂರು
[ಸಲಹೆ, ಸಹಕಾರ: ಕನ್ನಡ ಬ್ಲಾಗ್ ನಿರ್ವಾಹಕ ತಂಡ]

Friday, 29 November 2013

ರವಿಮನದಾಳದ ಕವಿಕಿರಣಗಳು!

ಪ್ರೀತಿಯ ಕವಿಮಿತ್ರರಿಗೆ ನಮಸ್ಕಾರಗಳು,

ಕವಿತೆ ಹೇಗೆ ಬರೆಯುವುದು ಎನ್ನುವುದು ಕ್ಲಿಷ್ಟಕರ ಆಲೋಚನೆ. ನಾವು ನೂರಾರು ಕವಿತೆಗಳನ್ನು ಓದಿ ಅದಕ್ಕೊಂದು ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಬಹುದು. ಬರಹಗಾರ ತಾನೇ ಕರಗತ ಮಾಡಿಕೊಂಡ ಬರಹದ ಕಲೆಯನ್ನು ಇನ್ನೊಬ್ಬರ ಕಟು ಅಭಿಪ್ರಾಯದ ಮಾತುಗಳು ಉತ್ತೇಜಿಸುವುದಿಲ್ಲ. ದುರಾದೃಷ್ಟವಶಾತ್, ವ್ಯಕ್ತಪಡಿಸುವ ಪ್ರತ್ರಿಕ್ರಿಯೆಗಳು ಯಾವಾಗಲೂ ತಪ್ಪಾಭಿಪ್ರಾಯಗಳನ್ನು ಸೃಷ್ಟಿಸುವುದೇ ಹೆಚ್ಚು. ಅದು ದೊಡ್ಡ ಮಟ್ಟದಲ್ಲಿರಬಹುದು ಅಥವ ಸಣ್ಣ ಪ್ರಮಾಣದಲ್ಲಿರಬಹುದು. ಮನಸ್ಸಿನ ಪ್ರಾಮಾಣಿಕತೆಯನ್ನು ಅದು ಅವಲಂಬಿಸಿದೆ. ಸಾಮಾನ್ಯವಾಗಿ ಜನರು ಇಷ್ಟಪಡಲು ಇಚ್ಚಿಸುವಂತೆ ಅವರ ವಿಚಾರವನ್ನು ಸುಲಭವಾಗಿ ಅರ್ಥೈಸುವುದು ಕಷ್ಟ. ಅಥವಾ ಅಭಿಪ್ರಾಯ ಮಂಡಿಸುವುದು ಅಷ್ಟೇ ಕಷ್ಟ. ಬಹುಪಾಲು ಸಂದರ್ಭಗಳು ಮಾತಿನ ಪದಗಳಿಗೆ ಸಿಗದೆ ಅಡಗಿಕೊಂಡಿರುತ್ತವೆ. ಕೆಲವಷ್ಟು ಶಬ್ದಗಳನ್ನೇ ಹುಟ್ಟಿಸದೆ ಹಿಂದೆ ಬಿದ್ದಿರುತ್ತವೆ. ಕಲೆಯ ತಂತ್ರಗಾರಿಕೆ, ನೈಪುಣ್ಯತೆಗಳು ಪ್ರತಿಕ್ರಿಯೆಗಳನ್ನು ಕೆಲವೊಮ್ಮೆ ತಡೆದು ಬಿಡುತ್ತವೆ. ಏಕೆಂದರೆ, ಅಲ್ಲಿರುವ ಅತ್ಯಾಧ್ಬುತ ಪ್ರತಿಮೆ ಸೃಷ್ಠಿಸಿದ ನೆಲೆ ಮತ್ತು ದಿವ್ಯಾನೂಭೂತಿ. ಯಾರದ್ದೋ ಬದುಕಿನ ವಿವರಣೆಯನ್ನು ನಾವು ಓದುವಾಗ, ನಮ್ಮದೇ ಅನುಭವಗಳು, ಭಾವಗಳು ಅಲ್ಲಿ ಸ್ಪೋಟಗೊಳ್ಳುತ್ತವೆ.

ಈ ವಿಷಯಗಳನ್ನು ಮೊದಲು ಹೇಳುವ ಮೂಲಕ, ಈಗ ಧೈರ್ಯವಾಗಿ ವಿಷಯದ ಮೂಲಕ್ಕೆ ಬಂದರೆ, ಮೊದಲಾಗಿ "ನಾನು" ಮತ್ತು "ನಮ್ಮದು" ಎನ್ನುವ ಎರಡು ಪದ ಸಂಬೋಧನೆಯ ಅರ್ಥ ವೈಶಾಲ್ಯವನ್ನು ಅರಿತುಕೊಳ್ಳಬೇಕಾಗುತ್ತದೆ. "ನಾನು" ಎನ್ನುವ ಪದ ವಿನ್ಯಾಸವೇ ವೈಯಕ್ತಿಕ ಶೈಲಿ. ಯಾವುದೋ ವ್ಯಕ್ತಿಗತ ವಿಚಾರವನ್ನು ವಿವರಿಸಿ, ತನ್ನ ಮನಃಶಾಂತಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಮತ್ತು ಅಲ್ಲಿರುವ ತನ್ನ ಗುಪ್ತ ಓರೆ ಕೋರೆಗಳನ್ನು ತೋರ್ಪಡಿಸುವುದು ಆಗಿದೆ. ಅಲ್ಲಿ ಸ್ಪಷ್ಟವಾಗಿ ಹೇಳಬಹುದಾದರೆ, ಮನದೊಳಗಿನ ತನ್ನ ಯಾವುದೋ ಆಸೆಗಳನ್ನು ಪೂರೈಸುವ ಸಲುವಾಗಿ ಪದಗಳ ಮೂಲಕ ಪ್ರತಿಕ್ರಿಯಿಸಿ ಓದುಗರನ್ನು ಒತ್ತಾಯಿಸುತ್ತಿರುತ್ತವೆ. ’ನನ್ನನ್ನು" ಮಾತ್ರ ತೃಪ್ತಿಪಡಿಸುವ ಮಾತುಗಳೇ ಹೊರತು ನನ್ನಂತೆಯೇ ಇರುವ ಹಲವರನ್ನು ತಲುಪಲು ಶಕ್ತಿ ಕಳೆದುಕೊಳ್ಳುವುದು. ರಂಜನೀಯ ಪದಗಳ ಶೈಲಿ ಮತ್ತು ವಿನ್ಯಾಸಗಳ ಮೂಲಕ ವಸ್ತು ವಿವರಣೆ ಕಡಿತಗೊಳ್ಳುತ್ತವೆ. ಮಾತುಗಳು ನೇರವಾಗಿ ಅಪ್ಪಳಿಸದೆ ಓರೆಕೋರೆಯಾಗಿ ನೇರವಾಗಿ ನಿಲ್ಲಲು ಹವಣಿಸುತ್ತವೆ. ಓರೆಕೋರೆಯ ಏಕ ಬದುಕನ್ನು ಪ್ರತಿನಿಧಿಸಿ ಬಹುವ್ಯಕ್ತಿತ್ವಕ್ಕೆ ವಿಸ್ತಾರಗೊಂಡ ಜಗತ್ತಿನಲ್ಲಿ ಕೊಡುವ ವಿವರಣೆ ನಿಮಗೆ ಮಾತ್ರ ಧ್ವನಿಸುವುದು. ಅದಕ್ಕೆ ಉತ್ತರವನ್ನೂ ಕೂಡ ಸ್ವತಃ ಕಂಡುಕೊಳ್ಳುವುದು ಬದುಕಿನ ಪ್ರಯತ್ನ. ಆದರೆ, "ನಮ್ಮದು" ಎನ್ನುವ ಹಲವು ಜನರನ್ನು ಪ್ರತಿನಿಧಿಸುವ ಪದವೇ ತುಂಬಾ ಸುಂದರವಾಗಿದೆ. ಸಮಾನವಾದ ಯಾವುದೋ ಹೆಚ್ಚುಗಾರಿಕೆ ಅಲ್ಲಿ ಅಪೂರ್ವದ ಅಂಚಿನಲ್ಲಿರುವ ಜನರ ಆಸೆಗಳನ್ನು ನೆರವೇರಿಸುವಂತಿದೆ ಅಥವಾ ಅದನ್ನು ವಿವರಿಸುವಂತಿದೆ ಅಥವಾ ಅಲ್ಲೊಂದು ಬದಲಾವಣೆಯ ಪ್ರಕ್ರಿಯೆಗೆ ಪ್ರಚೋದಿಸುತ್ತದೆ. ಇದು ತನ್ನಂತೆ ಇರುವ ಇತರರನ್ನು, ಜನರೇ ಒಂದಾದ ಸಮಾಜವನ್ನು , ಸಮಾಜವೇ ಒಂದಾದ ಜಗತ್ತನ್ನು ಪ್ರತಿನಿಧಿಸುವುದು. ಸ್ವಂತ ಬುದ್ದಿವಂತಿಕೆ, ಸ್ವತಂತ್ರವಾಗಿ ನಿಲ್ಲಲು ಶಕ್ತಿಯಿಲ್ಲದಿದ್ದರೆ "ನಾನು" ಎಂಬ ಪದದ ಸುತ್ತ ಹೆಣೆದ ಕವಿತೆಯ ಸಾಮರ್ಥ್ಯ "ನಮ್ಮದು" ಎನ್ನುವ ಪದದ ಸುತ್ತ ಹೆಣೆದ ಬಲಿತ ಕವಿತೆಯ ಮುಂದೆ ಗೌಣವಾಗುವುದು.

"ನಾನು ಬರೆದ ಕವಿತೆ ಉತ್ತಮವಾಗಿದೆಯೇ" ಎಂದು ಯಾರಾದರೂ ಕೇಳಬಹುದು. ಅದಕ್ಕೊಂದು ಪ್ರತಿಕ್ರಿಯೆ ಬರೆಯಿರಿ ಎನ್ನಬಹುದು. ಬರೆಯದಿದ್ದರೆ ಅಪಾರ್ಥವಾಗಬಹುದು. ಅದೇ ಕವಿತೆಯನ್ನು ಪತ್ರಿಕೆ ಪ್ರಕಟಣೆಗೆ ಕಳುಹಿಸಲೂಬಹುದು. ಅಂತರ್ಜಾಲ ಈ-ಮಾಧ್ಯಮದ ಸಂಪಾದಕರಿಗೆ ಕಳುಹಿಸಲೂಬಹುದು. ಅದೇ ಕವಿತೆಯನ್ನು ಇತರರ ಕವಿತೆಗಳೊಂದಿಗೆ ಹೋಲಿಸಿ ನೋಡುವ ಅವ್ಯಕ್ತ ಆಸೆಯೂ ಇರಬಹುದು. ಹೀಗಾದ ಮೇಲೆ ನಮ್ಮ ಮೆಚ್ಚಿನವರು, ಗೆಳೆಯರು ಅದಕ್ಕೊಂದು ಪ್ರತಿಕ್ರಿಯೆ ಕೊಡದಿದ್ದರೆ ಉತ್ಸಾಹ ಕುಸಿದ ಭಾವ ಆವರಿಸಿಕೊಳ್ಳುವುದು ಖಂಡಿತ. ಕಳುಹಿಸಿದ ನಮ್ಮ ಕವಿತೆಗಳನ್ನು ಕೆಲವು ಪತ್ರಿಕೆಯವರು ಪ್ರಕಟಿಸದೆ ತಿರಸ್ಕರಿಸಿದರೆ ನೊಂದುಕೊಳ್ಳುವುದೂ ಕೂಡ ಸಾಮಾನ್ಯ. ಪತ್ರಿಕೆ, ಅಂತರ್ಜಾಲ ಮಾಧ್ಯಮ, ಇತರ ಕವಿತೆಗಳ ಹೋಲಿಕೆ, ಉತ್ಸಾಹ ಕುಸಿದ ಭಾವ, ತಿರಸ್ಕಾರ ಸೇರಿದಂತೆ ನೊಂದುಕೊಂಡ ಎಲ್ಲಾ ವಿಷಯಗಳನ್ನು ಏಕಕಾಲದಲ್ಲಿ ಸೂಚಿಸುತ್ತದೆ. ನಾವು ಯಾವುದನ್ನೂ ಅಗತ್ಯವಾಗಿ ಮಾಡಲಾಗದೆ, ಹೇಳಲಾಗದ ಸ್ಥಿತಿಯಲ್ಲಿದ್ದಾಗ ಹೊರಗೆ ಬಂದು ಇನ್ನೊಬ್ಬರಿಂದ ಈ ಎಲ್ಲವನ್ನೂ ಅಪೇಕ್ಷಿಸುತ್ತೇವೆ. ಆದರೆ ಕವಿತೆಯ ವಿಷಯದಲ್ಲಿ ಯಾರೂ ನಮಗೆ ಸಲಹೆ ಕೊಡಲಾರರು ಕವಿಮಿತ್ರರೇ. ಯಾರೂ ಸಹಾಯ ಮಾಡಲಾರರು. ಕೇವಲ ಅಭಿಪ್ರಾಯಿಸ ವ್ಯಕ್ತಪಡಿಸಬಹುದಷ್ಟೇ. ಸ್ವಲ್ಪಮಟ್ಟಿಗೆ ಅದು ಪರ ಅಥವ ವಿರುದ್ಧವಾಗಿ ಮೆಚ್ಚಿಸಬಹುದಷ್ಟೇ. ಇದರಿಂದ ಉತ್ತೇಜಿತರಾಗಿ ಮತ್ತೊಂದು ಇಂತಹದ್ದೇ ಶಕ್ತಿಹೀನ ಬರಹಕ್ಕೆ ತೊಡಗಿಸಿಕೊಳ್ಳಬಹುದಷ್ಟೆ . ಅದು ನಮಗೆ ಶಕ್ತಿ ಕೊಡಲಾರದು. ನಮ್ಮ ಕವಿತೆಯ ದೌರ್ಬಲ್ಯಗಳನ್ನು ಕಂಡು ಹಿಡಿಯಲಾಗದ ಸ್ಥಿತಿಗೆ ತಲುಪಬಹುದು.

ಪ್ರೀತಿಯ ಕವಿಮಿತ್ರರೇ ,ಈ ಸಮಸ್ಯೆಗೆ ಇರುವ ಒಂದೇ ಒಂದು ದಾರಿಯೆಂದರೆ ನಮ್ಮ ನಮ್ಮ ಕವಿತೆಯ ಆಳಕ್ಕಿಳಿದು ಓದಿದಾಗ, ಅಲ್ಲಿ ಕೆಲವು ಪ್ರಶ್ನೆಗಳು ಸಿಗುತ್ತವೆ. ಯಾವ ಕಾರಣಗಳು, ಏಕಾಗಿ ನಮ್ಮನ್ನು ಈ ಕವಿತೆ ಬರೆಯಲು ಪ್ರಚೋದಿಸಿತು? ಇದನ್ನೇ ಪರೀಕ್ಷೆಗೊಳಪಡಿಸಿದಾಗ , ಇದು ನಮ್ಮ ಹೃದಯದಾಳದಲ್ಲಿ ಗಾಢವಾಗಿ ಬೇರು ಬಿಟ್ಟಿರುವ ಗುಪ್ತ ಜೀವ ಸಂಚಲನದಿಂದ ಬರೆಯಲ್ಪಟ್ಟಿದೆಯೇ? ಬರಹಗಾರರಾಗಿ ನೀವು ಬರೆಯಬಾರದೆಂದು ನಿಷೇಧ ಹೇರಿದರೆ ಸಾಯಲು ಸಿದ್ಧರಾಗಬಹುದೇ? ಈ ಮೇಲಿನ ಎಲ್ಲವನ್ನು ಒಂದು ನಿಶ್ಯಬ್ಧ ಪ್ರಶಾಂತ ರಾತ್ರಿಯಲ್ಲಿ ನಮ್ಮನ್ನು ನಾವೇ ಕೇಳಿಕೊಳ್ಳಬೇಕೇನೋ! ನಿಜವಾದ ಸತ್ಯದ ಉತ್ತರಕ್ಕಾಗಿ ಆಳದಲ್ಲಿ ಸಮರ್ಪಣಾಭಾವವಿರಬೇಕು. "ನಾನು ಖಂಡಿತವಾಗಿ ಬರೆಯಬಹುದೆ?". ಈ ಮಾರ್ದನಿಸುವ ಪ್ರಶ್ನೆಗಳನ್ನು ಒಪ್ಪಿ ಸರಳ ವಿಶ್ವಾಸ ಹೊರಹೊಮ್ಮಿದರೆ "ಹೌದು ನಾನು ಖಂಡಿತಾ ಬರೆಯಬೇಕು" ಎಂಬ ಉತ್ತರ ಸಿದ್ಧವಾಗುವುದು. ಅದರ ನಂತರ ಸಿಕ್ಕಿದ ಈ ಉತ್ತರದ ಮೇಲೆ ನಮ್ಮ ಬದುಕನ್ನು ಬೆಳೆಯಲು ಬಿಡಿ. ಈ ಉತ್ತರ ನಮ್ಮ ಅಗತ್ಯಗಳನ್ನು ಪೂರೈಸಲು ಪ್ರಾರಂಭಿಸಬಹುದು . ಬದುಕಿನ ಬಹುಮುಖ್ಯ ಪ್ರಾಪಂಚಿಕ ನಡೆಗಳು ಮತ್ತು ಗೋಚರಿಸಲಾಗದ ಅರ್ಥಪೂರ್ಣ ಘಳಿಗೆಗಳು ಚಿತ್ರಣಗಳ ರೂಪದಲ್ಲಿ ಸಾಕ್ಷ್ಯ ನುಡಿಯಲು ಪ್ರೇರೇಪಿಸುತ್ತದೆ. ಕೆಲವು ಅಸ್ತವ್ಯಸ್ತತೆಗಳು ಮನಸ್ಸಿನಾಳದಲ್ಲಿ ಭಾರವಾಗಿ ತಳವೂರಿ ಹಗುರವಾಗಲು ದಾರಿ ಹುಡುಕಾಡುತ್ತಿರುತ್ತದೆ. ಇದೇ ದಿವ್ಯಾನೂಭೂತಿಯ ನಿಜವಾದ ಘಟ್ಟ. ಹಲವು ಸಮಯಗಳಿಂದ "ಏಕಾಂತಗಳು" ಮಾಡಿದ ತಪಸ್ಸಿಗೆ ಸ್ಪಂದಿಸುವ ಬೆಳಕಿನ ಸಂದರ್ಭ. ಆಂಗ್ಲ ಭಾಷೆಯಲ್ಲಿ "ಮೆಟಫರ್" ಅನ್ನುತ್ತೇವೆ. ವಿಶಾಲ ಭಾವವಿಲ್ಲದೆ, ಪ್ರಕೃತಿ ಮತ್ತು ಸಮಾಜದ ಭಕ್ತಿಯಿಲ್ಲದೆ "ಕೇವಲ ಬರಹಗಾರ"ನಿಗೆ ಈ ಸಿದ್ದಿ ಅಸಾಧ್ಯ .

ಇಲ್ಲಿಂದಲೇ ನಿಜವಾದ ಬರಹದ ನಟನೆ ಆರಂಭವಾಗುವುದು. ಹೇಗೆಂದರೆ, ಪ್ರಕೃತಿಗೆ, ಸಮಾಜಕ್ಕೆ ಹತ್ತಿರವಾಗುವ ವಿಚಾರವನ್ನು ಕಲ್ಪಿಸಿಕೊಳ್ಳಿ. ಯಾವುದನ್ನು ಕಣ್ಣಾರೆ ಕಂಡಿದ್ದೇವೆ, ಅನುಭವಿಸಿದ್ದೇವೆ, ಯಾವುದನ್ನು ಮೆಚ್ಚಿದ್ದೇವೆ, ಎಷ್ಟು ಪಡೆದಿದ್ದೇವೆ ಮತ್ತು ಎಷ್ಟನ್ನು ಕಳೆದುಕೊಂಡಿದ್ದೇವೆ ಇವೆಲ್ಲವನ್ನೂ ನಾವೇ ಪ್ರಪಂಚಕ್ಕೆ ಜನ್ಮ ತಾಳಿದ ಪ್ರಥಮ ವ್ಯಕ್ತಿಯಂತೆ ಅನುಭವಿಸಿ ಮತ್ತು ಅದರಂತೆ ನಟಿಸಬೇಕೇನೋ. ಪ್ರಾರಂಭಿಕ ಹಂತದಲ್ಲಿ ಯಾವುದೇ ಕಾರಣಕ್ಕೂ ಪ್ರೇಮ ಕವಿತೆ ಬರೆಯುವ ಪ್ರಯತ್ನ ಸಲ್ಲದು. ಏಕೆಂದರೆ, ಇದು ದೊಡ್ಡ ಸವಾಲನ್ನು ತಂದೊಡ್ಡುತ್ತದೆ. ಇದಕ್ಕೆ ಉತ್ತುಂಗ ಸ್ಥಿತಿಯ, ಪೂರ್ಣವಾಗಿ ಪಕ್ವಗೊಂಡ ವೈಯಕ್ತಿಕವಾಗಿ ಅಪೂರ್ವತೆಗಳನ್ನು ಉತ್ಪಾದಿಸುವ ಕೆಲವು ಶಕ್ತಿಯ ಅಗತ್ಯವಿದೆ. ಅಥವಾ ಹಲವು ದಿಕ್ಕುಗಳಿಗೆ ಪ್ರತಿಫಲಿಸುವ ಹಲವು ಒಳ್ಳೆಯತನಗಳನ್ನು ಪ್ರತಿನಿಧಿಸುವ ಸಮಾಜದ ಜನರಿಗೆ ವಿಸ್ತರಿಸಿ ಹೋಲಿಸುವ ಅಗತ್ಯವಿದೆ, ಇಲ್ಲಿ ಸಾಮಾಜಿಕ ಪರಿಕಲ್ಪನೆಯ ಎಚ್ಚರವಿರಬೇಕು. ಪ್ರತಿ ದಿನದ ಬದುಕಿನಲ್ಲಿ ಈ ವಿಚಾರಗಳು ಮುತ್ತಿಗೆ ಹಾಕಲು ಹವಣಿಸಬಹುದು ಅಥವಾ ಆಹ್ವಾನಿಸಬಹುದು. ಸುಂದರವಾಗಿ ಕಂಡ ಯಾವುದೇ ವಿಚಾರದಲ್ಲಿ ವಿಶ್ವಾಸವಿದ್ದರೆ ಅದರ ಬಗ್ಗೆ ಬರೆದರೆ ಸೂಕ್ತ. ದುಃಖ, ನಮ್ಮ ಆಶಯಗಳು, ಹಂಚಿಕೊಳ್ಳಬಹುದಾದ ಸ್ಪಷ್ಟ ನುಡಿಗಳ ಬಗ್ಗೆ ಬರೆಯಬೇಕು. ಇವೆಲ್ಲವನ್ನೂ ವಿವರಣೆಗಳೊಂದಿಗೆ ತುಂಬಾ ಸುಡುತ್ತಿರುವ ಮಾತುಗಳಿಂದ ವಿನಯ ಪೂರ್ವಕವಾಗಿ ಒಪ್ಪಿಸಿಕೊಳ್ಳಬೇಕು. ಇದರ ಜೊತೆಗೆ ನಮ್ಮ ಬಗ್ಗೆ ವಿಸ್ತರಿಸುತ್ತಾ, ಸುತ್ತಮುತ್ತಲಿನ ವಿಷಯಗಳನ್ನು ಸೇರಿಸಿ, ಕನಸುಗಳ ಚಿತ್ರಣ ಮತ್ತು ಮಾಸಿ ಹೋಗದ ನೆನಪಿನ ವಸ್ತು ವಿಷಯಗಳು ಬರಹವಾಗಲಿ.

ಜೀವನದಲ್ಲಿ ಅನಗತ್ಯ ವಿಚಾರಗಳು ಬಂದು ಹೋಗಬಹುದು. ಅಥವ ಗೊತ್ತಿಲ್ಲದೆ ಪ್ರಕಟಗೊಳ್ಳಬಹುದು. ಆದರೆ, ಇದಕ್ಕಾಗಿ ಬದುಕನ್ನು ದೂಷಿಸತಕ್ಕದ್ದಲ್ಲ. ನಮ್ಮನ್ನು ದೂಷಿಸಿಕೊಳ್ಳಬೇಕು. ಕವಿ ಎಂದು ಕರೆಸಿಕೊಳ್ಳುವ ಅಮೂಲ್ಯ ಸಂಪತ್ತಿಗೆ ಸೋಲುಗಳು, ವಿಲಾಪಗಳು ಮಾತ್ರ ಸಾಕಾಗುವುದಿಲ್ಲ. ಓರ್ವ ಸೃಜನಶೀಲ ಕಲೆಗಾರನಿಗೆ, ಚಿಂತಕನಿಗೆ ಯಾವುದೇ ಬಡತನವಿಲ್ಲ. ಅವನೊಬ್ಬ ಸಕಲ ಖನಿಜ ಸಂಪತ್ತನ್ನು ಹುದುಗಿಸಿಕೊಂಡ ಭೂಮಿ ಗರ್ಭದಂತಿರುವನು. ಯಾವುದೂ ಗುಪ್ತವಾಗಿ ಮರೆಯಾಗುವುದಿಲ್ಲ ಮತ್ತು ಯಾವುದೇ ವಸ್ತುಗಳು, ಘಟನೆಗಳು, ಘಳಿಗೆಗಳು, ಅನುಭವಗಳು ಮುಖ್ಯವಲ್ಲ ಎಂದೆನಿಸುವುದೇ ಇಲ್ಲ. ಸರ್ವವ್ಯಾಪಿಯಾಗಿ ಎಲ್ಲವೂ ಅವನಿಗೆ ಮುಖ್ಯವಾಗುವುದು. ಅವನು ಕಲೆಗಾರಿಕೆಯಲ್ಲಿ ಯಾವತ್ತಿಗೂ ಶ್ರೀಮಂತ. ಜೈಲಿನಲ್ಲಿಟ್ಟು ಹೊರಗಿನ ಪ್ರಪಂಚದಿಂದ ನಿಮ್ಮ ಜ್ಞಾನದ ಬಾಗಿಲನ್ನು ಮುಚ್ಚಿಟ್ಟರೂ ಮತ್ತೊಮ್ಮೆ ನಿಮ್ಮ ಬಾಲ್ಯ ಕಾಲಾವಸ್ಥೆಗಳ ಕುತೂಹಲಗಳು ಮೊಳೆಕೆಯೊಡೆಯುವುದು. ಇದು ಓರ್ವ ವ್ಯಕ್ತಿ ಗಳಿಸುವ ಅತ್ಯಾದ್ಬುತ ಜೀವನದ ಸಂಪತ್ತು. ನಮ್ಮ ದಿಕ್ಕಿಗೇ ನೋಟವಿರಿಸಿ ನೆನಪುಗಳ ಸ್ಪಷ್ಟತೆಗಳು ಅವುಗಳು ಕುಳಿತುಕೊಂಡ ಮನೆಗಳನ್ನು ಹುಡುಕಾಡಿ ಬಾಗಿಲು ಕಟಕಟಾಯಿಸುವುದು. ಬಹುಕಾಲದಲ್ಲಿ ಕುಸಿದ ಸಂವೇದನೆಗಳು ಪುನರುತ್ಥಾನಕ್ಕೆ ಪ್ರಯತ್ನಿಸುವುದು. ಇಲ್ಲಿ ನಿಮಗೆ ವಿಶ್ವಾಸ ಭರವಸೆಗಳು ಢಾಳಾಗಿ ದೊರೆಯುವುದು ಮಾತ್ರವಲ್ಲ, ನಿಮ್ಮ ಒಂಟಿತನ ವಿಸ್ತಾರವಾಗುತ್ತ ನಿಮ್ಮ ಮನೆಯನ್ನೂ ಆವರಿಸಿ ಮೆಚ್ಚಿಕೊಳ್ಳುವ ಶುಭಾಶಯಗಳು ಮುಂಜಾನೆಯ ನಿಶ್ಯಬ್ಧಕ್ಕೆ ಒಗ್ಗಿಕೊಳ್ಳಬಹುದು. ಹೊರ ಜಗತ್ತಿನ ಗೊಂದಲಗಳು ಬಲುದೂರಕೆ ನಿಧಾನವಾಗಿ ಕಣ್ಣ ಮುಂದೆ ಹಾದು ಹೋಗಬಹುದು.

ಈ ಪರಿಣಾಮಗಳು ಒಳತೋಟಿಯಲ್ಲಿ ಸುತ್ತಿ ತಿರುಗಿ ನಮ್ಮದೇ ಸ್ವಂತ ಪ್ರಪಂಚದಲ್ಲಿ ಮುಳುಗಲು ಪ್ರಯತ್ನಿಸಿದ ಅಮೂಲ್ಯ ಗಳಿಗೆಗಳು ಕವಿತೆಯನ್ನು ಪ್ರಚೋದಿಸುತ್ತದೆ. ಬರೆದು ಮುಗಿಸಿದ ಮೇಲೆ "ನಾನು ಬರೆದ ಕವಿತೆ ಚೆನ್ನಾಗಿದೆಯೇ" ಎಂದು ಯಾರ ಅಭಿಪ್ರಾಯವನ್ನು ಕೇಳುವ ಮನಸ್ಥಿತಿ ನಮಗೆ ಇರುವುದಿಲ್ಲ. ಈ ಕವಿತೆಗಳನ್ನು ಪತ್ರಿಕೆಗಳು, ಸಾಪ್ತಾಹಿಕಗಳು, ಅಂತರ್ಜಾಲ ಈ-ಮಾಧ್ಯಮಕ್ಕೆ ಕಳುಹಿಸುವ ಆಸಕ್ತಿಯನ್ನೂ ನಾವು ತೋರುವುದಿಲ್ಲ. ಏಕೆಂದರೆ, ನಾವು ಬರೆದ ನಮ್ಮದೇ ಕವಿತೆಯಲ್ಲಿ ನಮ್ಮದೇ ಧ್ವನಿ ಕೇಳುತ್ತಿರುತ್ತವೆ. ಅದರಲ್ಲಿ ಪ್ರಾಕೃತ್ತಿಕವಾಗಿ ಸ್ವಾಧೀನಪಡಿಸಿಕೊಂಡ ನಮ್ಮ ಬದುಕಿನ ಒಂದು ಅಂಶವನ್ನು ಕಾಣುತ್ತೇವೆ. ಜೀವಂತ ಇರುವುದಕ್ಕಾಗಿಯೇ ಕಲೆಯ ಒಂದು ತುಣುಕು ಹುಟ್ಟಿದ್ದರೆ, ಅದು ಉತ್ತಮ. ಅದೇ ಅದರ ಮೂಲ, ಮಾನದಂಡ ಮತ್ತು ಅದಲ್ಲದೆ ಬೇರೆ ಯಾವುದೂ ಅಲ್ಲಿಲ್ಲ.

ಕವಿ ಮಿತ್ರರೇ, ಆಳದಾಳಕ್ಕೆ ಹೋಗಿ ನಮ್ಮ ಚಿಂತನೆಯ ವಿಸ್ತಾರವನ್ನು ನಮ್ಮದೇ ಸಾಮರ್ಥ್ಯದ ಅಳತೆಗೋಲುಗಳಿಂದ ಅಳತೆ ಮಾಡಿ, ಅಲ್ಲಿಂದ ಮುಂದಕ್ಕೆ ಬದುಕಿನ ಅತ್ಯಮೂಲ್ಯ ವಸಂತಗಳು ಒಂದೊಂದಾಗಿ ತೆರೆದುಕೊಳ್ಳಲು ಆರಂಭಿಸಬಹುದು. ನಾವು ಖಂಡಿತವಾಗಿ ಬರೆಯಬೇಕೋ ಬೇಡವೋ ಎಂಬ ಪ್ರಶ್ನೆಗಳಿಗೆ ಈ ಮೂಲಗಳಿಂದಲೇ ಉತ್ತರ ದೊರಕುವುದು. ಹೇಗೆಂದರೆ, ಯಾವುದೇ ಅಂದಾಜಿಗೆ ಸಿಗದೆ, ಯಾರದ್ದೇ ಮುಲಾಜಿಗೆ ಸಿಗದೆ ಇದು ನಮ್ಮನ್ನು ಧ್ವನಿಸುತ್ತದೆ. ನಮ್ಮನ್ನು ಬರಹಗಾರರೆಂದು ಕರೆಸಿಕೊಳ್ಳಲು ನಮ್ಮದೇ ಧ್ವನಿ ನಮಗೆ ಒಪ್ಪಿಗೆ ಕೊಡಬಹುದು. ಇದರ ಎಲ್ಲಾ ಆಗು ಹೋಗುಗಳಿಗೆ ಭಾಧ್ಯಸ್ಥರಾಗಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಇದರ ಪ್ರಸಿದ್ದಿ-ಗಟ್ಟಿತನಕ್ಕೆ ಒಗ್ಗಿಕೊಳ್ಳಬೇಕು. ಪರಿಣಾಮಗಳು ನಮಗೆ ಗೊತ್ತಿಲ್ಲದಂತೆ ಅತೀ ಎತ್ತರಕ್ಕೆ ಕೊಂಡೊಯ್ಯಬಹುದು. ಓರ್ವ ಸೃಜನಶೀಲ ಕಲೆಗಾರನಿಗೆ ಖಂಡಿತವಾಗಿ ಅವನದ್ದೇ ಆದ ಒಂದು ಪ್ರಪಂಚವಿರುತ್ತದೆ ಮತ್ತು ಪ್ರಕೃತ್ತಿಯಲ್ಲಿ ಪ್ರಭಾವ ಬೀರುವ ಮತ್ತು ಹಾದು ಹೋಗುವ ಎಲ್ಲಾ ನಡೆಗಳಲ್ಲಿ, ಕ್ಷಣಗಳಲ್ಲಿ ಸ್ವತಃ ಹುಡುಕಾಟ ನಡೆಸುತ್ತಿರುತ್ತಾನೆ.

ಹೃದಯದಾಳದ ಏಕಾಂತದ ಗುಪ್ತ ಸ್ಥಳದಲ್ಲಿ ನಮ್ಮ ಪ್ರಾಮಾಣಿಕತೆ ಖಂಡಿತವಾಗಿ ಕವಿಯೋರ್ವನನ್ನು ಗುರುತಿಸಿ ನಮಗೆ ಒಪ್ಪಿಸುವುದು. ಆದರೆ ಒಂದರ್ಥದಲ್ಲಿ ಅದಿಲ್ಲದೆಯೂ ಅವನು ಬರಹಗಾರನಾಗಿ ಜನರನ್ನು ತನ್ನೆಡೆಗೆ ಕೇಂದ್ರೀಕರಿಸುವ ಜಾಯಮಾನಕ್ಕೆ ಒಗ್ಗಿಸಿಯೂ ಬದುಕಬಹುದು.ಆದಾಗ್ಯೂ, ಇದರ ಪ್ರಕ್ರಿಯೇ ಒಳಮುಖವಾಗಿ ತಿರುಗಿಸಿಕೊಳ್ಳಬೇದ್. ಏಕೆಂದರೆ, ನಿಮ್ಮ ಬರಹ ಟೊಳ್ಳಾಗಬಾರದು. ನಿಸ್ಸಂಶಯವಾಗಿ, ಬದುಕು ಅದರದ್ದೇ ಆದ ಸ್ವಂತ ದಾರಿಯನ್ನು ಕಂಡುಕೊಳ್ಳುತ್ತದೆ. ಇದು ಮಾತ್ರ ಬೆಲೆ ಕಟ್ಟಲಾಗದ ಮತ್ತು ಶ್ರೀಮಂತ ಆಸ್ತಿಯೊಂದನ್ನು ನಿರ್ಮಿಸಿಕೊಡುತ್ತದೆ.

ಹೊರ ಪ್ರಪಂಚದಲ್ಲಿ ನಾವುಇಣುಕುವುದಾದರೆ, ಶ್ರೇಷ್ಠ ಸೂಕ್ಷ್ಮಗಳು ಎಡತಾಕುವುದು ಮತ್ತು ನಾವು ಹಾಕುವ ಪ್ರಶ್ನೆಗಳಿಗೆ ಹೊರಗಿನಿಂದಲೇ ಉತ್ತರ ಲಭ್ಯವಾಗಬಹುದು. ಕವಿತೆಯ ದಿವ್ಯಾನೂಭೂತಿ ಎಂದರೆ ತಪಸ್ಸು ಮಾತ್ರ. ಕಾಡುಗಲ್ಲು ಶಿಲ್ಪವಾಗುವುದು ಅಷ್ಟು ಸುಲಭವಲ್ಲ. ಶಿಲ್ಪವನ್ನು ನೋಡಿದ ಮಂದಿಯನ್ನು ಅತ್ಯಾಶ್ಚರ್ಯಪಡಿಸುವ ಕಲೆ ನಟನೆಯೂ ಅಲ್ಲ. ಅದೊಂದು ತೋರುಗಾಣಿಕೆಯೂ ಅಲ್ಲ. ಅದೇ ಬರಹದ ಮೂಲ.

ಇತೀ ನಿಮ್ಮ ವಿಶ್ವಾಸಿ
- ರವಿ ಮೂರ್ನಾಡು


[ಮೂಲಬರಹ: ರವಿ ಮೂರ್ನಾಡು, ಸಾಂದರ್ಭಿಕ ತಿದ್ದುಪಡಿ: ಕನ್ನಡ ಬ್ಲಾಗ್ ನಿರ್ವಾಹಕ ತಂಡ]

Tuesday, 29 October 2013

ದಿನಕರನ ದಾರಿಯ ಬೆಳಕನರಸುತ್ತಾ!

'ನಾನು ಬರೆಯುತ್ತೇನೆ. ನನ್ನ ಬರಹಗಳ ಮೂಲಕ ಸಮಾಜದಲ್ಲಿ ಬದಲಾವಣೆಯ ಅಲೆ ಎಬ್ಬಿಸುತ್ತೇನೆ' ಎನ್ನುವ ಇಂದಿನ ಬಹುತೇಕ ಸಾಹಿತಿಗಳು ಎತ್ತುವ ಧ್ವನಿ ಪ್ರಶಸ್ತಿ ಗಳಿಸಲು ಸಲ್ಲಿಸುವ ಅರ್ಜಿಯಷ್ಟೇ ಆಗಿರುವುದು ವಿಪರ್ಯಾಸ. ದೇಶ ಸ್ವಚ್ಛ ಮಾಡಲು ಹೋಗುವ ಇಂಥ ಹಲವರು ತಮ್ಮ ಮನೆಯಲ್ಲಿ, ಮನಸ್ಸಲ್ಲಿ ಇರುವ ಕೊಳಕನ್ನು ಮೊದಲು ಸ್ವಚ್ಛಗೊಳಿಸಬೇಕೆನ್ನುವುದನ್ನು ಅರಿಯದಿರುವುದು ಆಶ್ಚರ್ಯದ ಸಂಗತಿ. ಸಮಾಜವನ್ನು ತಿದ್ದುವ ಮೊದಲು ಸಾಹಿತಿ ತನ್ನೊಳಗೆ ತಾನು ಮಂಥನ ಮಾಡಿಕೊಂಡು ತನ್ನನ್ನು ತಾನು ತಿದ್ದಿಕೊಂಡು ಆ ಅನುಭವವನ್ನು ಬರಹವಾಗಿಸುವ ದಿಶೆಯಲ್ಲಿ ಪ್ರಯತ್ನಿಸಿದರೆ ಅದು ಹೆಚ್ಚು ನೈಜ ಮತ್ತು ಪ್ರಭಾವಶಾಲಿಯಾಗಿರುವುದರಲ್ಲಿ ಸಂಶಯವಿಲ್ಲ. ಇಂಥ ಅಪೂರ್ವ ಸಾಹಿತಿಗಳಲ್ಲಿ ಮೇರು ಸ್ಥಾನದಲ್ಲಿ ನಿಲ್ಲುವವರೆಂದರೆ ದಿನಕರ ದೇಸಾಯಿ. "ಚೌಪದಿಯ ಬ್ರಹ್ಮ" ಎಂದು ಪ್ರಖ್ಯಾತರಾಗಿದ್ದು ಬಿಟ್ಟರೆ, ಕನ್ನಡದ ಬಹುತೇಕರಿಗೆ ಇವರ ಬಗ್ಗೆ ಜಾಸ್ತಿ ತಿಳಿದಿಲ್ಲ ಎಂದರೆ ಅತಿಶಯೋಕ್ತಿಯಾಗಲಾರದು. 

ಅಂತಹ ಘನ ವ್ಯಕ್ತಿತ್ವದ 'ಚೌಪದಿಯ ಬ್ರಹ್ಮ'ನ ಬದುಕು ಮತ್ತು ಬರಹಗಳನ್ನು ಉದಾಹರಿಸುತ್ತ, ಒಬ್ಬ ಸಾಹಿತಿಯ ಸಾಮಾಜಿಕ ಬದ್ಧತೆ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸುವ ಪ್ರಯತ್ನವನ್ನು ಅವರದೇ ಆದ 'ನನ್ನ ಬರವಣಿಗೆ' ಎಂಬ ಚುಟುಕನ್ನೆತ್ತಿಕೊಂಡು, ಅವರ ಬದುಕು, ಬರವಣಿಗೆಯ ಒಳತೋಟಿಗಳನ್ನು ಪರಿಚಯ ಮಾಡಿಸುವುದು ಸೂಕ್ತವಾಗಬಹುದು. 

ಅನುಭವದ ಹೊರಗೆ ನಾ ಬರೆಯಲಿಲ್ಲಣ್ಣ
ಹಚ್ಚಲಿಲ್ಲವೊ ಮತ್ತೆ ಯಾವುದೂ ಬಣ್ಣ 
ಬರೆದದ್ದು ನುಡಿದದ್ದು ಎಲ್ಲವೂ ಸಾದಾ 
ಹೀಗಾಗಿ ಮನದೊಳಗೆ ಹೋಗುವುದು ಸೀದಾ

ಅನುಭವದ ಹನಿಹನಿಗಳನ್ನೇ ಬರಹಕ್ಕಿಳಿಸಿ, ಬಣ್ಣ ಬಳಿಯದ ಬರವಣಿಗೆಯನ್ನೇ ತನ್ನ ಉಸಿರಾಗಿಸಿಕೊಂಡ ದೇಸಾಯಿಯವರು ಕನ್ನಡ ನಾಡು ಕಂಡ ಅಗ್ರಗಣ್ಯ ಸಾಹಿತಿಗಳಲ್ಲಿ ಒಬ್ಬರಾಗಿ "ಬದುಕನ್ನೇ ಬರಹವಾಗಿಸಿ", "ಬರೆದಂತೆ ಬದುಕಿ", "ಬರಹಗಳಿಂದ ಬದುಕಲು ಕಲಿಸಿ' "ತಮ್ಮ ಬದುಕು ಅನ್ಯರ ಬರಹಕ್ಕೆ ಪ್ರೇರಣೆಯಾಗುವಂತೆ ಬದುಕಿದವರು" ಕೂಡ. ಇವರ ಸಾಹಿತ್ಯವೆಷ್ಟು ಸರಳ, ನೇರ, ಶುದ್ಧವೋ ಅಷ್ಟೇ ಶುದ್ಧತೆಯನ್ನು ತನ್ನ ಬಾಳಿನಲ್ಲೂ ಅಳವಡಿಸಿಕೊಂಡವರೂ ಕೂಡ.

ಅಂದು ಉತ್ತರ ಕನ್ನಡ ಜಿಲ್ಲೆಯ ಎಷ್ಟೋ ಹಳ್ಳಿಗಳಲ್ಲಿ ಓದಲು ಹತ್ತಿರದಲ್ಲಿ ಹೈಸ್ಕೂಲುಗಳೇ ಇಲ್ಲದ ಕಾಲದಲ್ಲಿ ಮಕ್ಕಳು ಪ್ರಾಥಮಿಕ ವ್ಯಾಸಂಗ ಮುಗಿಸಿ ಹೋಟೆಲ್ ಕೆಲಸಕ್ಕೋ , ಕೂಲಿ ಕೆಲಸಕ್ಕೋ ಹೋಗುವುದು ಸರ್ವೇ ಸಾಮಾನ್ಯವಾಗಿತ್ತು. ಅಂತಹ ಸಂದರ್ಭದಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಬದಲಾವಣೆಯ ಅಲೆ ಎಬ್ಬಿಸಿದವರು ಶ್ರೀಯುತ ದಿನಕರರು. "ಕೆನರಾ ವೆಲ್ಫೇರ್ ಟ್ರಸ್ಟ್"ನ ಮೂಲಕ, ಉತ್ತರ ಕನ್ನಡದ ಹಳ್ಳಿ ಹಳ್ಳಿಗಳಲ್ಲಿ ಜನತಾ ವಿದ್ಯಾಲಯಗಳನ್ನು ಸ್ಥಾಪಿಸಿ, ತಾವು ಕಟ್ಟಿದ ಶಾಲೆಗಳಿಗೆ ಆಗಾಗ ಹೋಗಿ ಮಕ್ಕಳ ಜೊತೆ ಕುಣಿದು, ಕುಪ್ಪಳಿಸಿ ಬೆರೆತು, ಅಲ್ಲಿನ ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಿ ಶಾಲೆಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡರು. ತನ್ಮೂಲಕ ಸಾವಿರಾರು ಮಕ್ಕಳ ಜೀವನ ರೂಪಿಸುವಂಥ ಕೈಂಕರ್ಯವನ್ನು ನಡೆಸಿದ ಶಿಲ್ಪಿಯಾದವರು. ಇವೆಲ್ಲದರ ನಡುವೆಯೂ ದಿನಕರರು ಶಾಸಕರಾಗಿ ಉತ್ತರ ಕನ್ನಡದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಜಿಲ್ಲೆಗೊಂದು ಹೊಸ ರೂಪ ಕೊಟ್ಟ ರೂವಾರಿ ಕೂಡ. 'ಜನಸೇವಕ' ಎಂಬ ಪತ್ರಿಕೆಯ ಮುಖೇನ ಜನಸಾಮಾನ್ಯರಿಗೆ ಸಾಮಾಜಿಕ ಮತ್ತು ರಾಜಕೀಯದ ಅರಿವು ಮೂಡಿಸುವ ಪ್ರಯತ್ನದ ಜೊತೆ, ಜಾತಿ ವ್ಯವಸ್ಥೆಯ ವಿರುದ್ಧ ಕೂಡ ಧ್ವನಿಯೆತ್ತಿದರು. ಅವರ ಅವಿರತ ಶ್ರಮವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಉತ್ತರ ಕನ್ನಡದ ಹಾಲಕ್ಕಿ ಜನಾಂಗದವರ ಅಭಿವೃದ್ಧಿಗಾಗಿಯೂ ಮುಡಿಪಾಗಿದ್ದುದು ಕೂಡ ನಿಸ್ವಾರ್ಥ ಮನೋಭಾವದ ದ್ಯೋತಕ.

ಇವೆಲ್ಲದಕ್ಕನುರೂಪವಾಗಿ ಇವರ ಸಾಹಿತ್ಯ ಕೃಷಿಯೂ ನಳನಳಿಸುತ್ತಿತ್ತು. ಪ್ರತಿಯೊಂದು ಕ್ಷೇತ್ರದಲ್ಲಿ ತನಗೆದುರಾದ ದೈನಂದಿನ ಅನುಭವಗಳನ್ನೇ ಬರಹವಾಗಿಸಿದರು. ಹಲವಾರು ಬಾರಿ ಸ್ವ-ವಿಮರ್ಶೆ ಅಂದರೆ ತನ್ನೊಳಗಿನ ಹುಳುಕುಗಳನ್ನೇ ಹಲವು ಬಾರಿ ಟೀಕಿಸಿಕೊಂಡ ಈ ಧೀಮಂತ ಬರಹಗಾರ, ಪರಿವರ್ತನೆ ನಮ್ಮಿಂದ ಶುರುವಾಗಬೇಕೆಂಬ ಧೃಡ ಸಂದೇಶವನ್ನು ಸಮಾಜಕ್ಕೆ ನೀಡುವಲ್ಲಿ ಯಾವ ಹಿಂಜರಿಕೆಯನ್ನೂ ಮಾಡಲಿಲ್ಲ. ಯಾವುದೇ ಕ್ಲಿಷ್ಟ ಭಾವ ಅಥವಾ ಪದಗಳಿಲ್ಲದೆ ಅತಿ ಸಾಮಾನ್ಯನಿಗೂ ಅರ್ಥವಾಗುವಂಥ, ಅದ್ಭುತ ಸತ್ವಯುತ ಸಾಹಿತ್ಯ ಶೈಲಿಯಿಂದ ಎಲ್ಲರ ಮನದಲ್ಲಿ ನೆಲೆಸಿದವರು. ಬರೀ ಚುಟುಕುಗಳಷ್ಟೇ ಅಲ್ಲದೆ ಎಷ್ಟೋ ಅದ್ಭುತ ಭಾವಗೀತೆಗಳನ್ನು ಸಹ ಕನ್ನಡಕ್ಕೆ ಕೊಟ್ಟಿದ್ದಾರೆ. ಚುಟುಕು ಸಾಹಿತ್ಯಕ್ಕೆ ಹೊಸ ಆಯಾಮ ನೀಡಿದ ಈ ಕವಿಯ ಬಗ್ಗೆ ಬರೆಯುತ್ತಾ "ಆಡು ಮುಟ್ಟದ ಸೊಪ್ಪಿಲ್ಲ, ದಿನಕರರ ಚುಟುಕಿಗೆಟಕದ ವಿಷಯಗಳಿಲ್ಲ" ಎಂದರೆ ತಪ್ಪಾಗಲಾರದು. ದಿಟ್ಟವಾಗಿ, ಯಾವುದೇ ಮುಲಾಜಿಲ್ಲದ, ಸರಳವಾಗಿರುವ ಇವರ ಚುಟುಕುಗಳು ನೇರವಾಗಿ ನಮ್ಮ ಎದೆಗೆ ನಾಟುವಂಥವು. 'ಜೀವನದ ಆಸೆ' ಎಂಬ ಈ ಚುಟುಕು ಅವರ ಬದುಕು ಮತ್ತು ಅವರ ಸಾಹಿತ್ಯದ ಆಶಯವನ್ನು ತಿಳಿಸುತ್ತದೆ.

ನಾನು ಬರೆಯುವುದಿಲ್ಲ ಕೇವಲ ತಮಾಷೆ 
ಈ ಚುಟುಕಗಳು ನನ್ನ ಜೀವನದ ಆಸೆ 
ನನ್ನ ಪ್ರಾರ್ಥನೆಯ ತುಸು ಕೇಳು, ಜಗದಂಬೆ 
ಮಾನವನು ನರನಾಗಿ ಬಾಳಬೇಕೆಂಬೆ

ಸಾಮಾನ್ಯರಲ್ಲಿ ಸಾಮಾನ್ಯನಾಗಿ ಬದುಕಿದ ಧೀಮಂತ ವ್ಯಕ್ತಿ, ಅದೆಷ್ಟೋ ಜನರ ಬದುಕಿಗೆ ದಾರಿದೀಪವಾದ ಶಕ್ತಿ "ದಿನಕರ ದೇಸಾಯಿ''. ಇವರ ಬದುಕಿನ ಮತ್ತು ಸಾಹಿತ್ಯದ ಅಧ್ಯಯನ ನಮ್ಮ ಮೇಲೆ ಗಾಢ ಪ್ರಭಾವ ಬೀರುವುದಂತೂ ಖಂಡಿತ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮೇರು ಸ್ಥಾನದಲ್ಲಿ ಇವರ ಹೆಸರನ್ನು ನಾವು ಕಾಣದಿದ್ದರೂ, ಅದೆಷ್ಟೋ ಜನಸಾಮಾನ್ಯರ ಮನದಲ್ಲಿ ಇವರ ವ್ಯಕ್ತಿತ್ವ ಮತ್ತು ಇವರ ಸಾಹಿತ್ಯ ಮೇರು ಸ್ಥಾನದಲ್ಲಿವೆ. ಇವರ ಸಾಹಿತ್ಯವೇ ಬದುಕು. ಬದುಕೇ ಸಾಹಿತ್ಯ. ಎರಡೂ ನೇರ ನಿಷ್ಠುರ. ಓಲೈಕೆಯ ಹಂಗಿರಲಿಲ್ಲ, ಮನಸ್ಸಲ್ಲಿ ಒಂದನ್ನು ಇಟ್ಟುಕೊಂಡು, ಮತ್ತೇನೋ ಬರೆದು ಪ್ರಶಸ್ತಿ, ಪ್ರಚಾರ ಗಿಟ್ಟಿಸಿಕೊಳ್ಳುವ ದುರಾಸೆ ಇರಲಿಲ್ಲ. ಏನು ಅನಿಸಿದೆಯೋ ಅದನ್ನು ಅನಿಸಿದ ಹಾಗೇ ಚೂರೂ ಬೆಣ್ಣೆ ಹಚ್ಚದೆ ಬರೆಯುವುದಕ್ಕೆ ಎಳ್ಳಷ್ಟೂ ಭಯವಿರಲಿಲ್ಲ. 

ತನ್ನ ನಿಶ್ಚಲ ದೇಹವೂ ಮಣ್ಣಲಿ ಕರಗಿ ಗೊಬ್ಬರವಾಗಿ ಚಿಗುರುವ ಬತ್ತಕೆ ಉಸಿರಾಗಲಿ, ಹಸಿರು ಪಸರಿಸಲಿ ಎನ್ನುವ ಮನದಿಂಗಿತವನ್ನು ಹೊತ್ತಿದ್ದ ದೇಸಾಯಿಯವರ ಈ ಭಾವಗೀತೆಯ ತುಣುಕಿನ ಆಶಯವು ನಮ್ಮ ನಿಮ್ಮೆಲ್ಲರಲ್ಲೂ ಮೂಡಲಿ. 

"ನನ್ನ ದೇಹದ ಬೂದಿ ಗಾಳಿಯಲಿ ತೂರಿಬಿಡಿ 
ಹೋಗಿ ಬೀಳಲಿ ಭತ್ತ ಬೆಳೆಯುವಲ್ಲಿ 
ಬೂದಿ ಗೊಬ್ಬರವಾಗಿ ತೆನೆಯೊಂದು ನೆಗೆದು ಬರೆ 
ಧನ್ಯವಾಯಿತು ಹುಟ್ಟು ಸಾವಿನಲ್ಲಿ"

ಸರ್ವರಿಗೂ ಮುಂಬರುವ ಕನ್ನಡ ಹಬ್ಬದ ಶುಭಾಶಯಗಳೊಂದಿಗೆ,

ಪರೇಶ್ ಸರಾಫ್, ಬೆಂಗಳೂರು
[ಸಲಹೆ, ಸಹಕಾರ: ಕನ್ನಡ ಬ್ಲಾಗ್ ನಿರ್ವಾಹಕ ತಂಡ]

Monday, 30 September 2013

ನಡೆಯಂತಿರಲಿ ನುಡಿಯು, ನುಡಿದಂತಿರಲಿ ನಡೆಯು!

ನುಡಿದರೆ ಮುತ್ತಿನ ಹಾರದಂತಿರಬೇಕು, ಮಾಣಿಕ್ಯದ ದೀಪ್ತಿಯಂತಿರಬೇಕು, ಸ್ಫಟಿಕದ ಸಲಾಕೆಯಂತಿರಬೇಕು, ಲಿಂಗಮೆಚ್ಚಿ ಅಹುದಹುದೆನಬೇಕು ಎಂದು ಬಸವಣ್ಣನವರು ಅಂದು ಹೇಳಿದ್ದನ್ನು ನಾವು ಅಳವಡಿಸಿಕೊಂಡಿದ್ದೇವೆಯೇ ಎನ್ನುವ ಪ್ರಶ್ನೆಯೊಂದು ಎದುರಾಗಿದ್ದು ಇತ್ತೀಚಿನ ಹತ್ತು ಹಲವು ಬರಹಗಳನ್ನು ಓದಿದಾಗ ಮತ್ತು ಕೆಲವು ಬರಹಗಾರರ ನಡೆಗಳನ್ನು ಗಮನಿಸಿದಾಗ. ನುಡಿ ಎಂದರೆ ಅದು ಕೇವಲ ನಾಲಗೆಯನ್ನು ಬಳಸಿಕೊಂಡು ಬಾಯಿಯ ಮೂಲಕ ಹೊರಹಾಕುವ ಶಬ್ದಕ್ಕೆ ಮಾತ್ರ ಸೀಮಿತಗೊಳಿಸದೆ, ಬರಹಗಾರರೆಂಬ ಪಟ್ಟಗಿಟ್ಟಿಸಿಕೊಳ್ಳಲು ಕಾತುರರಾಗಿರುವ ನಾವು, ನಮ್ಮ ಬರಹಗಳಲ್ಲೂ ಮೂಡಿಬರುವ ಅಕ್ಷರಗಳೂ ಕೂಡ ನುಡಿಗಳು ಎಂಬುದನ್ನು ಮನವರಿಕೆ ಮಾಡಿಕೊಂಡಿಲ್ಲ ಎಂದರೆ ತಪ್ಪಾಗಲಾರದೇನೋ. ಹೌದು, ನಿಜವಾಗಿ ಹೇಳಬೇಕೆಂದರೆ ಬರಹಗಾರನ ಬರಹವು ಒಂದು ದಿಕ್ಕಾಗಿ, ಬದುಕು ಇನ್ನೊಂದು ದಿಕ್ಕಾಗಿ ಒಂದಕ್ಕೊಂದು ಸಾಮ್ಯವಿಲ್ಲದೆ, ನಾಣ್ಯದ ಎರಡು ಮುಖಗಳಿದ್ದಂತೆ ಒಂದನ್ನೊಂದು ಸಂದರ್ಶಿಸುವುದೇ ಇಲ್ಲದಂತಾಗಿದೆ. 

ಹಾಗಂತ ಎಲ್ಲರ ಬರಹಗಳೂ ಮೇಲಿನ ಪ್ರವರ್ಗದಲ್ಲಿವೆ ಎಂಬುದಾಗಿ ಹೇಳುತ್ತಿಲ್ಲ. ಅಥವಾ ಎಲ್ಲಾ ಬರಹಗಳೂ ಅದೇ ನಿಟ್ಟಿನಲ್ಲಿವೆ ಎಂಬ ವಾದವಲ್ಲ. ಕೆಲವೊಮ್ಮೆ ಬರಹದ ಮೂಲಕ ಕಾಲ್ಪನಿಕ ಸನ್ನಿವೇಶಗಳನ್ನು ಕೂಡ ಚಿತ್ರಿಸಬೇಕಾಗಿ ಬರುವುದರಿಂದ ಆ ಕಲ್ಪನೆಗಳನ್ನೇ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅಸಾಧ್ಯ. ಅವು ಕಲ್ಪನೆಗಷ್ಟೇ ಸೀಮಿತ. ಆದರೆ ಇಂತಹ ಕಲ್ಪನೆಗಳನ್ನು ಓದಿದ ತಕ್ಷಣ ಇವು ವಾಸ್ತವದಿಂದ ದೂರವಿರುವುದನ್ನು ಮನಗಾಣಬಹುದು. ಈ ರೀತಿಯ ಭ್ರಮಾಲೋಕದ ಭಾವಗಳನ್ನು ಹೊರತುಪಡಿಸಿ ನುಡಿಯುವುದಾದರೆ, ಬರಹಗಾರನೊಬ್ಬ ಸಮಾಜವನ್ನು ತಿದ್ದುವ ಸಲುವಾಗಿ, ಪದೇ ಪದೇ ಸಮಾಜಕ್ಕೆ ಹಿತನುಡಿಯನ್ನು ಸಾರುವ ಅಂಶಗಳನ್ನೋ, ಉಪದೇಶಗಳನ್ನೋ, ತತ್ತ್ವಗಳನ್ನೋ ತನ್ನ ಬರಹದ ಮೂಲಕ ವ್ಯಕ್ತಪಡಿಸುವ ಮೊದಲು ಅಂತಹ ತತ್ತ್ವ, ಅಥವಾ ಸಾರ ತನ್ನೊಳಗೆಷ್ಟಿದೆ, ತಾನು ಎಷ್ಟರ ಮಟ್ಟಿಗೆ ಅವುಗಳನ್ನು ಪರಿಪಾಲಿಸುತ್ತೇನೆ ಎನ್ನುವುದು ಗಣನೀಯ ಪಾತ್ರವಹಿಸುತ್ತದೆ. 

ನಡೆದಂತೆ ನುಡಿವ, ನುಡಿದಂತೆ ನಡೆವ ವಿಷಯವನ್ನೆತ್ತಿಕೊಂಡಾಗ "ಶಂಖದಿಂದ ಬಂದರಷ್ಟೇ ತೀರ್ಥ" ಅನ್ನುವ ಮಾತು ನೆನಪಾಗುತ್ತದೆ. ಹೊರಪ್ರಪಂಚಕ್ಕೆ "ಶಂಖ" ಸುಂದರವಾಗಿ ಕಂಡರೂ, ಅದರೊಳಗೆ ತುಂಬಿರುವ ತೀರ್ಥ ಶುದ್ಧವಾಗಿದ್ದರೂ, ಶಂಖ ಶುಚಿಯಾಗಿರದಿದ್ದರೆ ಬರುವ ತೀರ್ಥವೂ ದುರ್ಗಂಧವೇ ತಾನೇ? ಆ ತೀರ್ಥ ಶುಚಿಯಾಗಿ ಇನ್ನೊಬ್ಬರ ಅಂಗೈ ಸೇರಿ ಪ್ರಸಾದ ರೂಪದಲ್ಲಿ ಸೇವನೆಗೆ ಕೊಡಬೇಕೆಂದರೆ ಮೊದಲು ಶುಚಿಯಾಗಿರಬೇಕಾದದ್ದು ಶಂಖ. ದಾನ ಧರ್ಮದ ಬಗೆಗೋ, ಮಾನವೀಯತೆಯ ಬಗೆಗೋ ತನ್ನ ಬರಹಗಳಲ್ಲಿ ಅರುಹಿ, ತನ್ನಲ್ಲಿರುವ ಅಪಾರ ಸಂಪತ್ತಿನಲ್ಲಿನ ಒಂದು ರೂಪಾಯಿಯನ್ನಾದರೂ ತನ್ನ ಜೀವಮಾನದಲ್ಲಿ ನೊಂದವರಿಗೆ/ಬಡಬಗ್ಗರಿಗೆ ಕೊಡಲು ಹಿಂಜರಿವವರ ಬರಹಗಳೆಲ್ಲವೂ ಯಾವ ಸಾರ್ಥಕ್ಯವನ್ನು ಪಡೆಯಬಹುದು? ತಾನು ಯಾರಿಗೂ ಕಾಣದಂತೆ ಒಳಗಿಂದೊಳಗೆ ಒಂದು ರೂಪದಲ್ಲಿದ್ದು, ಹೊರಜಗತ್ತಿಗೆ 'ಬುದ್ಧ'ನಾಗಿ ತೋರ್ಪಡಿಸಿಕೊಳ್ಳುವ ಚಪಲವಿದ್ದರೆ ಅದು ಸಾಸಿವೆಕಾಳಿನಷ್ಟು ಗಾತ್ರದ ಮೌಲ್ಯವನ್ನೂ ಕೊಡಮಾಡದು. ಆ ಬರಹವು ಸತ್ವದಲ್ಲಿ, ತತ್ತ್ವದಲ್ಲಿ 'ಶೂನ್ಯ' ಸಂಪಾದನೆಯಾದೀತೇ ಹೊರತು 'ಮೇರು' ಎನಿಸಲಾರದು.

ಹಾಗಾಗಿ ಬರಹಗಾರ ತಾನು ಸಮಾಜದ ಸುಧಾರಣೆಗಾಗಿ, ಸಾಮಾಜಿಕ ಸನ್ನಿವೇಶಗಳ ಗೊಂದಲಗಳನ್ನೋ ಅಥವಾ ಸಮಾಜದ ದುರ್ನಡತೆಯನ್ನೋ ತಿದ್ದಬೇಕೆನ್ನುವ ಮನಸ್ಥಿತಿಯಲ್ಲಿ ಬರಹದ ಮೂಲಕ ತಾನು ವ್ಯಕ್ತಪಡಿಸುವ 'ಉಕ್ತಿಗಳು' ವಸ್ತುನಿಷ್ಠ ಹಾಗೂ ಯಾವುದೇ ಒಳಕಶ್ಮಲಗಳಿಲ್ಲದೇ ಸಜ್ಜನಿಕೆಯಿಂದ ಅರುಹಿದಂತವು ಎನ್ನುವ ಅಂಶವನ್ನು ರುಜುವಾತು ಪಡಿಸುವುದಾದಲ್ಲಿ ಅಂತಹ ಉಕ್ತಿಗಳು 'ಮುತ್ತಿನ ಹಾರವೋ, ಮಾಣಿಕ್ಯದ ದೀಪ್ತಿಯೋ ಆದೀತು. ಸ್ಪಷ್ಟತೆಯನ್ನೂ ಹೊಂದಿ, ಸ್ಪಟಿಕದ ಸಲಾಕೆಯಂಥ ಗಾಂಭೀರ್ಯವನ್ನೂ ಹೊಂದೀತು. 

ಒಟ್ಟಿನಲ್ಲಿ ನಡೆಯೊಂದು, ನುಡಿಯುವುದಿನ್ನೊಂದಾಗದೆ, ಎರಡರ ನಡುವೆ ಸಾಮರಸ್ಯವಿದ್ದರೆ ಸಾರವಿದ್ದೀತು ಸಕಲ ಬರಹದೊಳಗೂ!

ವಂದನೆಗಳೊಂದಿಗೆ,
ಶಿರ್ವ ಪುಷ್ಪರಾಜ್ ಚೌಟ
ಬೆಂಗಳೂರು
[ಸಲಹೆ, ಸಹಕಾರ: ಕನ್ನಡ ಬ್ಲಾಗ್ ನಿರ್ವಾಹಕ ತಂಡ]

Thursday, 29 August 2013

ಬರಹವೆಂಬ ನುಡಿತೋರಣಕೆ 'ಶೀರ್ಷಿಕೆ 'ಎಂಬ ಚಿತ್ತಾಕರ್ಷಕ ನಾಮದ ಬಲವೊಂದಿದ್ದರೆ ಸಾಕೇ?

ಇತ್ತೀಚೆಗೆ ಅಂತರ್ಜಾಲ ತಾಣದಲ್ಲಿಯೋ ಅಥವಾ ನಮ್ಮ ಇತರೇ ಮಾಧ್ಯಮಗಳಲ್ಲಿಯೋ ಕಂಡುಬರುತ್ತಿರುವ ಒಂದು ಸೂಕ್ಷ್ಮವನ್ನು ನಾವೆಲ್ಲರೂ ಗಮನಿಸಿರಬಹುದೆಂದಾದರೆ ಅದು ಶೀರ್ಷಿಕೆ. ಯಾವುದೇ ಸುದ್ದಿ ಅಥವಾ ಬರಹಗಾರನೊಬ್ಬನ ರಚನೆಗೆ ಅವರು ಕೊಡುವ ಶೀರ್ಷಿಕೆ ಹೆಚ್ಚು ಮಹತ್ವ ಪಡೆಯುತ್ತಿದೆಯೇನೋ ಎಂದನಿಸುತ್ತಿರಬಹುದು. ಶೀರ್ಷಿಕೆಗೆ ಇರುವ ಮಹತ್ವವನ್ನು ಅಲ್ಲಗಳೆಯದೇ ಮಾತು ಮುಂದುವರಿಸುವುದಾದಲ್ಲಿ, ಒಂದು ಸುದ್ದಿ ಇಲ್ಲವೇ ಬರಹದ ಆಕರ್ಷಣೆಯ 'ಮುಂಡಾಸು' ಅಥವಾ ಕಿರೀಟಪ್ರಾಯವೆಂದರೆ ಅದರ ತಲೆಬರಹ ಅಥವಾ ಶೀರ್ಷಿಕೆ ಯಾನೆ ಶಿರೋನಾಮೆ! ಆದರೆ ಅದು ಆದರ್ಶಪ್ರಾಯವೂ ಆಗಿರಲೇಬೇಕಾದುದು ಅನಿವಾರ್ಯವೂ ಕೂಡ. ಇಲ್ಲವೆಂದಾದಲ್ಲಿ ಕಟ್ಟಿದ ಆ ಮುಂಡಾಸಿನ ಮೌಲ್ಯ, ಬರಹದ ದೇಹಕ್ಕೆ ಒಪ್ಪಿತವಾಗದೆ ಆಭಾಸವಾದೀತು!

ಹಾಗಾದರೆ ಶೀರ್ಷಿಕೆ ಯಾವ ರೀತಿಯಲ್ಲಿರಬೇಕು ಎನ್ನುವ ಕಟ್ಟುಪಾಡೇನಾದರೂ ಇದೆಯೇ ಎಂಬ ಪ್ರಶ್ನೆಗಂತೂ ಉತ್ತರವಿಲ್ಲ. ಸುದ್ದಿಲೋಕವನ್ನು ಈ ನಿಟ್ಟಿನಲ್ಲಿ ಹೊರಗಿಟ್ಟು, ಕೇವಲ ಬರಹಲೋಕಕ್ಕೆ ಸೀಮಿತಗೊಳಿಸಿಕೊಂಡು ಮುಂದಿನ ಮಾತುಗಳನ್ನು ಆಡುವುದಾದರೆ, ಒಂದು ಲೇಖನ ಅಥವಾ ಬರಹದ ಒಳಗಿನ ಪ್ರಸ್ತಾಪ, ವಿಚಾರ, ಚಿಂತನೆಗಳಿಗೆ ಪ್ರತಿಬಿಂಬವಾಗಿ ನಿಲ್ಲಬೇಕಾಗುತ್ತದೆ ತಲೆಬರಹ. ಹನಿಯೋ, ಕವನವೋ, ಕವಿತೆಯೋ, ಕಾವ್ಯವೋ, ಪದ್ಯವೋ, ಹಾಸ್ಯವೋ, ಕಥೆಯೋ, ಗದ್ಯವೋ, ಲೇಖನವೋ, ಕಾದಂಬರಿಯೋ ಒಟ್ಟಿನಲ್ಲಿ ಎಲ್ಲ ಪ್ರಕಾರಗಳೂ ಕೂಡ, ಗುರುತಿಸಿಕೊಳ್ಳುವುದು ತಮ್ಮ ತಲೆಬರಹ, ಶೀರ್ಷಿಕೆಗಳಿಂದ! ಓದುಗ ಪ್ರಪಂಚದ ಮನದಾಳದಲ್ಲಿ ಯಾವುದೇ ಬರಹ/ಪುಸ್ತಕದ ನೆನಪನ್ನು ಅಚ್ಚಳಿಯದಂತೆ ಉಳಿಸುವುದೂ ನಮ್ಮ ನಿಮ್ಮೆಲ್ಲರಿಗಿರುವ ನಾಮದ ಬಲದಂತೆ ಅದರ ಶೀರ್ಷಿಕೆ.

ಮೇಲಿನ ಮಾತನ್ನು ಎತ್ತಿಹಿಡಿಯುತ್ತಾ ಬರಹಕೆ ಮೇರು 'ತಲೆಬರಹ' ಎನ್ನಬಹುದಾದರೂ; ತನ್ನ ಅತೀವ ಪ್ರಭಾವದಿಂದ ಕೆಲವೊಮ್ಮೆ ಬರಹಗಳೊಳಗಿನ ಅಂಶಗಳಿಗಿಂತಲೂ ಹೆಚ್ಚಿನ ಚಿಂತನೆಗೆ, ಒಳತೋಟಿಗೆ ಗ್ರಾಸವಾಗಿ, ಹಲವಾರೂ ಬಾರಿ ಚರ್ಚೆಗೂ, ವಾದ ವಾಗ್ವಾದಗಳಿಗೂ ಅನುವು ಮಾಡಿಕೊಡುವ ಸನ್ನಿವೇಶಗಳನ್ನು ಸೃಷ್ಟಿಸುತ್ತಿದೆಯೆಂದರೆ ತಪ್ಪಾಗಲಾರದು. ಇದಕ್ಕಿಂತಲೂ ಮಿಗಿಲಾಗಿ ಇಕ್ಕಟ್ಟು. ಮುಜುಗರ ಇಲ್ಲವೇ ಬೇಸರ ತರಿಸುವಂಥ ಇನ್ನೊಂದು ಅಂಶವೆಂದರೆ ಶೀರ್ಷಿಕೆ ಹಾಗೂ ಬರಹದ ನಡುವೆ ನಂಟು ಬೆಸೆಯದಿರುವುದು. 

ಪ್ರಸಕ್ತ ದಿನಗಳಲ್ಲಿ ಸರ್ವೇಸಾಮಾನ್ಯವಾದ ಒಂದು ಪ್ರವೃತ್ತಿ ಬೆಳೆದಿದೆ ಎಂದಾದರೆ ಅದು ಬಹು ಆಕರ್ಷಣೀಯವಾದ ಶೀರ್ಷಿಕೆಯೊಂದನ್ನು ಇಟ್ಟು ಎಲ್ಲರನ್ನೂ ಸೆಳೆಯಬಹುದೆಂಬ ಹುಸಿ ಜಾಯಮಾನ. ಬರಹದೊಳಗಿನ ಅಂಶಗಳಿಗೂ ಶಿರೋನಾಮೆಯ ಚೆಂದಕ್ಕೂ ಕುರಿಮಂದೆಯ ನಡುವೆ ಕೋಳಿಮರಿಯೊಂದನ್ನು ಬಿಟ್ಟಂತೆ ಆಗಿ, ಬರಹದ ಲೇಖಕ ಓದುಗನ ತೆಕ್ಕೆಯಲ್ಲಿ ಅಪಹಾಸ್ಯಕ್ಕೆ ಈಡಾಗುವುದು ಖಂಡಿತ. ಉದಾಹರಿಸುತ್ತಾ ಹೇಳುವುದಾದಲ್ಲಿ, 'ನಾಗಾರಾಧನೆ ಮತ್ತು ತುಳುನಾಡು' ಎಂಬ ಶೀರ್ಷಿಕೆಯೊಂದನು ಕೊಟ್ಟ ಲೇಖನವೊಂದರ ಒಳಗೆ "ಮೈಸೂರು ಪ್ರಾಂತ್ಯದಲ್ಲಿ ನಾಗರ ಪಂಚಮಿ''ಯನ್ನು ಹೇಗೆ ಆಚರಿಸುತ್ತಾರೆ ಎಂದು ಬರೆದರೆ, ಓದುಗನಾಗಿ ಯಾರೇ ಬಂದರೂ ಬಹುಶಃ ಬುಸುಗುಡುವ ಸಾಧ್ಯತೆಗಳೇ ಜಾಸ್ತಿ! ಅದಲ್ಲದೇ ಕುತೂಹಲದಿಂದ ಓದಲೂ ಬರುವವರಿಗೆ ನಿರಾಸೆಯೋ, ಅಥವಾ ನಾಗಾರಾಧನೆ ಮತ್ತು ತುಳುನಾಡನ್ನು ಅರಿಯದವನಿಗೆ ತಪ್ಪು ಮಾಹಿತಿ ಕೊಡುವ ತಪ್ಪೆಸಗಿದಂತಾಗುತ್ತದೆ ಬರಹಗಾರ. 

ಒಟ್ಟಿನಲ್ಲಿ, ಬರಹಗಾರ ತಾನು ಹೇಳಲಿಚ್ಚಿಸುವ ಮಾತುಗಳನ್ನು ಕ್ರೋಢೀಕರಿಸಿ, ಬರಹರೂಪಕ್ಕಿಳಿಸಿ ಅದಕ್ಕೊಂದು ಶಿರೋನಾಮೆ ಬಳಸಬೇಕೆನ್ನುವ ನಿರ್ಧಾರಕ್ಕೆ ಬಂದಾಗ ತನ್ನ ಬರಹದ 'ದನಿ'ಯಾಗಿ ಅದನ್ನಾಯ್ದುಕೊಳ್ಳಬೇಕೇ ವಿನಃ, ಒಂದಕ್ಕೊಂದು ಸಂಬಂಧವಿಲ್ಲದ, ಅಜಗಜಾಂತರ ವ್ಯತ್ಯಾಸದ ಶೀರ್ಷಿಕೆಯ ಮೂಲಕವೇ ತನ್ನ ಬರಹಗಳಿಗೆ ಓದುಗ ಮಹಾಶಯನನ್ನು ಆಕರ್ಷಿಸುವ ಮನಸ್ಥಿತಿಗೆ ತಲುಪಬಾರದು. ಆ ದನಿಯೆನ್ನುವುದು ಓದುಗನ ಮನದಲ್ಲಿ ಅನುರಣನವಾಗುವಂತಿರಬೇಕು ಅನುದಿನವೂ, ಅನುಕ್ಷಣವೂ! 

ಹಾಗಾಗಿ ನಾಮದ ಬಲವೊಂದಿದ್ದರೆ ಸಾಕೇ? ಅನುಗುಣವಾದ ವಿಚಾರವೂ ಒಳಗಿರಬೇಕಲ್ಲವೇ?

ವಿಚಾರವಂತಿಕೆಯನ್ನು ರೂಢಿಸಿಕೊಳ್ಳುವಲ್ಲಿ ನಮ್ಮ ಚಿತ್ತವಿರಲಿ ಎನ್ನುತಾ...

ಪ್ರೀತಿಯಿಂದ,
ಪುಷ್ಪರಾಜ್ ಚೌಟ
ಬೆಂಗಳೂರು
[ಸಲಹೆ ಸಹಕಾರ: ಕನ್ನಡ ಬ್ಲಾಗ್ ನಿರ್ವಾಹಕ ತಂಡ]

Wednesday, 31 July 2013

'ಚಿತ್ತಿಮಳಿ ತತ್ತಿ' ಮುತ್ತಾಗಲು ವಿಮರ್ಶೆಯೆಂಬ ಸಿಂಪಿ!

ಆಗ ತಾನೆ ಜೋಗುಳದ ಲಾಲಿಗೆ ತಲೆದೂಗುವ ಕೂಸಿಗೆ ಹೆತ್ತ ತಾಯಿ ಮುಖ್ಯವೋ? ಹೊತ್ತ ತಂದೆ ಮುಖ್ಯವೋ? ಎಂಬ ತರ್ಕವಿದ್ದರೂ ಬೆಳೆಯುವ ಕೂಸಿಗೆ ತಾಯಿಯ ಮಮತೆಯೂ ಅವಶ್ಯ, ತಂದೆಯ ಮಾರ್ಗದರ್ಶನವೂ ಅವಶ್ಯ. ಹೆತ್ತ ತಾಯಿ ಒಲವಲಿ ಮುದ್ದಾಡಿ, ಕೂಸಿಗೊಂದು ಮೂರ್ತ ರೂಪವನ್ನಿತ್ತರೆ, ತಂದೆಯು ಬೆಳೆಯುವ ಮಗುವಿನ ತಪ್ಪು-ಒಪ್ಪುಗಳನ್ನು ತಿದ್ದುತ್ತಾ ಕೂಸಿನ ಆಗು-ಹೋಗುಗಳಲ್ಲಿ ಭಾಗಿಯಾಗುತ್ತಾರೆ. ಸಾಹಿತ್ಯ ಪ್ರಪಂಚವೂ ಇದರಿಂದ ಹೊರತಾಗಿಲ್ಲ. ಕರ್ತೃ, ಕೃತಿಯೊಂದನು ಹೆತ್ತು ತಾಯಿಯಾದರೆ, ಅದರ ಓರೆ-ಕೋರೆಗಳನ್ನು ತಿದ್ದುವ ವಿಮರ್ಶಕರು ತಂದೆಯಂತೆ. ತಂದೆ, ತಾಯಿ ಇಬ್ಬರ ಪೋಷಣೆಯಿಂದಲೇ ಕೂಸು ಸಮೃದ್ಧವಾಗಿ ಬೆಳೆಯುತ್ತಾ ಸಾಗುತ್ತದೆ.

ಸಾಹಿತ್ಯ ಪ್ರಪಂಚದಲ್ಲಿ ವಿಮರ್ಶಾ ಸಾಹಿತ್ಯವನ್ನು ಸೃಜನಾತ್ಮಕ ಸಾಹಿತ್ಯ ಪಂಥದಿಂದ ದೂರವಿರಿಸಲಾಗುತ್ತಿದೆ. ವಿಮರ್ಶಕರೆನಿಸಿಕೊಳ್ಳುವವರು ತಮ್ಮ ತಮ್ಮ ಮೂಗಿನ ನೇರಕ್ಕೆ ಯೋಚಿಸಿ ಇಲ್ಲದಿರುವುದನ್ನು ಇದೆಯೆಂದೋ, ಇರುವುದನ್ನು ಇಲ್ಲವೆಂದೋ ಹೇಳಿಬಿಡುವುದನ್ನು ವಿಮರ್ಶೆ ಎನ್ನುತ್ತಾರೆ ಎಂದು ಕೆಲವರು ಕೊಂಕನಾಡುತ್ತಾರೆ. ಆದರೆ ನಿಜವಾಗಿಯೂ ವಿಮರ್ಶೆ ಎಂದರೇನು? ಅದರ ವಿಸ್ತಾರ ಮಿತಿಗಳು ಎಂತಹುದ್ದು ಎಂಬ ತರ್ಕಗಳಿಗೆ ಮೊದಲು ಉತ್ತರ ಕಂಡುಕೊಳ್ಳಬೇಕು. ವಿಮರ್ಶಕರು ಸೂಕ್ಷ್ಮಗ್ರಾಹಿಗಳಾಗಿರುತ್ತಾರೆ. ಬರಹಗಳೊಳಗಿನ ಸೂಕ್ಷ್ಮತೆಗಳನ್ನು ಪದರು ಪದರಾಗಿ ಬಿಡಿಸುತ್ತಾ ಬರಹವನ್ನು ವಿಶ್ಲೇಷಿಸುವ ಕಾರ್ಯಕ್ಕೆ ವಿಮರ್ಶೆ ಎಂದು ಹೆಸರು.

ಕೃತಿ, ಕರ್ತೃ, ವಿಮರ್ಶಕನ ನಡುವಿನ ಸಂಬಂಧವನ್ನು ತರ್ಕಿಸುವಾಗ ವರಕವಿ ಬೇಂದ್ರೆಯವರ ನಾಕುತಂತಿಯ ಸಾಲುಗಳು ನೆನಪಾಗುತ್ತವೆ. ಬೇಂದ್ರೆ ಬರೆಯುತ್ತಾರೆ;

‘ಚಿತ್ತೀಮಳಿ ತತ್ತೀ ಹಾಕತಿತ್ತು
ಸ್ವಾತಿ ಮುತ್ತಿನೊಳಗ
ಸತ್ತೀsಯೊ ಮಗನs
ಅಂತ ಕೂಗಿದರು
ಸಾವೀ ಮಗಳು, ಭಾವೀ ಮಗಳು
ಕೂಡಿ’

ಮುಂಗಾರು ಮಳೆಯ ಕೊನೆಯ ಪಾದದಲ್ಲಿ ಬರುವುದು ಚಿತ್ತಿ ಮಳೆ. ಇದು ಅನಿಶ್ಚಿತ ಮಳೆ, ಆದುದರಿಂದಲೇ ರೈತಾಪಿ ಜನರು ಈ ಮಳೆಗೆ 'ಕುರುಡು ಚಿತ್ತಿ' ಎಂದೇ ಕರೆಯುತ್ತಾರೆ. ಅದರಂತೆ ಕೃತಿಯ ಹುಟ್ಟೂ ಸಹ ಅನಿಶ್ಚಿತವೇ. ಸ್ವಾತಿ ಮಳೆಯ ಹನಿಯು ಸಿಂಪಿನಲ್ಲಿ ಸೇರಿದಾಗ ಮಾತ್ರ ಮುತ್ತಾಗುವಂತೆ, ಮುತ್ತನ್ನು ನೀಡಿದ ಸಿಂಪಿನ ಹುಳ ಮರಣ ಹೊಂದುವಂತೆ, ಕೃತಿಗೆ ಜನ್ಮ ನೀಡಿದ ಕರ್ತೃ ಆ ಘಳಿಗೆಯಲ್ಲಿ ಗೌಣವಾಗುತ್ತಾನೆ. ಸ್ವಾತಿ ಮಳೆ ಸುರಿದು ಮುತ್ತು ಮೂಡುವ ಸುಸಮಯದಲ್ಲಿ ಸಿಂಪಿನ ಹುಳು ತನ್ನ ಸೂರನ್ನು ಮುತ್ತೊಂದಕ್ಕೆ ಧಾರೆಯಿತ್ತು ಮರಣಿಸಿದಂತೆ., ಕೃತಿಯ ಕರ್ತೃ ಕೃತಿಯ ಸೃಷ್ಟಿಯ ನಂತರ ಅದನ್ನು ಓದುಗರ ಹಾಗೂ ವಿಮರ್ಶಕರ ಕೈಗಿತ್ತು ಸ್ತಬ್ಧವಾಗಿಬಿಡುತ್ತಾರೆ. ಆದುದರಿಂದಲೇ ಸಾವೀ ಮಗಳು ಹಾಗು ಭಾವೀ ಮಗಳು ‘ಸತ್ತೀಯೊ ಮಗನೆ’ ಎಂದು ಕವಿ ಎಚ್ಚರಿಸುತ್ತಾರೆ. ಸಾವೀ ಮಗಳು ಅಂದರೆ ಭೂತದ ಪ್ರತಿನಿಧಿ, ಭಾವೀ ಮಗಳು ಅಂದರೆ ಭವಿಷ್ಯದ ಪ್ರತಿನಿಧಿ.

ಅನುಭವದಿಂದಲೋ, ಅನುಭಾವದಿಂದಲೋ ಒದಗಿದ ವಿಷಯಗಳನ್ನು ಭಾವಗಳನ್ನು ಬರವಣಿಗೆಯ ರೂಪಕ್ಕಿಳಿಸಿ ವಿಷಯಗಳು ಉಸಿರಾಡುವಂತೆ ಮಾಡುವ ಕರ್ತೃವಿನ ಭಾವಸಾರವನ್ನು ಓದುಗ ಕೂಡ ಸವಿದರೆ ಆ ಬರಹ ಸಾರ್ಥಕ್ಯ ಕಂಡಂತೆ. ಕೆಲವೊಮ್ಮೆ ಕೆಲವೊಂದು ಸೂಕ್ಷ್ಮಗಳು ಕವಿಯ ಮತಿಯನ್ನೂ ಮೀರಿ ಕೃತಿಯೊಳಗೆ ಸೇರಿಕೊಂಡಿರುತ್ತವೆ. ಆ ತೆರನಾದ ಸೂಕ್ಷ್ಮಗಳನ್ನು ವಿಮರ್ಶಕರು ಹೆಕ್ಕಿ ತೆಗೆಯುತ್ತಾರೆ. ಆ ವಿಮರ್ಶೆಗಳು ಕೆಲವೊಮ್ಮೆ ಆರೋಗ್ಯಕರ ಚರ್ಚೆಗಳಾಗಿ ಕೃತಿಯ ವಿಸ್ತಾರಗಳನ್ನು ವಿಸ್ತರಿಸುತ್ತಾ ಸಾಗಿದರೆ ಕೆಲವೊಮ್ಮೆ ಮಿತಿ ಮೀರಿ ಹೋಗುತ್ತವೆ. ಅದು ಕರ್ತೃ ಮತ್ತು ವಿಮರ್ಶಕರ ನಡುವಿನ ವೈಮನಸ್ಸುಗಳಿಗೂ ಕಾರಣವಾಗಿರುವ ಉದಾಹರಣೆಗಳೂ ಇವೆ.

ಹೆಸರಾಂತ ಕವಿಯಾಗಿ, ನಾಟಕಕಾರರಾಗಿ, ಅನುವಾದಕರಾಗಿ, ಮಕ್ಕಳ ಗೀತ ರಚನೆಕಾರರಾಗಿ ಗುರುತಿಸಿಕೊಂಡಿರುವ ಎಚ್.ಎಸ್.ವೆಂಕಟೇಶ ಮೂರ್ತಿಯವರು ವಿಮರ್ಶೆಯಿಂದ ತಾವು ಪೇಚಿಗೆ ಸಿಲುಕಿಕೊಂಡ ಬಗೆಯನ್ನು ತಮ್ಮ ’ಮರೆಯುವ ಮೊದಲು ’ ಕೃತಿಯಲ್ಲಿ ಹೇಳಿಕೊಂಡಿದ್ದಾರೆ. ಕಾಳಿದಾಸನ ’ಋತುಸಂಹಾರ’ ಕೃತಿಯನ್ನು ಕನ್ನಡಕ್ಕೆ ’ಋತುವಿಲಾಸ’ವನ್ನಾಗಿಸಿ  ಎಚ್ಚೆಸ್ವಿ ಅನುವಾದಿಸಿದಾಗ, ಅದಕ್ಕೆ ತುಂಬಾ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ’ಋತುವಿಲಾಸ’ಕ್ಕೆ ಬಂದ ವಿಮರ್ಶೆಗಳಲ್ಲಿ, ಗೌರೀಶ ಕಾಯ್ಕಿಣಿಯವರು ಕೃತಿಯನ್ನು ತುಂಬಾ ಇಷ್ಟಪಟ್ಟು, "ಅನುವಾದ ಇಲ್ಲಿ ಒಂದು ಪುನರ್ ಸೃಷ್ಟಿಯಾಗಿದೆ" ಎಂದು ಹೇಳಿದರೆ, ಅತ್ತ ಕೆ.ನರಸಿಂಹ ಮೂರ್ತಿಗಳು "ಅನುವಾದವು ಮೂಲಕ್ಕೆ ವಿಶೇಷ ಗೌರವ ತೋರಿಲ್ಲ" ಎಂದು ಹೇಳಿದರು. ಒಂದೇ ಕೃತಿಗೆ ಎರಡು ವಿಭಿನ್ನ ವಿಮರ್ಶೆಗಳನ್ನು ನೋಡಿದ ಎಚ್ಚೆಸ್ವಿಯವರು. ಯಾವುದನ್ನು ಸ್ವೀಕರಿಸುವುದು? ಯಾವುದನ್ನು ಬಿಡುವುದು? ಎಂದು ಪೇಚಿಗೆ ಸಿಲುಕಿಕೊಂಡರೂ ಏನನ್ನೂ ಮಾತನಾಡದೆ ಮೌನವಾಗಿಯೇ ಎರಡು ವಿಭಿನ್ನ ವಿಮರ್ಶೆಗಳನ್ನು ಸ್ವೀಕರಿಸಿದ್ದರು. ನಂತರ ಋತುವಿಲಾಸಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ಕೊಡಮಾಡುವ 'ಅನುವಾದ ಪುರಸ್ಕಾರ' ದೊರೆತಿತ್ತು!

ವಿಮರ್ಶೆಯ ಹೆಸರಿನಲ್ಲಿ ಕರ್ತೃವಿನ ಬರವಣಿಗೆಯನ್ನು ಪ್ರಶ್ನಿಸುವುದು ಎಷ್ಟು ಸರಿ? ಅವರವರ ಬರವಣಿಗೆ ಅವರವರ ಸ್ವಾತಂತ್ರ್ಯವಲ್ಲವೇ ಎಂದು ಕೆಲವರ ಅಂಬೋಣವಿರಬಹುದು. ಆದರೆ ಯಾವುದೇ ಕೃತಿಗಳು ಸಾರ್ಥಕ್ಯ ಕಾಣುವುದು ಓದುಗರು ಹಾಗೂ ವಿಮರ್ಶಕರಿಂದ, ಆದ್ದರಿಂದ ಕೃತಿ ಪ್ರಕಟಣೆ ಕಂಡ ನಂತರ ಕೃತಿಯ ಕುರಿತು ಅಭಿಪ್ರಾಯಿಸುವುದನ್ನೂ, ತೆಗಳುವುದನ್ನೂ ಯಾರೂ ಪ್ರಶ್ನಿಸುವಂತಿಲ್ಲ. ಏಕೆಂದರೆ ಆ ವಿಮರ್ಶೆಗಳಾಗಲಿ, ಅಭಿಪ್ರಾಯಗಳಾಗಲಿ ವಿಮರ್ಶಕರ ಸ್ವಂತದ್ದು. ಅವರ ಅನುಭವಕ್ಕೆ ಗೋಚರಿಸಿದ್ದನ್ನು ಅವರು ಹೇಳಿಕೊಂಡಿರುವುದರಿಂದ ಅದನ್ನು ಪ್ರಶ್ನಿಸುವುದು ಕರ್ತೃವಿಗೂ ಸಾಧ್ಯವಿಲ್ಲ. ಇಲ್ಲಿ ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಸ್ವತಂತ್ರರು! ಕೃತಿ, ಕರ್ತೃ, ವಿಮರ್ಶಕರು ಒಬ್ಬರನ್ನು ಬಿಟ್ಟು ಒಬ್ಬರಿರಲಾರರು. ವಿಮರ್ಶಕರು ಸಕ್ರಿಯರಾದಂತೆಲ್ಲಾ ಕರ್ತೃಗಳು ಮಾಗುತ್ತಾ ಸಾಗುತ್ತಾರೆ. ಆದ್ದರಿಂದಲೇ ಒಂದಕ್ಕೊಂದು ಬೆಸೆದುಕೊಳ್ಳಬೇಕು. ಮೂರರ ನಡುವೆ ಸಾಮರಸ್ಯ ಒಡಮೂಡಬೇಕು. ಆಗಲೇ ಒಂದು ಸಶಕ್ತ ಸಾಹಿತ್ಯ ಪ್ರಪಂಚ ನಿರ್ಮಾಣ ಸಾಧ್ಯ.

"ವರ್ಣ ಮಾತ್ರಂ ಕಲಿಸಿದಾತಂ ಗುರು'' ಎನ್ನುವಂತೆ ಪ್ರತಿಯೊಂದನ್ನೂ, ಪ್ರತಿಯೊಬ್ಬರಲ್ಲಿಯೂ ಕಲಿಯುತ್ತಾ ಎಲ್ಲರಲ್ಲೂ ಗುರುವನ್ನು ಕಾಣುವವನೇ ಮುಂದೊಮ್ಮೆ ಸರ್ವಜ್ಞನಾಗಿ ಬೆಳೆಯಬಲ್ಲ. ಹೀಗಾದಲ್ಲಿ ಮಾತ್ರ ಯಾವುದೇ ಕೃತಿಯೂ ಚಿತ್ತಿ ಮಳೆಯ ತತ್ತಿಯಾಗಿ, ವಿಮರ್ಶೆಯೆಂಬ ಸಿಂಪಿನೊಳಗೆ ಮುತ್ತಾದೀತು.

ವಂದನೆಗಳೊಂದಿಗೆ,
ಪ್ರಮೋದ್ ಡಿ.ವಿ.
ಮೈಸೂರು
ಕನ್ನಡ ಬ್ಲಾಗ್ ನಿರ್ವಾಹಕ ತಂಡ